ನವದೆಹಲಿ: ಬಹುನಿರೀಕ್ಷಿತ ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅಯೋಧ್ಯೆ ಪ್ರಕರಣದ ತನಿಖೆ ವಿಚಾರದಲ್ಲಿ ಮುಂದಿನ ಆದೇಶವನ್ನು ಜನವರಿ 10ರಂದು ನೀಡಲಾಗುವುದು ಎಂದು ಹೇಳಿದೆ. ಈ ವೇಳೆ ತ್ರಿಸದಸ್ಯ ಪೀಠ ರಚನೆ ಮಾಡಿ, ಈ ಎಲ್ಲ ಅರ್ಜಿಗಳನ್ನು ಅದೇ ಪೀಠಕ್ಕೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಅಯೋಧ್ಯೆ ವಿವಾದದ ದೈನಂದಿನ ಮತ್ತು ಆರಂಭಿಕ ವಿಚಾರಣೆಗಾಗಿ ಬೇಡಿಕೆ ಕೋರಿದ್ದ ವಕೀಲರು ಸಲ್ಲಿಸಿದ ಪಿಐಎಲ್ ಅನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.


ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾ. ಎಸ್.ಕೆ.ಕೌಲ್ ಅವರಿರುವ ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಬೇಕಿತ್ತು. ಕಳೆದ ಅಕ್ಟೋಬರ್ ನಲ್ಲೇ ತ್ವರಿತವಾಗಿ ವಿಚಾರಣೆ ನಡೆಸುವಂತೆ ಅರ್ಜಿ ಸಲ್ಲಿಸಲಾಗಿತ್ತು.


2010ರಲ್ಲಿ ಈ ವಿವಾದದ ವಿಚಾರಣೆ ನಡೆಸಿದ್ದ ಅಲಹಾಬಾದ್ ಹೈಕೋರ್ಟ್ ಈ 2.77 ಎಕರೆ ವಿವಾದಿತ ಪ್ರದೇಶವನ್ನು ರಾಮಲಲ್ಲಾ, ಸುನ್ನಿ ವಕ್ಫ್ ಬೋರ್ಡ್ ಮತ್ತು ನಿರ್ಮೋಹಿ ಅಖರ ಈ ಮೂವರಿಗೆ ಸಮನಾಗಿ ಹಂಚಿಕೆ ಮಾಡಿ ತೀರ್ಪು ಕೊಟ್ಟಿತ್ತು. ಆ ತೀರ್ಪನ್ನು ಪ್ರಶ್ನಿಸಿ 14 ಮೇಲ್ಮನವಿಗಳು ಸುಪ್ರೀಂ ಕೋರ್ಟ್​ನಲ್ಲಿ ಸಲ್ಲಿಕೆಯಾಗಿದ್ದವು. ಇದೀಗ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಮೂವರು ನ್ಯಾಯಾಧೀಶರರನ್ನು ಒಳಗೊಂಡ ಪೀಠವನ್ನು ರಚಿಸುವ ಸಾಧ್ಯತೆ ಇದೆ.


ಅ.29ರಂದು ಪ್ರಕರಣದ ತ್ವರಿತವಿಚಾರಣೆಗೆ ನಿರಾಕರಿಸಿದ್ದ ಕೋರ್ಟ್ ವಿಚಾರಣೆಯನ್ನು ಜನವರಿ 4ಕ್ಕೆ ಮುಂದೂಡಿತ್ತು. ವಿವಾದ ಸಂಬಂಧದ ವಿಚಾರಣೆ ಜನವರಿಗೆ ಮುಂದೂಡಲ್ಪಟ್ಟ ಬೆನ್ನಲ್ಲೇ ರಾಮಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ಕೇಂದ್ರದ ಮೇಲೆ ಒತ್ತಡಗಳು ಹೆಚ್ಚಾಗುತ್ತಾ ಬಂದಿದ್ದವು. ಅಲ್ಲದೆ, ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆ ಅಥವಾ ಕಾನೂನು ಜಾರಿ ಮಾಡಲು ಸರ್ಕಾರವನ್ನು ಒತ್ತಾಯಿಸಿದ್ದವು. ಈ ವಿಚಾರ ಬಿಜೆಪಿ ಹಾಗೂ ಶಿವಸೇನೆ ನಡುವೆ ವಾಕ್ಸಮರಕ್ಕೆ ಸಹ ಕಾರಣವಾಗಿತ್ತು.