ಕೇಂದ್ರದ ಮಾರ್ಗಸೂಚಿ ಸಮಸ್ಯೆಯಿಂದಲೇ ಬರ ಘೋಷಣೆ ವಿಳಂಬ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ -2020ರ ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Puttaraj K Alur | Last Updated : Sep 16, 2023, 04:46 PM IST
  • ಕೇಂದ್ರ ಬರ ನಿರ್ವಹಣೆ ಕೈಪಿಡಿಯಿಂದಲೇ ಬರಗಾಲ ಘೋಷಣೆ ವಿಳಂಬ
  • ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ
  • ಬರಗಾಲ ಘೋಷಣೆ ವಿಳಂಬದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ
ಕೇಂದ್ರದ ಮಾರ್ಗಸೂಚಿ ಸಮಸ್ಯೆಯಿಂದಲೇ ಬರ ಘೋಷಣೆ ವಿಳಂಬ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ   title=
ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ!

ಬೆಂಗಳೂರು: ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ -2020ರ ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು’ ಎಂದು ಹೇಳಿದ್ದಾರೆ.

ಬರ ಘೋಷಣೆಗೆ ಅಗತ್ಯವಾಗಿರುವ ಮಾನದಂಡಗಳನ್ನು ಮರುಪರಿಶೀಲಿಸಬೇಕಾದ ಅನಿವಾರ್ಯತೆಯನ್ನು ವಿವರಿಸಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಹಿಂದೆಯೇ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಇಲ್ಲಿವರೆಗೆ ಉತ್ತರ ಬಂದಿಲ್ಲ. ಮಾನದಂಡಗಳಲ್ಲಿನ ಬದಲಾವಣೆ ಕೇವಲ ಕರ್ನಾಟಕ ರಾಜ್ಯದ ದೃಷ್ಟಿಯಿಂದ ಮಾತ್ರವಲ್ಲ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವಾದ ಭಾರತ ಗಣರಾಜ್ಯದ ಹಿತದೃಷ್ಟಿಯಿಂದಲೂ ಅತ್ಯಗತ್ಯವಾಗಿರುತ್ತದೆ. ಬರಘೋಷಣೆಯ ಮಾನದಂಡಗಳ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ಆ ಕೆಲಸವನ್ನು ಮಾಡದೆ ರಾಜ್ಯದ ಬರ ಪರಿಸ್ಥಿತಿಯ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಸರ್ಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇದನ್ನೂ ಓದಿಪೊಲೀಸರು ದರ್ಪ ಬಿಟ್ಟು ಜನಸ್ನೇಹಿಯಾಗಿ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

‘ಕರ್ನಾಟಕವು ವೈವಿಧ್ಯಮಯವಾದ 14 ಕೃಷಿ-ಹವಾಮಾನ ವಲಯಗಳನ್ನು ಹೊಂದಿದ್ದು, ಪ್ರತಿಯೊಂದು ವಲಯವೂ ತನ್ನದೇ ಆದ ಸವಾಲುಗಳನ್ನು ಹೊಂದಿದೆ. ಪ್ರಸಕ್ತ ಇರುವ ಮಾನದಂಡಗಳು ಎಲ್ಲ ವಲಯಗಳಿಗೂ ಏಕರೂಪವಾಗಿದ್ದು, ಇದು ಬರ ಘೋಷಣೆಗೆ ಅಗತ್ಯವಾದ ಸೂಕ್ಷ್ಮಗಳು ಮತ್ತು ಬದಲಾವಣೆಗಳನ್ನು ಒಳಗೊಳ್ಳುವುದಿಲ್ಲ. ಹಾಗಾಗಿ, ವಲಯವಾರು ನಿರ್ದಿಷ್ಟವಾದ ಸೂಚ್ಯಂಕಗಳನ್ನು ಬರ ಘೋಷಣೆಗೆ ರೂಪಿಸುವುದು ಅಗತ್ಯವಾಗಿರುತ್ತದೆ.

‘ಪ್ರಸಕ್ತ ಬರ ಘೋಷಣೆಯ ಮಾನದಂಡಗಳು ಹವಾಮಾನಶಾಸ್ತ್ರೀಯ, ಕೃಷಿ ಹಾಗೂ ಜಲಶಾಸ್ತ್ರೀಯ ಬರಗಳ ಸೂಚ್ಯಂಕಗಳನ್ನು ತನ್ನ ಮಾನದಂಡಗಳಲ್ಲಿ ಕ್ರೋಢೀಕರಿಸಿಕೊಂಡಿದೆ. ಆದರೆ ಸದಾಕಾಲವೂ ಇದು ಅನ್ವಯಯೋಗ್ಯವೆಂದೇನೂ ಅಲ್ಲ. ಹವಾಮಾನ ಶಾಸ್ತ್ರೀಯ ಬರವನ್ನು ಪರಿಗಣಿಸಿಯೇ ನೋಡುವುದಾದರೆ, ಮುಂಗಾರಿನಲ್ಲಿ ಆರಂಭದಲ್ಲಿ ಮಳೆ ಕೊರತೆ ಇದ್ದದ್ದು ಆನಂತರ ಪ್ರಬಲ ಮಾರುತಗಳ ಪರಿಣಾಮ ಸುಧಾರಿಸಬಹುದು. ಇತ್ತೀಚಿನ ವರ್ಷಗಳಲ್ಲಿ ಇದು ಹೆಚ್ಚು ಘಟಿಸಿದೆ. ಆಗಸ್ಟ್-ಸೆಪ್ಟೆಂಬರ್‌ ಅವಧಿಯಲ್ಲಿ ಮಳೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಮುಂಗಾರು ಆರಂಭದಲ್ಲಿ ಮಳೆ ಕೊರತೆಯ ಕಾರಣಕ್ಕೆ ಬಿತ್ತನೆ ಪ್ರಮಾಣ ಇಳಿಕೆಯಾಗಿರುತ್ತದೆ. ಪರಿಣಾಮ ಬೆಳೆಯಲ್ಲಿ ಕೊರತೆಯುಂಟಾಗಿ ಕೃಷಿ ಆಧರಿತ ಬರದ ಸನ್ನಿವೇಶ ಉದ್ಭವಿಸುತ್ತದೆ. ಅದರೆ ಇದೇ ವೇಳೆ ಸುಧಾರಿಸಿದ ಮಳೆಯ ಮಾರುತಗಳಿಂದಾಗಿ ಹವಾಮಾನ ಮತ್ತು ಜಲಶಾಸ್ತ್ರೀಯ ಬರ ಕಾಣದೆ ಹೋಗಬಹುದು. ಈ ಸೂಕ್ಷ್ಮವನ್ನು ಬರ ಘೋಷಣೆಗೆ ಕಡ್ಡಾಯವಾಗಿರುವ ಮಾನದಂಡಗಳು ಒಳಗೊಳ್ಳಬೇಕಾಗಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನ ನಾಶಗೊಳಿಸಿ ಮನುಸ್ಮೃತಿ ಜಾರಿಗೆ ಹುನ್ನಾರ: ಸಿಎಂ ಸಿದ್ದರಾಮಯ್ಯ

‘ಭಾರತೀಯ ಹವಾಮಾನ ಇಲಾಖೆಯು ದೇಶದಾದ್ಯಂತ ಶೇ10 ಮಳೆಯ ಕೊರತೆಯನ್ನೂ ಸಹ ಬರದ ವರ್ಷವೆಂದು ತೀರ್ಮಾನಿಸಿ ಘೋಷಿಸುತ್ತದೆ. ಆದರೆ ಮಾನದಂಡಗಳ ಪ್ರಕಾರ ರಾಜ್ಯಗಳು ಬರ ಘೋಷಣೆಯನ್ನು ಮಾಡಬೇಕಾದರೆ ಮಳೆಯ ವ್ಯತ್ಯಯ ಸೂಚ್ಯಂಕವು ಶೇ.60ಕ್ಕಿಂತ ಹೆಚ್ಚಿರಬೇಕು ಎನ್ನಲಾಗಿದೆ. ನಾವು ಈ ಎರಡರ ನಡುವಿನ ಅಂತರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿದೆ. ಮಳೆಯ ವ್ಯತ್ಯಯ ಸೂಚ್ಯಂಕವು ಶೇ.20ರಿಂದ ಶೇ.59ರವರೆಗೆ ಇದ್ದರೂ ಅದು ಬರ ಘೋಷಣೆಗೆ ಅಗತ್ಯವಾದ ಕ್ರಿಯಾಕಾರಣ (ಟ್ರಿಗರ್‌) ಅಂಶವೆಂದು ಪರಿಗಣಿಸಬೇಕು. ಶುಷ್ಕ ಅಥವಾ ಒಣ ಹವೆಯ ವಿಚಾರದಲ್ಲಿಯೂ ಕೈಪಿಡಿಯಲ್ಲಿ ಕಠಿಣವಾದ ನಿಯಮಾವಳಿಯಿದೆ. ಬರ ಘೋಷಿಸಲು 3 ವಾರಗಳ ಒಣಹವೆಯನ್ನು ಸೂಚ್ಯಂಕವಾಗಿ ಪರಿಗಣಿಸಲಾಗಿದೆ. ವಿಪರ್ಯಾಸವೆಂದರೆ 2-3 ವಾರಗಳ ಒಣಹವೆ ಕೂಡ ಬೆಳೆಯ ಮೇಲೆ ಗಂಭೀರ ದುಷ್ಪರಿಣಾಮವನ್ನುಂಟು ಮಾಡಿ ಸರಿಪಡಿಸಲಾಗದ ಬೆಳೆಹಾನಿಗೆ ಕಾರಣವಾಗುತ್ತದೆ. ಹೀಗಾಗಿ ಮಳೆ ಕುರಿತಾದ ಸೂಚ್ಯಂಕದಲ್ಲಿ ಒಣಹವೆಯ ಅವಧಿಯನ್ನು 2 ವಾರಗಳಿಗಿಂತ ಕಡಿಮೆ ಎಂದು ಪರಿಗಣಿಸಬೇಕು’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬರ ಘೋಷಣೆಯ ವಿಳಂಬಕ್ಕೆ ಕಾರಣವಾಗುವ ಕೈಪಿಡಿಯಲ್ಲಿರುವ ಮತ್ತೊಂದು ಪ್ರಮುಖ ಮಾನದಂಡವೆಂದರೆ ಅದು ರಾಜ್ಯ ಸರ್ಕಾರವು ‘ಇನ್ನು ಯಾವುದೇ ಬಿತ್ತನೆ ಚಟುವಟಿಕೆ’ ನಡೆಯುವುದಿಲ್ಲವೆಂದು ಬೆಳೆ ಹಂಗಾಮಿನ ವೇಳೆ ಕೇಂದ್ರ ಸರ್ಕಾರಕ್ಕೆ ಕಡ್ಡಾಯವಾಗಿ ಪ್ರಮಾಣಪತ್ರ ಸಲ್ಲಿಸಬೇಕಿರುವುದು. ಇದು ಇನ್‌ಪುಟ್‌ ಸಬ್ಸಿಡಿ ಪರಿಕಲ್ಪನೆಗೆ ವ್ಯತಿರಿಕ್ತವಾಗಿದೆ. ಇನ್‌ಪುಟ್‌ ಸಬ್ಸಿಡಿ ಪರಿಕಲ್ಪನೆಯು ತಕ್ಷಣದ ಪರಿಹಾರ ನೀಡುವ ಮೂಲಕ ಆರ್ಥಿಕ ಚಟುವಟಿಕೆಯನ್ನು ಪುನರಾರಂಭಿಸಬೇಕು ಎನ್ನುತ್ತದೆ. ಆದರೆ ಮೇಲೆ ಹೇಳಿದ ಕೇಂದ್ರದ ನಿಯಮಾವಳಿಯಿಂದಾಗಿ ರಾಜ್ಯ ಸರ್ಕಾರವು ಬರ ಘೋಷಣೆ ಮಾಡಿ ತಕ್ಷಣ ಪರಿಹಾರಕ್ಕೆ ಮುಂದಾಗಲು ಸಾಧ್ಯವಾಗುವುದಿಲ್ಲ. ಬರ ಘೋಷಣೆಗೆ ಪರಿಗಣಿಸಲಾಗುವ ಇತರ ಸೂಚ್ಯಂಕಗಳಾದ ಅಂತರ್ಜಲ ಮಟ್ಟ, ಜೈವಿಕ ಪರಿಸರದ (ಬಯೋಮಾಸ್‌) ಸೂಚ್ಯಂಕಗಳು ಸಹ ಪರಿಶೀಲನೆಗೆ ಒಳಪಡಬೇಕಾಗುತ್ತದೆ. ಅಂತರ್ಜಲದ ಮಟ್ಟ ಕುಸಿಯಲು ಅಥವಾ ಹೆಚ್ಚಳವಾಗಲು ಕನಿಷ್ಠ 2-3 ವಾರಗಳ ಅವಧಿಯ ಅಗತ್ಯವಿದೆ. ಹೀಗಾಗಿ ಇದರ ಪರಿಗಣನೆಯ ವೇಳೆ ವಿವೇಚನೆ ಅಗತ್ಯ. ಅದೇ ರೀತಿ ಉಪಗ್ರಹ ಆಧರಿತ ಎನ್‌ಡಿವಿಐ ಸೂಚ್ಯಂಕವು ಕಳೆಯನ್ನೂ ಸಹ ಹಸಿರು ಜೈವಿಕ ಪರಿಸರವೆಂದು ಪರಿಗಣಿಸುವ ಸಾಧ್ಯತೆ ಇದೆ. ಈ ಅಂಶಗಳು ಬರ ಘೋಷಣೆಗೆ ಅಗತ್ಯವಾದ ಸೂಚ್ಯಂಕಗಳ ಪರಿಶೀಲನೆಯಲ್ಲಿ ನೇತ್ಯಾತ್ಮಕ ಪರಿಣಾಮಕ್ಕೆ ಕಾರಣವಾಗುತ್ತವೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News