ನವದೆಹಲಿ: ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಳು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ದೆಹಲಿಯಲ್ಲಿಂದು ಭೇಟಿಯಾದರು.
ಸೀಟು ಹಂಚಿಕೆಯ ವಿಚಾರದಲ್ಲಿ ಸ್ಥಳೀಯ ನಾಯಕರಿಂದ ಇತ್ಯರ್ಥವಾಗದೆ ಗೊಂದಲ ಮೂಡಿದ್ದ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ವರಿಷ್ಠರು ದೆಹಲಿಯ ಸಫ್ಜರ್ ಜಂಗ್ ರಸ್ತೆಯಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
28 ಲೋಕಸಭೆ ಕ್ಷೇತ್ರಗಳಲ್ಲಿ 12 ಸ್ಥಾನಕ್ಕಾಗಿ ಜೆಡಿಎಸ್ ಪಟ್ಟು ಹಿಡಿದಿದ್ದು, ಅದರಲ್ಲೂ ಕಾಂಗ್ರೆಸ್ ಸಂಸದರಿರುವ 4 ಕ್ಷೇತ್ರಗಳನ್ನು ಜೆಡಿಎಸ್ ತನಗೆ ನೀಡುವಂತೆ ಒತ್ತಾಯಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್ 12 ಸ್ಥಾನಗಳಿಗೆ ಪಟ್ಟು ಹಿಡಿದಿದ್ದರೆ, ಕಾಂಗ್ರೆಸ್ 9 ಸ್ಥಾನ ನೀಡಲು ಒಪ್ಪಿತ್ತು. ರಾಜ್ಯ ನಾಯಕರ ಮಟ್ಟದಲ್ಲಿ ನಡೆದಿದ್ದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ದೇವೇಗೌಡ-ರಾಹುಲ್ ಭೇಟಿ ಮಹತ್ವ ಪಡೆದುಕೊಂಡಿದೆ.
ಇದಲ್ಲದೆ ಸುಮಲತಾ ಅಂಬರೀಶ್ ಅವರಿಗೆ ಸಂಬಂದಿಸಿದಂತೆ ಮಂಡ್ಯ ಕ್ಷೇತ್ರ ಕಗ್ಗಂಟಾಗಿದೆ. ಮೈಸೂರು ತಮಗೇ ಬೇಕೆಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ವಿಚಾರಗಳ ಬಗ್ಗೆ ಉಭಯ ಪಕ್ಷಗಳ ವರಿಷ್ಠರು ಸಮಾಲೋಚನೆ ನಡೆಸಲಿದ್ದು, ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ಸಂಬಂಧ ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.