ಭೋಪಾಲ್: ಇತ್ತೀಚಿಗೆ ಹಲವು ವಿವಾದಾತ್ಮಕ ಹೇಳಿಕೆಗಳ ಮೂಲಕ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದ ಭೋಪಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್, ಇದೀಗ 'ಆತ್ಮಾವಲೋಕನಕ್ಕಾಗಿ ನಾನು 63 ತಾಸುಗಳ ಮೌನ ವ್ರತ ಆಚರಿಸುತ್ತಿದ್ದೇನೆ' ಎಂದು ಹೇಳಿದ್ದಾರೆ.
2008ರ ಮಾಲೇಗಾಂವ್ ಬ್ಲಾಸ್ಟ್ ಆರೋಪಿಗಳಲ್ಲಿ ಒಬ್ಬರಾಗಿರುವ ಸಾಧ್ವಿ ಪ್ರಜ್ಞಾ ಸಿಂಗ್ ಅವರು ತಾವು ನೀಡಿರುವ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದು, ಅದಕ್ಕಾಗಿ ಆತ್ಮಾವಲೋಕನ ಮಾಡಿಕೊಳ್ಳಲು ಬಯಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
"ಚುನಾವಣೆ ಪ್ರಕ್ರಿಯೆಗಳು ಮುಗಿದಿದ್ದು ಈಗ ಆತ್ಮಾವಲೋಕನ ಮಾಡಿಕೊಳ್ಳುವ ಸಮಯ ಒದಗಿ ಬಂದಿದೆ. ನನ್ನ ಹೇಳಿಕೆಗಳಿಂದ ದೇಶ ಪ್ರೇಮಿಗಳಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ. ಅದಕ್ಕಾಗಿ ಕಠಿಣ ಮೌನ ವ್ರತವನ್ನು ಆಚರಿಸುತ್ತೇನೆ" ಎಂದು ಪ್ರಗ್ಯಾ ಸಿಂಗ್ ಟ್ವೀಟ್ ಮೂಲಕ ಪ್ರತಿಜ್ಞೆ ಮಾಡಿದ್ದಾರೆ.
चुनावी प्रक्रियाओ के उपरान्त अब समय है चिंतन मनन का,
इस दौरान मेरे शब्दों से समस्त देशभक्तों को यदि ठेस पहुंची है तो मैं क्षमा प्रार्थी हूँ और सार्वजनिक जीवन की मर्यादा के अंतर्गत प्रयश्चित हेतु 21 प्रहर के मौन व कठोर तपस्यारत हो रही हूं।
हरिः ॐ— Sadhvi Pragya Official (@SadhviPragya_MP) May 20, 2019
ಮಹಾತ್ಮ ಗಾಂಧಿಯನ್ನು ಕೊಂದ ನಾಥುರಾಮ್ ಗೋಡ್ಸೆ ಒಬ್ಬ ದೇಶಭಕ್ತ ಎಂಬ ಹೇಳಿಕೆ ನೀಡಿ ಭಾರೀ ವಿವಾದ ಸೃಷ್ಟಿಸಿದ್ದ ಸಾಧ್ವಿ ಪ್ರಗ್ಯಾ ಸಿಂಗ್, ಬಳಿಕ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದರು. ಆದರೆ ಸ್ವತಃ ಪ್ರಧಾನಿ ಮೋದಿ ಅವರೇ ಮಹಾತ್ಮ ಗಾಂಧೀಜಿಯನ್ನು ಅವಮಾನಿಸಿದ ಪ್ರಗ್ಯಾ ಸಿಂಗ್ ರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದಿದ್ದರು.