ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿ: ಈ ದಿನದಿಂದ ನೋಂದಣಿ ಪ್ರಾರಂಭ

ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರ 4 ಜನರ ಕುಟುಂಬಕ್ಕೆ ವಾರ್ಷಿಕ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿಪಡಿಸಲಾಗಿದೆ.

Written by - Puttaraj K Alur | Last Updated : Oct 13, 2022, 09:28 AM IST
  • ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ಸರ್ಕಾರದಿಂದ ಭರ್ಜರಿ ಕೊಡುಗೆ
  • ಬಜೆಟ್‍ನಲ್ಲಿ ಘೋಷಿಸಿದಂತೆ ರಾಜ್ಯದಲ್ಲಿ ಮತ್ತೆ ಯಶಸ್ವಿನಿ ಯೋಜನೆ ಜಾರಿ
  • ನವೆಂಬರ್ 2ರಿಂದ ಈ ಯೋಜನೆಗೆ ಹೆಸರು ನೋಂದಣಿ ಪ್ರಾರಂಭವಾಗಲಿದೆ
ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿ: ಈ ದಿನದಿಂದ ನೋಂದಣಿ ಪ್ರಾರಂಭ title=
ಯಶಸ್ವಿನಿ ಯೋಜನೆ ಮರು ಜಾರಿ

ಬೆಂಗಳೂರು: ನವೆಂಬರ್ 1ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. 2022-23ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆ ಪರಿಷ್ಕರಿಸಿ ಮರು ಜಾರಿ ಮಾಡುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದ್ದು, ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರ 4 ಜನರ ಕುಟುಂಬಕ್ಕೆ ವಾರ್ಷಿಕ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿಪಡಿಸಲಾಗಿದೆ. 4 ಮಂದಿಗಿಂತ ಹೆಚ್ಚಿನ ಸದಸ್ಯರಿರುವ ಕುಟುಂಬಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ ಹೆಸರು ನೋಂದಾಯಿಸಬಹುದು. ಈ ಯೋಜನೆಯಡಿ ಯಶಸ್ವಿನಿ ನೆಟ್‍ವರ್ಕ್ ಆಸ್ಪತ್ರೆಗಳಲ್ಲಿ 1 ಕುಟುಂಬಕ್ಕೆ 5 ಲಕ್ಷ ರೂ.ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಬಜೆಟ್‍ನಲ್ಲಿ 300 ಕೋಟಿ ರೂ. ಅನುದಾನ ನಿಗದಿಪಡಿಸಿದೆ.

ಇದನ್ನೂ ಓದಿ: ಹುಬ್ಬಳಿಯ ಗದಗ ರಸ್ತೆಯಲ್ಲಿರುವ ರೈಲ್ವೆ ಬ್ರಿಡ್ಜ್ ಮೇಲಿನ ಕಳಪೆ ಕಾಮಗಾರಿ ಜನರ ಕಷ್ಟ ಕೆಳೋರೆ ಇಲ್ಲ

2003ರಲ್ಲಿ ಎಸ್.ಎಂ. ಕೃಷ್ಣ ಸರ್ಕಾರದ ಅವಧಿಯಲ್ಲಿ ಬಡವರ ಪಾಲಿನ ಆರೋಗ್ಯ ಸಂಜೀವಿನಿ ಎಂದೇ ಜನಪ್ರಿಯವಾಗಿದ್ದ ಯಶಸ್ವಿನಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಬಳಿಕ ಸಿದ್ದರಾಮಯ್ಯ ಸರ್ಕಾರದಲ್ಲಿ ರಮೇಶ್​ಕುಮಾರ್ ಆರೋಗ್ಯ ಸಚಿವರಾಗಿದ್ದ 2018ರ ಅವಧಿಯಲ್ಲಿ ಈ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೇ ಯೋಜನೆಗೆ ಈಗ ಮರು ಚಾಲನೆ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ಹಲವಾರು ಬದಲಾವಣೆ ಮಾಡಲಾಗಿದ್ದು, ಹೆಚ್ಚಿನ ಸೌಲಭ್ಯಗಳನ್ನು ಯೋಜನೆ ವ್ಯಾಪ್ತಿಗೆ ತರಲಾಗಿದೆ. ಈ ಮೊದಲಿದ್ದ ಯಶಸ್ವಿನಿ ಕಾರ್ಡ್​ನಲ್ಲಿ ಕೆಲವೇ ರೋಗಗಳಿಗೆ ಚಿಕಿತ್ಸೆ ಸೀಮಿತವಾಗಿತ್ತು. ಆದರೆ ಇದೀಗ 1,650ಕ್ಕೂ ಹೆಚ್ಚು ಕಾಯಿಲೆಗಳನ್ನು ಯೋಜನೆ ವ್ಯಾಪ್ತಿಗೆ ತರಲಾಗಿದೆ.

ಯಶಸ್ವಿನಿ ಕಾರ್ಡ್ ಪಡೆದ 15 ದಿನಗಳ ನಂತರ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಅರ್ಹರಾಗುತ್ತಾರೆ. ಸರ್ಕಾರಿ ಮತ್ತು  ಖಾಸಗಿ ನೌಕರರು ಯಾವುದೇ ವಿಮಾ ಯೋಜನೆಯಲ್ಲಿದ್ದರೆ ಈ ಯೋಜನೆಗೆ ಅರ್ಹರಲ್ಲವೆಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಯೋಜನೆಯಲ್ಲಿ ಹಿಂದೆ ಇದ್ದ ಗರಿಷ್ಠ 2 ಲಕ್ಷ ರೂ. ಮಿತಿಯನ್ನು 5 ಲಕ್ಷ ರೂ.ಗಳಿಗೆ ಏರಿಸಲಾಗಿದೆ. ಆದರೆ 1 ಕುಟುಂಬದಲ್ಲಿ 4 ಜನರು ಸೇರಿದಂತೆ 5 ಲಕ್ಷಕ್ಕೆ ಮೀರದಂತೆ ಮಾತ್ರ ಆಸ್ಪತ್ರೆ ಸೌಲಭ್ಯ ಪಡೆದುಕೊಳ್ಳಬಹುದು. ಕುಟುಂಬದಲ್ಲಿ ಒಬ್ಬರೇ 5 ಲಕ್ಷ ರೂ.ವರೆಗೆ ಸೌಲಭ್ಯ ಪಡೆದುಕೊಳ್ಳಲು ಅವಕಾಶವಿದೆ. 1 ವರ್ಷದೊಳಗೆ ಒಮ್ಮೆ ಮಾತ್ರ ಈ ಸೌಲಭ್ಯ ಪಡೆಯಬಹುದಾಗಿದೆ.

ಇದನ್ನೂ ಓದಿ: ಇಂದಿನಿಂದ ಸಕ್ಕರೆನಾಡಲ್ಲಿ ಸಂಭ್ರಮದ ಮಹಾಕುಂಭ ಮೇಳ ಮಹೋತ್ಸವ

ಯಶಸ್ವಿನಿ ಯೋಜನೆಯ ಫಲಾನುಭವಿಯಾಗಲು ಕನಿಷ್ಠ 3 ತಿಂಗಳು ಮುಂಚಿತವಾಗಿ ಅರ್ಹ ಗ್ರಾಮೀಣ ಸಹಕಾರ ಸಂಘದ ಸದಸ್ಯರಾಗಿರಬೇಕು. ಗ್ರಾಮೀಣ ಸಹಕಾರ ಸಂಘ/ಬ್ಯಾಂಕ್ ಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀ ಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು & ಅವರ ಕುಟುಂಬದ ಎಲ್ಲಾ ಸದಸ್ಯರು ಯೋಜನೆಯ ಫಲಾನುಭವಿಯಾಗಬಹುದು. ಈ ಯೋಜನೆಯಡಿ ಫಲಾನುಭವಿಯಾಗಿರುವ ರೈತರು ಖಾಸಗಿ ಆಸ್ಪತ್ರೆಗೆ ದಾಖಲಾಗಲು ಸರ್ಕಾರಿ ಆಸ್ಪತ್ರೆಯ ಅನುಮತಿಯ ಅಗತ್ಯವಿರುವುದಿಲ್ಲ. ಸಮಯ ಉಳಿತಾಯವಾಗುವುದರೊಂದಿಗೆ ಪರಿಣಾಮಕಾರಿ ಶಸ್ತ್ರಚಿಕಿತ್ಸೆ ಸಿಗಲಿದೆ. ರಾಜ್ಯದ ಬೃಹತ್ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ದೊರೆಯಲಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News