ನವದೆಹಲಿ: ದಕ್ಷಿಣ ಭಾರತದ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರಿಕೆಯ ವಿರುದ್ಧ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡಿನಲ್ಲಿ ಕೆಲ ಬದಲಾವಣೆಗಳನ್ನು ತರಲು ಕೇಂದ್ರ ಸರ್ಕಾರ ಸೋಮವಾರ ನಿರ್ಧರಿಸಿದೆ. 


COMMERCIAL BREAK
SCROLL TO CONTINUE READING

ಈ ಹಿಂದೆ ಕೇಂದ್ರ ಸರ್ಕಾರ ಹೊರಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2019ರ ಹೊಸ ಕರಡಿನ ಪ್ರಕಾರ ಹಿಂದಿಯೇತರ ರಾಜ್ಯಗಳ ವಿದ್ಯಾರ್ಥಿಗಳು ತಮ್ಮ ಮಾತೃ ಭಾಷೆಯ ಜತೆಗೆ ಹಿಂದಿ ಮತ್ತು ಇಂಗ್ಲಿಷ್​ ಭಾಷೆಯನ್ನು 5ನೇ ತರಗತಿಯವರೆಗೂ ಕಡ್ಡಾಯವಾಗಿ ಕಲಿಯಬೇಕಿತ್ತು.


ರಾಷ್ಟ್ರೀಯ ಶಿಕ್ಷಣ ನೀತಿ 2019ರ ಮೂಲ ಕರಡಿನಲ್ಲಿ ಹಿಂದಿ ಭಾಷೆ ಮಾತನಾಡದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಾತೃಭಾಷೆಯೊಂದಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯನ್ನು ಅಳವಡಿಸುವ ತ್ರಿಭಾಷಾ ಸೂತ್ರವನ್ನು ಶಿಫಾರಸ್ಸು ಮಾಡಿತ್ತು. ಜೊತೆಗೆ ಹಿಂದಿಭಾಷಾ ರಾಜ್ಯಗಳಲ್ಲಿ ಇಂಗ್ಲಿಷ್, ಹಿಂದಿ ಜೊತೆಗೆ ಭಾರತೀಯ ಭಾಷೆಯೊಂದನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಅಭಿವೃದ್ಧಿ ಹೊಂದುತ್ತಿರುವ ಭಾರತದಲ್ಲಿ ಬಹುಭಾಷಾ ಪದ್ಧತಿ ಅನುಸರಿಸುವುದು ಅತ್ಯಗತ್ಯ ಹಾಗೂ ಒಂದಕ್ಕಿಂತ ಹೆಚ್ಚು ಭಾಷೆ ಕಲಿಕೆಯನ್ನು ಹೊರೆ ಎಂದು ಭಾವಿಸದೆ ಕಲಿಕೆಗೆ ಒಂದು ಅವಕಾಶ ಎಂದು ಕರಡು ರಚನಾ ಸಮಿತಿ ಅಭಿಪ್ರಾಯಪಟ್ಟಿತ್ತು.


ಆದರೆ, ಹಿಂದೆಯೇತರ ರಾಜ್ಯಗಳಾದ ತಮಿಳುನಾಡು ಮತ್ತು ಕರ್ನಾಟಕದ ಹಲವು ನಾಯಕರು ಈ ನೀತಿಯನ್ನು ವಿರೋಧಿಸಿದ್ದಾರೆ.ಅಲ್ಲದೆ, ತಮಿಳುನಾಡಿನಲ್ಲಿ ಎಲ್ಲಾ ಪಕ್ಷಗಳ ಮುಖಂಡರು ಹಿಂದಿ ಭಾಷೆ ಹೇರಿಕೆಯನ್ನು ವಿರೋಧಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಸಹ ಹಿಂದಿ ಭಾಷಾ ಹೇರಿಕೆಯನ್ನು ವಿರೋಧಿಸಿದ್ದಾರೆ.