ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಪ್ರತಿಪಕ್ಷಗಳು ರಾಜಕೀಯ ಹಿತಾಸಕ್ತಿಗಿಂತ ಹೆಚ್ಚಾಗಿ ಜನರ ಹಿತಾಸಕ್ತಿಯನ್ನು ಕಾಪಾಡಲು ಬಳಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಪ್ರತಿಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಂಸತ್ತಿನ ಹೊರಗಡೆ ಮಾತನಾಡಿದ ಪ್ರಧಾನಿ ಎಲ್ಲ ರಾಜಕೀಯ ಪಕ್ಷಗಳು ನಾಯಕರು ಸಾರ್ವಜನಿಕ ಹಿತಾಸಕ್ತಿ ವಿಚಾರಗಳ ಬಗ್ಗೆ ಚರ್ಚಿಸಲು ಮತ್ತು ಅವುಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಪಾಲ್ಗೊಳ್ಳಬೇಕು ಎಂದು ವಿನಂತಿಸಿಕೊಂಡರು.
ಇದೇ ವೇಳೆ ಅಧಿವೇಶನವು ರಚನಾತ್ಮಕವಾಗಿರಲಿದೆ ಎಂದು ಆಶಯ ವ್ಯಕ್ತಪಡಿಸಿದ ಮೋದಿ ಜನರ ಸಮಸ್ಯೆಗಳಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.ಆ ಮೂಲಕ ಈ ಬಾರಿ ಚಳಿಗಾಲದ ಅಧಿವೇಶನವು ನಿಗದಿತ ಸಮಯಕ್ಕಿಂತ ಹೆಚ್ಚಾಗಿ ಕಾರ್ಯನಿರ್ವಹಿಸಲಿದೆ ಎಂದು ಆಶಿಸಿದರು.
"ರಾಜಕೀಯ ಪಕ್ಷಗಳು ಸಾರ್ವಜನಿಕ ಹಿತಾಸಕ್ತಿಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುತ್ತವೆ ಮತ್ತು ಈ ಅಧಿವೇಶನವನ್ನು ಪಕ್ಷದ ಹಿತಾಸಕ್ತಿಗಿಂತ ಹೆಚ್ಚಾಗಿ ಸಾರ್ವಜನಿಕ ಹಿತಾಸಕ್ತಿಗಳಿಗಾಗಿ ಬಳಸಿಕೊಳ್ಳುವ ವಿಶ್ವಾಸ ನನಗೆ ಇದೆ.ಆದ್ದರಿಂದ ಸಂಸತ್ತಿನ ಈ ಚಳಿಗಾಲದ ಅಧಿವೇಶನ ಮುಖ್ಯವಾಗಿದೆ ಮತ್ತು ಪ್ರತಿಯೊಬ್ಬರೂ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮೋದಿ ಹೇಳಿದರು.
ಸಂಸತ್ತಿನ ಚಳಿಗಾಲದ ಅಧಿವೇಶನವು ಮಂಗಳವಾರ ಪ್ರಾರಂಭವಾಗಿ ಜನವರಿ 8 ರಂದು ಕೊನೆಗೊಳ್ಳಲಿದೆ.