ವಿದ್ಯಾಸಾಗರರ ಪ್ರತಿಮೆ ಭಗ್ನಗೊಂಡ ಸ್ಥಳದಲ್ಲೇ ದೊಡ್ಡ ಪ್ರತಿಮೆ ಮರುಸ್ಥಾಪನೆ: ಪ್ರಧಾನಿ ಮೋದಿ
ಉತ್ತರಪ್ರದೇಶದ ಮವುನಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನವದೆಹಲಿ: ಕೊಲ್ಕತ್ತಾದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರೋಡ್ ಶೋ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಹಿಂಸಾಚಾರದಲ್ಲಿ ಭಗ್ನಗೊಂಡ ಸುಧಾರಣಾವಾದಿ ಚಿಂತಕ ಈಶ್ವರಚಂದ್ರ ಬಂಡೋಪಾಧ್ಯಾಯ ವಿದ್ಯಾಸಾಗರ ಅವರ ಪ್ರತಿಮೆಯನ್ನು ಅದೇ ಸ್ಥಳದಲ್ಲಿ ನಾವು ಮರುಸ್ಥಾಪಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಉತ್ತರಪ್ರದೇಶದ ಮವುನಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ಹಿಂದೆ ಪಶ್ಚಿಮ ಮಿಡ್ನಾಪುರ್ ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಟಿಎಂಸಿ ಕಾರ್ಯಕರ್ತರು ಗುಂಡಾಗಿರಿ ತೋರಿದ್ದರು. ಆ ಸಂದರ್ಭದಲ್ಲಿ ಸಭೆಯನ್ನು ಅರ್ಧಕ್ಕೆ ನಿಲ್ಲಿಸಿ, ಅಲ್ಲಿಂದ ನಾನು ಹೊರನಡೆದಿದ್ದೆ. ಇದೀಗ ಅಮಿತ್ ಷಾ ರೋಡ್ ಶೋ ನಡೆಸುತ್ತಿದ್ದ ಸಂದರ್ಭದಲ್ಲಿ ಹಿಂಸಾಚಾರ ನಡೆಸಿದ್ದಾರೆ ಎಂದು ಮೋದಿ ಕಿಡಿ ಕಾರಿದರು.
ಹಿಂಸಾಚಾರ ಹಿನ್ನೆಲೆಯಲ್ಲಿ ಭಾರತದ ಚುನಾವಣೆ ಇತಿಹಾಸದಲ್ಲಿ ಇದೇ ಮೊದಲ ಬಾರಿ ಸಂವಿಧಾನದ ಈ ವಿಶೇಷಾಧಿಕಾರ ಉಪಯೋಗಿಸಿರುವ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ಅವಧಿಗೂ ಮುನ್ನ ಬಹಿರಂಗ ಪ್ರಚಾರಕ್ಕೆ ನಿಷೇಧ ಹೇರಿದೆ. ಸಂವಿಧಾನದ 324ನೇ ವಿಧಿ ಅನುಸಾರ ಈ ಕ್ರಮಕ್ಕೆ ಆಯೋಗ ಮುಂದಾಗಿದೆ. ಪಶ್ಚಿಮ ಬಂಗಾಳದ 9 ಲೋಕಸಭಾ ಸ್ಥಾನಗಳಿಗೆ ಮೇ19ರಂದು ನಡೆಯಲಿರುವ ಲೋಕಸಭಾ ಚುನಾವಣೆಯ 7ನೇ ಹಂತದಲ್ಲಿ ಮತದಾನ ನಡೆಯಲಿದೆ.