)
Vijay Rally Stampede : ನಟ, ರಾಜಕಾರಣಿ ಮತ್ತು ಟಿವಿಕೆ ಮುಖ್ಯಸ್ಥ ವಿಜಯ್ ರ್ಯಾಲಿ ವೇಳೆ ನಡೆದ ಅವಘಡದಲ್ಲಿ ಮೃತ ಪಟ್ಟ 39 ಕುಟುಂಬಗಳಿಗೆ ತಲಾ 20 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೆ, ಈ ಘಟನೆಯಲ್ಲಿ ಗಾಯಗೊಂಡ ಸುಮಾರು 100 ಜನರಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ.
ಹೌದು.. ಈ ಕುರಿತು ತಮ್ಮ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಜಯ್, ಈ ದುರಂತದಿಂದ ತಾನು ತೀವ್ರವಾಗಿ ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ, ಜೀವಹಾನಿಯಿಂದ ಮಾತುಗಳು ಉಳಿಯುತ್ತಿಲ್ಲ ಮತ್ತು ದುಃಖದಲ್ಲಿ ಮುಳುಗಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೆ, ನನ್ನ ಹೃದಯ ಮತ್ತು ಮನಸ್ಸು ಭಾರವಾಗಿದೆ, ನಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಅಪಾರ ದುಃಖದ ಮಧ್ಯೆ, ನನ್ನ ಹೃದಯ ಅನುಭವಿಸುತ್ತಿರುವ ನೋವನ್ನು ವ್ಯಕ್ತಪಡಿಸಲು ಪದಗಳು ಸಿಗುತ್ತಿಲ್ಲ. ನನ್ನ ಕಣ್ಣುಗಳು ಮತ್ತು ಮನಸ್ಸು ದುಃಖದಿಂದ ತುಂಬಿ ಹೋಗಿವೆ ಎಂದು ವಿಜಯ್ ವಿಷಾದ ವ್ಯಕ್ತಪಡಿಸಿದ್ದಾರೆ.
ಇದು ನಿಜಕ್ಕೂ ನಮಗೆ ತುಂಬಲಾರದ ನಷ್ಟ. ಯಾರು ಸಾಂತ್ವನದ ಮಾತುಗಳನ್ನಾಡಿದರೂ, ನಮ್ಮ ಪ್ರೀತಿಪಾತ್ರರ ನಷ್ಟ ಅಸಹನೀಯ. ಆದರೂ, ನಿಮ್ಮ ಕುಟುಂಬದ ಸದಸ್ಯನಾಗಿ, ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ 20 ಲಕ್ಷ ರೂಪಾಯಿಗಳನ್ನು ಮತ್ತು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ 2 ಲಕ್ಷ ರೂಪಾಯಿಗಳನ್ನು ನೀಡಲು ನಾನು ಉದ್ದೇಶಿಸಿದ್ದೇನೆ. ಈ ಸಂದರ್ಭದಲ್ಲಿ ಈ ಮೊತ್ತವು ದೊಡ್ಡದಲ್ಲ. ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯ" ಎಂದು ವಿಜಯ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಸಿಎಂ ಸ್ಟಾಲೀನ್ ನೇರವು : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಕರೂರಿಗೆ ಭೇಟಿ ನೀಡಿ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದರು. ಅಲ್ಲದೆ, ಇದೇ ವೇಳೆ ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಮತ್ತು ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರವನ್ನು ಘೋಷಿಸಿದರು. ಘಟನೆಯ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಅರುಣಾ ಜಗದೀಶನ್ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿದರು.