ನೂತನ ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ, ಅಮಿತ್ ಶಾ ಅಭಿನಂದನೆ: ಬಿಎಸ್​ವೈ ಬಗ್ಗೆ ಹೊಗಳಿಕೆ...

ಬಿಜೆಪಿಗೆ ಬಿ.ಎಸ್.ಯಡಿಯೂರಪ್ಪನವರು ನೀಡಿರುವ ಕೊಡುಗೆಯನ್ನು ಪದಗಳಲ್ಲಿ ವರ್ಣಿಸಲಾಗುವುದಿಲ್ಲ.

Written by - Puttaraj K Alur | Last Updated : Jul 28, 2021, 01:31 PM IST
  • ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಅಭಿನಂದನೆ ತಿಳಿಸಿದ ಪ್ರಧಾನಿ ಮೋದಿ, ಅಮಿತ್ ಶಾ
  • ಬಸವರಾಜ್ ಬೊಮ್ಮಾಯಿ ನಾಯಕತ್ವದಲ್ಲಿ ಬಿಜೆಪಿ ಸರ್ಕಾರ ಅತ್ಯುತ್ತಮ ಕಾರ್ಯ ನಿರ್ವಹಿಸಲಿದೆ
  • ಯಡಿಯೂರಪ್ಪ ಕರ್ನಾಟಕದಲ್ಲಿ ಬಿಜೆಪಿಯನ್ನು ಕಷ್ಟಪಟ್ಟು ಬೆಳೆಸಿದ್ದಾರೆಂದು ಹಾಡಿಹೊಗಳಿದ ನಾಯಕರು
ನೂತನ ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ, ಅಮಿತ್ ಶಾ ಅಭಿನಂದನೆ: ಬಿಎಸ್​ವೈ ಬಗ್ಗೆ ಹೊಗಳಿಕೆ...  title=
ಬಿ.ಎಸ್.ಯಡಿಯೂರಪ್ಪ ಹಾಡಿ ಹೊಗಳಿದ ಪ್ರಧಾನಿ ಮೋದಿ

ನವದೆಹಲಿ: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಎಸ್.ಬೊಮ್ಮಾಯಿಯವರಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದಾರೆ. ‘ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬಸವರಾಜ್ ಬೊಮ್ಮಾಯಿಯವರಿಗೆ ಅಭಿನಂದನೆಗಳು’ ಎಂದು ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಇಬ್ಬರು ನಾಯಕರು ಕೂಡ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಹಾಡಿ ಹೊಗಳಿದ್ದಾರೆ.

‘ಬಸವರಾಜ್ ಬೊಮ್ಮಾಯಿಯವರು ಉತ್ತಮ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ರಾಜ್ಯದಲ್ಲಿ ಅವರು ಅತ್ಯುತ್ತಮ ಕಾರ್ಯಗಳನ್ನು ನಿರ್ವಹಿಸುತ್ತಾರೆಂಬ ವಿಶ್ವಾಸ ನನಗಿದೆ. ಫಲಪ್ರದ ಅಧಿಕಾರಾವಧಿಗೆ ಶುಭಾಶಯಗಳು’ ಅಂತಾ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ‘ಬಿಜೆಪಿಗೆ ಬಿ.ಎಸ್.ಯಡಿಯೂರಪ್ಪನವರು ನೀಡಿರುವ ಕೊಡುಗೆಯನ್ನು ಪದಗಳಲ್ಲಿ ವರ್ಣಿಸಲಾಗುವುದಿಲ್ಲ. ಕರ್ನಾಟಕದಲ್ಲಿ ಪಕ್ಷದ ಬೆಳವಣಿಗೆಗೆ ಅವರು ಸಾಕಷ್ಟು ಶ್ರಮಿಸಿದ್ದಾರೆ. ದಶಕಗಳ ಕಾಲ ಕಷ್ಟಪಟ್ಟು ದುಡಿದು ಪಕ್ಷ ಕಟ್ಟಿದ್ದಾರೆ. ಕರ್ನಾಟಕದ ಎಲ್ಲ ಭಾಗಗಳಲ್ಲಿ ಸಂಚರಿಸಿ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಸಾಮಾಜಿಕ ಕಲ್ಯಾಣಕ್ಕಾಗಿ ಅವರ ಬದ್ಧತೆ, ನಿಷ್ಠೆ ನಿಜಕ್ಕೂ ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಎಸ್​ವೈ ಬಗ್ಗೆ ಅನುಕಂಪವಿದೆ, ರಾಜೀನಾಮೆಯ ಕಾರಣ ಬಹಿರಂಗಪಡಿಸಲಿ: ಸಿದ್ದರಾಮಯ್ಯ

ಅಮಿತ್ ಶಾ ಟ್ವೀಟ್ ಮಾಡಿ, ‘ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿಯವರಿಗೆ ಶುಭಾಶಯಗಳು. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಅವರು ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆಂಬ ನಂಬಿಕೆ ಇದೆ. ತಮ್ಮ ಬುದ್ಧಿವಂತಿಕೆ ಮತ್ತು ಅನುಭವದಿಂದ ರಾಜ್ಯದ ಬಡವರು ಮತ್ತು ರೈತರಿಗಾಗಿ ಸೇವೆ ಸಲ್ಲಿಸುವ ಬಿಜೆಪಿಯ ಸಂಕಲ್ಪವನ್ನು ಮತ್ತಷ್ಟು ಹೆಚ್ಚಿಸಲಿದ್ದಾರೆ’ ಎಂದಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ, ‘ಬಿ.ಎಸ್.ಯಡಿಯೂರಪ್ಪನವರು ಪಕ್ಷ ಮತ್ತು ಕರ್ನಾಟಕದ ಜನರಿಗಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ತಳಮಟ್ಟದಿಂದ ಬಿಜೆಪಿ ಬಲಪಡಿಸುವ ನಿಟ್ಟಿನಲ್ಲಿ ಅವರ ಕೊಡುಗೆ ಅಪಾರ. ಅವರ ಕಠಿಣ ಪರಿಶ್ರಮ ನಿಜಕ್ಕೂ ಸ್ಪೂರ್ತಿದಾಯಕ. ಅವರು ಪಕ್ಷ ಮತ್ತು ಸರ್ಕಾರಕ್ಕೆ ಮಾರ್ಗದರ್ಶನ ಮುಂದುವರೆಸುತ್ತಾರೆಂಬ ವಿಶ್ವಾಸವಿದೆ’ ಅಂತಾ ಹೇಳಿದ್ದಾರೆ.

ಡಿಸಿಎಂ ನೇಮಕ ಇನ್ನೂ ನಿರ್ಧಾರವಾಗಿಲ್ಲ

ಇನ್ನು ಸುದ್ದಿಗಾರರೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ‘ಬಸವರಾಜ್ ಬೊಮ್ಮಾಯಿಯವರು ವಿದ್ಯಾವಂತರು ಮತ್ತು ಸಾಕಷ್ಟು ಅನುಭವವುಳ್ಳ ನಾಯಕರು. ಅವರ ನಾಯಕತ್ವದಲ್ಲಿ ಬಿಜೆಪಿ ಸರ್ಕಾರ ಉತ್ತಮ ಸಾಧನೆ ಮಾಡುತ್ತದೆ ಎಂಬ ವಿಶ್ವಾಸ ನನಗಿದೆ. ಉಪಮುಖ್ಯಮಂತ್ರಿ ನೇಮಕದ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರವಾಗಿಲ್ಲ. ಪಕ್ಷದ ರಾಷ್ಟ್ರೀಯ ನಾಯಕತ್ವವು ಇದನ್ನು ನಿರ್ಧರಿಸಲಿದೆ’ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ವಲಸಿಗ ಸಚಿವರು ವಾಪಸ್ ಬಂದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ

ಡಿಸಿಎಂ ಸ್ಥಾನದ ಬಗ್ಗೆ ಪಕ್ಷ ನಿರ್ಧರಿಸುತ್ತದೆ

ಬಸವರಾಜ್ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಸಚಿವ ಸಂಪುಟ ರಚನೆಯ ಬಗ್ಗೆ ಭಾರೀ ಕುತೂಹಲ ಮೂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಜೆಪಿ ನಾಯಕ ಆರ್.ಅಶೋಕ್, ‘ಯಾರಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿದೆ ಎಂಬುದರ ಬಗ್ಗೆ ಪಕ್ಷವೇ ನಿರ್ಧರಿಸುತ್ತದೆ. ನನಗೆ ಡಿಸಿಎಂ ಹುದ್ದೆ ಸಿಗುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಪಕ್ಷದ ನಾಯಕರ ತೀರ್ಮಾನದ ಬಳಿಕ ಡಿಸಿಎಂ ಹುದ್ದೆ ಬಗ್ಗೆ ಗೊತ್ತಾಗಲಿದೆ’ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News