ನವದೆಹಲಿ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಮಹಾರಾಷ್ಟ್ರದಲ್ಲಿ ಒಂದು ತಿಂಗಳ ಕಾಲ ನಡೆದ ರಾಜಕೀಯ ಬಿಕ್ಕಟ್ಟಿಗೆ ತೆರೆಬಿದ್ದಿದೆ. ಈಗ 59 ವರ್ಷದ ಉದ್ಧವ್ ಠಾಕ್ರೆ ಮನೋಹರ್ ಜೋಶಿ ಮತ್ತು ನಾರಾಯಣ್ ರಾಣೆ ನಂತರ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಸಿಎಂ ಆದ ಮೂರನೇ ಶಿವಸೇನೆ ನಾಯಕರಾಗಿದ್ದಾರೆ.


COMMERCIAL BREAK
SCROLL TO CONTINUE READING

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಬಿಜೆಪಿ ಹಾಗೂ ಶಿವಸೇನೆ ನಡುವೆ ಬಿಕ್ಕಟ್ಟು ಸಂಭವಿಸಿದ ಹಿನ್ನಲೆಯಲ್ಲಿ ಶಿವಸೇನೆ ಬಿಜೆಪಿ ಮೈತ್ರಿಕೂಟದಿಂದ ಹೊರಬಂದಿತ್ತು.ತದನಂತರ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಲಾಗಿತ್ತು.


ಇದಾದ ನಂತರ ಬಿಜೆಪಿ ಎನ್ಸಿಪಿಯ ಅಜಿತ್ ಪವಾರ್ ಅವರೊಂದಿಗೆ ಸೇರಿ ಸರ್ಕಾರ ರಚನೆ ಮಾಡಿತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್-ಶಿವಸೇನಾ-ಎನ್ಸಿಪಿ ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದವು, ಅದು ತದನಂತರ 24 ಗಂಟೆಗಳ ಅವಧಿಯಲ್ಲಿ ಬಹುಮತ ಸಾಬೀತು ಪಡಿಸಲು ಕೇಳಿಕೊಂಡ ಹಿನ್ನಲೆಯಲ್ಲಿ ಸೂಕ್ತ ಸಂಖ್ಯಾಬಲದ ಕೊರತೆಯನ್ನು ಮನಗಂಡು ದೇವೇಂದ್ರ ಫಡ್ನವೀಸ್ ಹಾಗೂ ಅಜಿತ್ ಪವಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. ಆ ಮೂಲಕ 80 ಗಂಟೆಯಲ್ಲಿ ಸರ್ಕಾರ ಪತನಗೊಂಡಿತು.



ಈಗ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತವಿರುವ ಹಿನ್ನಲೆಯಲ್ಲಿ ಉದ್ಧವ್ ಠಾಕ್ರೆ ಈಗ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ.ಶಿವಸೇನೆ ಸಂಸ್ಥಾಪಕ ಬಾಲ್ ಠಾಕ್ರೆ ಅವರ ಅಪ್ರತಿಮ ದಸರಾ ರ್ಯಾಲಿಗಳನ್ನು ಒಳಗೊಂಡ ಶಿವಸೇನೆ ಕಾರ್ಯಕ್ರಮಗಳಿಗೆ ನೆಚ್ಚಿನ ಸ್ಥಳವಾಗಿರುವ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಮೊದಲ ಬಾರಿಗೆ ಠಾಕ್ರೆ ಕುಟುಂಬದ ಸದಸ್ಯರು ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ.


ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಪಕ್ಷದ ಮುಖಂಡರಾದ ಅಜಿತ್ ಪವಾರ್ ಮತ್ತು ಜಯಂತ್ ಪಾಟೀಲ್, ಶಿವಸೇನೆಯ ಮನೋಹರ್ ಜೋಶಿ, ಕಾಂಗ್ರೆಸ್ ಮುಖಂಡರಾದ ಅಶೋಕ್ ಚವಾಣ್ ಮತ್ತು ಪೃಥ್ವಿರಾಜ್ ಚವಾಣ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ.