ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ.
ವಿಧಾನಸೌಧದ ಸಮ್ಮೆಳನ ಸಭಾಂಗಣದಲ್ಲಿ ಆರಂಭವಾಗಿರುವ ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರ ಬಜೆಟ್ ತಾರತಮ್ಯ, ಸಚಿವರಿಗೆ ಕೊಟ್ಟಿರುವ ಇಲಾಖಾವಾರು ಅನುದಾನ, ಕೈ ಶಾಸಕರ ಕ್ಷೇತ್ರದಲ್ಲಿನ ಕಾಮಗಾರಿಗಳು, ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಪ್ರಮುಖವಾಗಿ ಜಿಅಲ್ಪಸಂಖ್ಯಾತರ ತಾರತಮ್ಯ, ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಅಲ್ಲದೆ, ಸಚಿವ ಸಂಪುಟ ವಿಸ್ತರಣೆ ಸಂದರ್ಭ ಸಚಿವ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನ ಹಂಚಿಕೆ ಕುರಿತೂ ಚರ್ಚೆ ನಡೆಯಲಿದ್ದು, ಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್ಗೆ ಬಿಟ್ಟುಕೊಡುವುದರೊಂದಿಗೆ, ಸಭಾನಾಯಕಿಯಾಗಿ ಜಯಮಾಲಾರನ್ನು ಆಯ್ಕೆ ಮಾಡಿದ ವಿಚಾರವಾಗಿ ಅಸಮಧಾನಗೊಂಡ ಪರಿಷತ್ ಸದಸ್ಯರನ್ನು ಸಮಾಧಾನ ಮಾಡುವ ಪ್ರಯತ್ನವೂ ಇಂದು ನಡೆಯಲಿದೆ ಎನ್ನಲಾಗಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಆರಂಭವಾಗಿರುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಸೇರಿದಂತೆ ಅನೇಕ ನಾಯಕರು ಮತ್ತು ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.