ಬೆಂಗಳೂರು: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿ ಹಿನ್ನೆಲೆಯಲ್ಲಿ ಯಾರಿಗೆ ಸರ್ಕಾರ ರಚನೆಗೆ ಅವಕಾಶ ಸಿಗಲಿದೆ ಎಂಬ ಕುತೂಹಲಕ್ಕೆ ಈಗ ತೆರೆಬಿದ್ದಿದೆ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾದ ಬಿ.ಎಸ್. ಯಡಿಯೂರಪ್ಪ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 


COMMERCIAL BREAK
SCROLL TO CONTINUE READING

ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಫೆಬ್ರವರಿ 27, 1943 ರಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಜನಿಸಿದರು. ವಿದ್ಯಾಭ್ಯಾಸದ ನಂತರ 1965ರಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ನೇಮಕಗೊಂಡರು. ಆನಂತರದಲ್ಲಿ ಕೆಲಸವನ್ನು ತೊರೆದು ಶಿಕಾರಿಪುರದಲ್ಲಿರುವ ಅವರ ಮಾವನ ರೈಸ್ ಮಿಲ್ನಲ್ಲಿ ಕೆಲಸಕ್ಕೆ ಸೇರಿದರು. 70ರ ದಶಕದಲ್ಲಿ ರಾಜಕೀಯ ಪ್ರವೇಶ ಮಾಡಿದರು. ನಂತರ ಕರ್ನಾಟಕದ ವಿಧಾನ ಸಭಾ ಕ್ಷೇತ್ರದಿಂದ ಮತ್ತು ಲೋಕಸಭಾ ಕ್ಷೇತ್ರಗಳಿಗೆ ಹಲವುಬಾರಿ ಆಯ್ಕೆಯಾಗಿದ್ದಾರೆ. 


ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ.ಕುಮಾರ ಸ್ವಾಮಿ ನಂತರ ನವೆಂಬರ್ 12, 2007ರಲ್ಲಿ  ಬಿ.ಎಸ್.ಯಡಿಯೂರಪ್ಪ ಕೇವಲ 7 ದಿನಗಳ ಕಾಲ ಮುಖ್ಯಮಂತ್ರಿಗಳಾಗಿದ್ದರು. 2008ರಲ್ಲಿ ನಡೆದ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಿತು.  ಮೇ 30, 2008 ರಂದು ಬಿ.ಎಸ್.ಯಡಿಯೂರಪ್ಪ ಮತ್ತೆ ಅಧಿಕಾರವಹಿಸಿಕೊಂಡರು. ಈ ಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎನಿಸಿಕೊಂಡರು.


ಇದೀಗ ಮತ್ತೆ ರಾಜ್ಯದಲ್ಲಿ ಮೂರನೇ ಬಾರಿಗೆ ಬಿ.ಎಸ್. ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಅದರ ಲೈವ್ ವಿಡಿಯೋ ನಿಮಗಾಗಿ...