ಶಿಕಾರಿಪುರದಲ್ಲಿ ಯಡಿಯೂರಪ್ಪಗೆ ಗೆಲುವು
ಬಿಜೆಪಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ವ ಕ್ಷೇತ್ರ ಶಿಕಾರಿಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು : ಚುನಾವಣೆ ಆರಂಭದಿಂದಲೂ ಗೆಲುವಿನ ಬಾವುಟ ಹಾರಿಸುವುದಾಗಿ ಭವಿಷ್ಯ ನುಡಿಯುತ್ತಿದ್ದ ಬಿಜೆಪಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ವ ಕ್ಷೇತ್ರ ಶಿಕಾರಿಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
ರಾಜ್ಯಾದ್ಯಂತ ಬಿಜೆಪಿ ಅಧಿಕಾರಕ್ಕೆ ತರುವ ಛಲದಿಂದ ಪ್ರಚಾರ ಕೈಗೊಂಡಿದ್ದ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ಕೆಲವೇ ದಿನಗಳ ಪ್ರಚಾರ ಮಾಡಿದ್ದರು. ಆದರೂ, ಆ ಕ್ಷೇತ್ರದಲ್ಲಿ ಯಡಿಯೂರಪ್ಪ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳಿಂದಾಗಿ ಅಲ್ಲಿಯ ಜನತೆ ಮತ್ತೆ ಯಡಿಯೂರಪ್ಪ ಅವರನ್ನು ಗೆಲ್ಲಿಸಿದ್ದಾರೆ. ಈ ಬಗ್ಗೆ ಬಿಜೆಪಿ ಅಭಿನಂದನೆ ಸಲ್ಲಿಸಿದ್ದು, ರಾಜ್ಯದಲ್ಲಿ ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿದೆ.
ಇದರ ಜೊತೆಗೇ ವಿಧಾನಸಭೆ ಚುನಾವಣೆ ಮತಎಣಿಕೆಯಲ್ಲಿ ಬಿಜೆಪಿ 120ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಸರ್ಕಾರ ರಚನೆ ಸಿದ್ಧತೆಯಲ್ಲಿದೆ. ಈಗಾಗಲೇ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಗೆಲುವಿನ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
'ಬಿಜೆಪಿ ಪರವಾದ ಅಲೆ ಕರ್ನಾಟಕದಲ್ಲಿದೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲೂ ಅತಂತ್ರ ಫಲಿತಾಂಶ ಬರುವುದಿಲ್ಲ. ಬಿಜೆಪಿ ಸರ್ಕಾರ ರಚನೆ ಮಾಡಲಿದೆ' ಎಂದು ಯಡಿಯೂರಪ್ಪ ಈ ಹಿಂದೆ ಭವಿಷ್ಯ ನುಡಿದಿದ್ದರು. ಇದೀಗ ಯಡಿಯೂರಪ್ಪ ಅವರ ಮಾತು ನಿಜವಾಗುವ ಎಲ್ಲಾ ಲಕ್ಷಣಗಳೂ ಕಾಣುತ್ತಿದ್ದು, ಯಡಿಯೂರಪ್ಪ ಹೇಳಿದ ಯಾವ ಮಾತೂ ಸುಳ್ಳಾಗುವುದಿಲ್ಲ, ಅವರ ಲೆಕ್ಕಾಚಾರ ತಲೆಕೆಳಗಾಗಲ್ಲ ಎಂಬ ಮಾತು ಮತ್ತೊಮ್ಮೆ ಸ್ಪಷ್ಟವಾಗಲಿದೆ.