ಹನುಮಧ್ವಜ ಹಾರಿಸುವವರೆಗೂ ಹೋರಾಟ, ಹನುಮನ ಪರ ಇಡೀ ಮಂಡ್ಯ ನಿಲ್ಲಲಿದೆ: ಆರ್.ಅಶೋಕ

ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ಇದು ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. 

Written by - Prashobh Devanahalli | Last Updated : Jan 30, 2024, 06:31 PM IST
  • ಕಾಂಗ್ರೆಸ್ ನಾಯಕರ ಹೃದಯದಲ್ಲಿ ಕೇವಲ ಟಿಪ್ಪು ಮಾತ್ರ, ಅಲ್ಲಿ ಶ್ರೀರಾಮ, ಹನುಮ ಇಲ್ಲ
  • ಹನುಮಧ್ವಜ ಹಾರಿಸುವವರೆಗೂ ಹೋರಾಟ, ಹನುಮನ ಪರ ಇಡೀ ಮಂಡ್ಯ ನಿಲ್ಲಲಿದೆ
  • ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ
ಹನುಮಧ್ವಜ ಹಾರಿಸುವವರೆಗೂ ಹೋರಾಟ, ಹನುಮನ ಪರ ಇಡೀ ಮಂಡ್ಯ ನಿಲ್ಲಲಿದೆ: ಆರ್.ಅಶೋಕ title=

ಬೆಂಗಳೂರು: ಮಂಡ್ಯದ ಕೆರೆಗೋಡಿನಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ಇದು ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ನೆಹರು ಕಾಲದಿಂದಲೂ ರಾಮನ ಮೇಲೆ ದ್ವೇಷ ಇದೆ. ಆದರೀಗ ಹನುಮನ ಬಗ್ಗೆ ದ್ವೇಷ ಶುರುವಾಗಿದೆ ಎಂದರು.

ಕೆರೆಗೋಡಿನಲ್ಲಿ 20-30 ವರ್ಷಗಳಿಂದ ಹನುಮ ಧ್ವಜ ಹಾರಿಸಲಾಗುತ್ತಿದೆ. ಯಾವುದೇ ಮಸೀದಿಯ ಬಳಿ ಧ್ವಜ ಹಾರಿಸಿಲ್ಲ. ಪ್ರತಿ ಮನೆಯವರಿಂದ ದೇಣಿಗೆ ಸಂಗ್ರಹಿಸಿ 6 ಲಕ್ಷ ರೂ. ಖರ್ಚು ಮಾಡಿ 108 ಅಡಿ ಸ್ತಂಭ ನಿರ್ಮಿಸಲಾಗಿದೆ. ಇಡೀ ವರ್ಷ ಅಲ್ಲಿ ಹನುಮ ಧ್ವಜ ಹಾರಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜ ಹಾರಿಸಲಾಗುತ್ತದೆ. ಹನುಮನ ನಾಡಿನಲ್ಲಿ ಹನುಮ ಧ್ವಜ ಹಾರಿಸಲು ಸರ್ಕಾರ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಾಲ್ಡೀವ್ಸ್ ನೂತನ ಅಧ್ಯಕ್ಷ ಅಧಿಕಾರ ಕಳೆದುಕೊಳ್ಳುವ ದಿನ ಸನ್ನಿಹಿತವೇ? 

ಸರ್ಕಾರಕ್ಕೆ ಮರ್ಯಾದೆ ಇದ್ದರೆ ಅವರ ಅನುದಾನದಿಂದ ಕಂಬ ನಿರ್ಮಿಸಿ ಧ್ವಜ ಹಾರಿಸಬೇಕಿತ್ತು. ಹನುಮನನ್ನು ಹೇಗೆ ವಿರೋಧ ಮಾಡಬೇಕೆಂದು ಚಿಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರವೆಂದರೇನೆ ಶಕುನಿ ಸರ್ಕಾರ. ಹನುಮ ಧ್ವಜವನ್ನು ತೆಗೆಸಲು ಸರ್ಕಾರ ರಾಷ್ಟ್ರಧ್ವಜವನ್ನು ಬಳಕೆ ಮಾಡಿದೆ. ಮೊದಲು ಯಾವ ಧ್ವಜವಿತ್ತೋ ಅದೇ ಧ್ವಜವನ್ನು ಅಲ್ಲಿ ಹಾರಿಸಬೇಕು ಎಂದು ಒತ್ತಾಯಿಸಿದರು.

ಈ ಹೋರಾಟ ಇಡೀ ಮಂಡ್ಯ ಜಿಲ್ಲೆಯ ಮನೆಗಳನ್ನು ತಲುಪಲಿದೆ. ಇದು ಅಕ್ರಮವಾಗಿದ್ದರೆ ನೋಟಿಸ್ ಜಾರಿ ಮಾಡಬೇಕಿತ್ತು. ಅದು ನ್ಯಾಯಾಲಯದಲ್ಲಾದರೂ ತೀರ್ಮಾನ ಆಗಬೇಕಿತ್ತು. ಅದನ್ನು ಬಿಟ್ಟು ಲೋಕಸಭಾ ಚುನಾವಣಾ ಲಾಭಕ್ಕಾಗಿ ಹೀಗೆ ಮಾಡಲಾಗುತ್ತಿದೆ ಎಂದು ಹೇಳುವುದು ಸರಿಯಲ್ಲ. ಇಲ್ಲಿ ಧ್ವಜ ಹಾರಿಸುವುದು ಮಂಡ್ಯ ಜಿಲ್ಲೆಯ ಜನರಿಗೂ ಗೊತ್ತಿರಲಿಲ್ಲ ಎಂದಮೇಲೆ ಇದರಿಂದ ಬಿಜೆಪಿಗೆ ಯಾವ ರಾಜಕೀಯ ಲಾಭ ಬರುತ್ತದೆ ಎಂದು ಪ್ರಶ್ನಿಸಿದರು.

ಕಾಶ್ಮೀರದ ಲಾಲ್ ಚೌಕ್ ನಲ್ಲಿ ರಾಷ್ಟ್ರಧ್ವಜ ಹಾರಿಸುವಂತೆ ಪಾಕಿಸ್ತಾನ ಸವಾಲು ಹಾಕಿತ್ತು. ಅನೇಕ ಬಿಜೆಪಿ ನಾಯಕರು ಹೋಗಿ ರಾಷ್ಟ್ರಧ್ವಜ ಹಾರಿಸಿದ್ದಕ್ಕೆ ಕಾಂಗ್ರೆಸ್ ಸರ್ಕಾರ ಲಾಠಿ ಚಾರ್ಜ್ ಮಾಡಿತ್ತು. ಆಗ ರಾಷ್ಟ್ರಧ್ವಜ ಹಾರಿಸಲು ಬಾರದವರು ಈಗ ದೇಶಾಭಿಮಾನ ತೋರುತ್ತಿದ್ದಾರೆ. ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: "3ಎ ಮೀಸಲಾತಿ ಸಿಂಹಪಾಲು ಯಾರ ಪಾಲಾಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ" 

ಸರ್ಕಾರ ನಕಲಿ ದಾಖಲೆಗಳನ್ನು ಬಿಡುಗಡೆ ಮಾಡಿದೆ. ಸ್ತಂಭ ಅಳವಡಿಸಿ ಹನುಮ ಧ್ವಜ ಹಾರಿಸಿದಾಗಲೇ ಸರ್ಕಾರ ಕ್ರಮ ವಹಿಸಬೇಕಿತ್ತು. ಆದರೆ ಕಾಂಗ್ರೆಸ್ ‌ನಾಯಕರನ್ನು ಕಾರ್ಯಕ್ರಮಕ್ಕೆ ಕರೆದಿಲ್ಲ ಎನ್ನುವ ಕಾರಣಕ್ಕೆ ಧ್ವಜ ಇಳಿಸಲಾಗಿದೆ. ಇದು ಸಂಪೂರ್ಣ ರಾಜಕೀಯದ ಸಂಗತಿ. ಸರ್ಕಾರ ಹೀಗೆಯೇ ಕೆದಕುತ್ತಿದ್ದರೆ ಇದು ದೇಶವ್ಯಾಪಿ ಹೋರಾಟವಾಗಲಿದೆ. ಕಾಂಗ್ರೆಸ್ ನ ಹೃದಯವನ್ನು ನಿರ್ಮಾ ಸೋಪು ಹಾಕಿ ತೊಳೆದರೂ ಅಲ್ಲಿ ಶ್ರೀ ರಾಮ ಬರುವುದಿಲ್ಲ. ಅಲ್ಲಿ ಟಿಪ್ಪು ಸುಲ್ತಾನನೇ ಇರುತ್ತಾನೆ ಎಂದರು.

ಹನುಮಂತ ಹಗ್ಗ ಕಡಿಯುವಾಗ ಪೂಜಾರಿ ಶ್ಯಾವಿಗೆ ಕೇಳಿದ ಎಂಬಂತೆ, ಕಷ್ಟದಲ್ಲಿರುವ ಜನರು ಹಣ ಹಾಕಿ ನಿರ್ಮಿಸಿದ ಸ್ತಂಭವನ್ನು ಕಾಂಗ್ರೆಸ್ ನಾಶ ಮಾಡಲು ಮುಂದಾಗಿದ್ದಾರೆ. ನೀವು ಹಿಂದೂಗಳೇ ಆಗಿದ್ದಲ್ಲಿ, ಅಲ್ಲಿ ಹನುಮ ಧ್ವಜ ಇರಬೇಕೋ ಬೇಡವೋ ಎಂದು ಜನರ ಬಳಿ ಮತ ಹಾಕಿಸಲಿ. ಎಲ್ಲರೂ ಹನುಮ ಧ್ವಜ ಬೇಕೆಂದೇ ಆಗ್ರಹಿಸಲಿದ್ದಾರೆ. ದ್ವೇಷದ ರಾಜಕಾರಣ, ವೋಟಿನ ರಾಜಕಾರಣವನ್ನು ಮೊದಲು ಬಿಡಿ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News