ಬೆಂಗಳೂರು : ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿ ಹಿನ್ನೆಲೆಯಲ್ಲಿ ಯಾರಿಗೆ ಸರ್ಕಾರ ರಚನೆಗೆ ಅವಕಾಶ ಸಿಗಲಿದೆ ಎಂಬ ಕುತೂಹಲಕ್ಕೆ ಈಗ ತೆರೆಬಿದ್ದಿದ್ದು, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸರ್ಕಾರ ರಚಿಸಲು ಮತ್ತು ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ಗೆ ತೀವ್ರ ಮುಖಭಂಗವಾಗಿದ್ದು, ಇಂದು ಬೆಳಿಗ್ಗೆ 9 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದರು.
ಬುಧವಾರ ರಾತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಸಮ್ಮತಿ ಸೂಚಿಸುತ್ತಿದ್ದಂತೆಯೇ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದನ್ನು ತಡೆಯಬೇಕು ಮತ್ತು ಬಹುಮತ ಸಾಬೀತು ಪಡಿಸಿದ ತಮಗೆ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಹೇಳಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿದ ಹಿನ್ನೆಲೆಯಲ್ಲಿ ರಾತ್ರಿಯಿಡೀ ಸಖತ್ ಹೈಡ್ರಾಮ ನಡೆಯಿತು. ನಂತರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಬಹುದೇ ಹೊರತೂ, ತಡೆ ನೀಡುವ ಅಧಿಕಾರ ಸುಪ್ರೀಂಕೋರ್ಟಿಗೆ ಇಲ್ಲ. ರಾಜ್ಯಪಾಲರು ನೀಡಿರುವ ಸೂಚನೆಯಂತೆ ಬಿ.ಎಸ್.ಯಡಿಯೂರಪ್ಪ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಯಾವುದೇ ರೀತಿ ತಡೆ ನೀಡಲು ಸಾಧ್ಯವಿಲ್ಲ. ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿಯಿಂದ ರಾಜ್ಯಪಾಲ ವಜುಭಾಯಿ ವಾಲ ಅವರಿಗೆ ಸಲ್ಲಿಕೆಯಾಗಿರುವ ಶಾಸಕರ ಬೆಂಬಲ ಪತ್ರ(ಮೇ 15 ಹಾಗೂ 16ರಂದು ನೀಡಿದ್ದು) ವನ್ನು ಗುರುವಾರ ಮಧ್ಯಾಹ್ನ 2ಗಂಟೆಯೊಳಗೆ ಸಲ್ಲಿಸುವಂತೆ ತ್ರಿಸದಸ್ಯ ಪೀಠ ಸೂಚಿಸಿದ್ದು, ಕಾಂಗ್ರೆಸ್ -ಜೆಡಿಎಸ್ ಸಲ್ಲಿಸಿರುವ ಅರ್ಜಿ ತಿರಸ್ಕೃತಗೊಂಡಿಲ್ಲ. ಈ ಕುರಿತಂತೆ ಕೇಂದ್ರ ಹಾಗೂ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಶುಕ್ರವಾರ ಬೆಳಗ್ಗೆ 10.30ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.
ಕರ್ನಾಟಕ ವಿಧಾನಸಭೆಯ 224 ಸ್ಥಾನಗಳ ಪೈಕಿ ಮೇ 12 ರಂದು 222 ಸ್ಥಾನಗಳಿಗೆ ಚುನಾವಣೆ ನಡೆದು, ಮೇ 15ರಂದು ಪ್ರಕಟವಾದ ಫಲಿತಾಂಶದ ಪ್ರಕಾರ ಬಿಜೆಪಿ 104, ಕಾಂಗ್ರೆಸ್ 78 ಮತ್ತು ಜೆಡಿಎಸ್ 38 ಮತ್ತು ಇತರರು 2 ಸ್ಥಾನಗಳನ್ನು ಗಳಿಸಿದ್ದರು. ಈ ಮೂಲಕ ಯಾವ ಪಕ್ಷವೂ ಬಹುಮತ ಪಡೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹೊಂದಿ ಸರ್ಕಾರ ರಚನೆಗೆ ಪತ್ರ ಸಲ್ಲಿಸಿದ್ದವು. ಆದರೆ 104 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮಗೇ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಅವರಿಗೆ ಬುಧವಾರ ಪತ್ರ ಸಲ್ಲಿಸಿದ್ದರು.