ಬೆಂಗಳೂರು: ಬಿಜೆಪಿ ಆಡಳಿತ ಸಾಧನೆ ಶೂನ್ಯ. ರಾಜ್ಯದಲ್ಲಿ 40% ಕಮಿಷನ್ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಈ ಹೆಸರು ಕೊಟ್ಟಿದ್ದು ನಾನಲ್ಲ. ಈ ಸರ್ಕಾರದಲ್ಲಿ ಒಬ್ಬ ಸಚಿವ ಲಂಚಕ್ಕೆ ಹೋದರೆ, ಮತ್ತೊಬ್ಬ ಸಚಿವ ಮಂಚಕ್ಕೆ ಹೋದ. ಈಗ ಅವರೇ ಅವರ ಮುತ್ತುರತ್ನಗಳು. ಈ 40% ಕಮಿಷನ್ ಸರ್ಕಾರ ಕಿತ್ತೊಗೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.


ಮನುಷ್ಯನಿಗೆ ನಂಬಿಕೆ ಬಹಳ ಮುಖ್ಯ. ಯಲಹಂಕ ಕ್ಷೇತ್ರದಲ್ಲಿ ಕಾಂಗ್ರೆಸ್ ಧ್ವಜ ಹಾರಿಸುತ್ತೇವೆ ಎಂಬ ಆತ್ಮವಿಶ್ವಾಸ ನಿಮ್ಮಲ್ಲಿ ಇರಬೇಕು. ನಿಮ್ಮಲ್ಲಿ ಭೂತವಿದೆ ಎಂದು ಹೆದರಬೇಡಿ. ನಾವು ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ನಡಿಗೆ ಮಾಡಿದಾಗ 1.09 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 9907 ಮಂದಿ ಯುವಕರು ಯಲಹಂಕದ ಕ್ಷೇತ್ರದ ಜನರಾಗಿದ್ದರು. ಮತದಾರರು ಇಲ್ಲಿ ಗುಪ್ತ ಮತದಾರರಿದ್ದಾರೆ. ಭ್ರಷ್ಟ ಬಿಜೆಪಿ ಶಾಸಕರನ್ನು ಸೋಲಿಸಬೇಕು ಎಂಬ ಪಣ ತೊಟ್ಟಿದ್ದಾರೆ ಎಂದು ಹೇಳಿದರು.


ಇದನ್ನೂ ಓದಿ: Gas Leak Incident: ಲುಧಿಯಾನಾದಲ್ಲಿ ಗ್ಯಾಸ್ ಸೋರಿಕೆಯಿಂದ ದುರ್ಘಟನೆ, 9 ಸಾವು 10 ಜನರಿಗೆ ಗಾಯ


ಈ ಸರ್ಕಾರ ಎಲ್ಲ ಕಡೆ ಬೋಗಸ್ ಕೆಲಸ ಮಾಡಿ, ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ಬಾವುಟ ಹಾಕುವಂತೆ ಒತ್ತಡ ಹಾಕುತ್ತಿದ್ದಾರೆ. ಈ ಸರ್ಕಾರ 15 ದಿನಗಳ ನಂತರ ಈ ಸರ್ಕಾರ ಅದಿಕಾರದಲ್ಲಿ ಇರುವುದಿಲ್ಲ, ನಮ್ಮ ಪಕ್ಷದ ಕಾರ್ಯಕರ್ತರಿಗೆ ತೊಂದರೆ ನೀಡುತ್ತಿರುವ ಪೊಲೀಸ್ ಅಧಿಕಾರಿಗಳಿಗೆ ನಮ್ಮ ಸರ್ಕಾರ ಬಂದ ನಂತರ ತಕ್ಕ ಕ್ರಮ ಕೈಗೊಳ್ಳಲಾಗುವುದು. ನೀವು ಬೇಕಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಬಾವುಟ ಹಾಕಿಕೊಂಡಿರಿ. ಆದರೆ ಅಧಿಕಾರ ದುರ್ಬಳಕೆ ಮಾಡಿಕೊಳ್ಳಬೇಡಿ. ನೀವು ನ್ಯಾಯಬದ್ಧವಾಗಿ ಚುನಾವಣೆ, ಆಡಳಿತ ಮಾಡಿ ಎಂದು ಅವರು ಮನವಿ ಮಾಡಿದರು.


ಬಿಜೆಪಿಯಲ್ಲಿ ಯಡಿಯೂರಪ್ಪ ಅವರು ಕಣ್ಣೀರು ಹಾಕಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು. ಬಿಜೆಪಿ ಕಟ್ಟಿ ಬೆಳೆಸಿದ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರಿದ್ದಾರೆ. ನಿಮ್ಮ ಶಿಕ್ಷಕರ ಕ್ಷೇತ್ರದ ಪರಿಷತ್ ಸದಸ್ಯರಾದ ಪುಟ್ಟಣ್ಣ ಅವರು ನಾಲ್ಕು ವರ್ಷ ಅಧಿಕಾರವಿದ್ದರೂ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ. ಲಕ್ಷ್ಮಣ್ ಸವದಿ ಅವರು ಐದು ವರ್ಷ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಿದ್ದಾರೆ. ಇನ್ನು ಜೆಡಿಎಸ್ ಪಕ್ಷದಿಂದ ಅರಸಿಕೆರೆ ಶಿವಲಿಂಗೇಗೌಡರು, ಕೋಲಾರ ಶ್ರೀನಿವಾಸ್ ಗೌಡ, ಮಧು ಬಂಗಾರಪ್ಪ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಸೇರಿದ್ದಾರೆ ಎಂದು ಹೇಳಿದರು.


ಬಿಜೆಪಿ ಅಧಿಕಾರದಿಂದ ದೂರವಿಡಲು ನಾವು ಕುಮಾರಸ್ವಾಮಿ ಅವರಿಗೆ ಬೇಷರತ್ ಬೆಂಬಲ ನೀಡಿ ಸರ್ಕಾರ ರಚನೆಗೆ ಅವಕಾಶ ನೀಡಿದ್ದೆವು. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಜೆಡಿಎಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರೇ ಹೇಳುತ್ತಿದ್ದಾರೆ. ನಿನ್ನೆ ಟಿವಿ ಸಂದರ್ಶನದಲ್ಲಿ ಸ್ವತಃ ಅಮಿತ್ ಶಾ ಅವರೇ ಹೇಳಿದ್ದಾರೆ, ರಾಹುಲ್ ಗಾಂಧಿ ಅವರು ಆಶೀರ್ವಾದ ಮಾಡಿದ್ದು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿದ್ದಾರೆ. ನನ್ನನ್ನು ಅವರು ಮುಖ್ಯಮಂತ್ರಿ ಮಾಡುವ ಅವಶ್ಯಕತೆ ಇಲ್ಲಎಂದರು.


ನಮಗೆ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಅಧಿಕಾರ ನೀಡಬೇಕು. ನಮಗೆ ಅದು ಮುಖ್ಯ. ನನಗೆ ಬಿಜೆಪಿಯವರಿಂದ ಅಧಿಕಾರ ಬೇಡ. ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದು ಖಾಲಿ ಡಬ್ಬದಂತಿದೆ. ಅಧಿಕಾರ ಇದ್ದಾಗ ಅವರು ಏನು ಮಾಡಲಿಲ್ಲ. ಕಳೆದ ಚುನಾವಣೆಯಲ್ಲಿ ನಿಮ್ಮ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದರೂ ನಿಮ್ಮ ಆದಾಯ ಡಬಲ್ ಆಯಿತಾ? ರೈತರಿಗೆ ಅನುಕೂಲವಾಯಿತಾ? ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎಲ್ಲಾ ವರ್ಗದವರಿಗೆ ನ್ಯಾಯ ಒದಗಿಸಿಕೊಡುತ್ತೇವೆ ಎಂದು ಭರವಸೆ ನೀಡಿದರು.


ಮೇ 10ರ ದಿನ ಕೇವಲ ಮತದಾನದ ದಿನ ಮಾತ್ರವಲ್ಲ, ಭ್ರಷ್ಟಾಚಾರವನ್ನು ರಾಜ್ಯದಿಂದ ಬಡಿದೋಡಿಸುವ ದಿನ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಜಾರಿ ಮಾಡುವ ದಿನವಾಗಿದೆ.ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ನೀಡುತ್ತೇವೆ, ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ಉಚಿತ. ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿ ಉಚಿತ ನೀಡಲಾಗುವುದು. ರಾಜ್ಯದ ಮಹಿಳೆಯರಿಗೆ ಸಾರ್ವಜನಿಕ ಬಸ್ ಗಳಲ್ಲಿ ಉಚಿತ ಪ್ರಯಾಣ, ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಪದವೀಧರರಿಗೆ 3 ಸಾವಿರ, ಡಿಪ್ಲೋಮಾ ಪದವೀಧರರಿಗೆ 1500 ರೂ ಪ್ರತಿ ತಿಂಗಳು 2 ವರ್ಷಗಳ ಕಾಲ ನಿರುದ್ಯೋಗ ಭತ್ಯೆ ನೀಡಲಾಗುವುದು. ಇವು ನಮ್ಮ ಐದು ಗ್ಯಾರಂಟಿ ಯೋಜನೆಗಳು ಎಂದು ಅವರು ವಿವರಿಸಿದರು.


ಇದನ್ನೂ ಓದಿ: Bengaluru Rains: ಬೆಂಗಳೂರಿನಲ್ಲಿ ಧಾರಾಕಾರ ಮಳೆ.. ಧರೆಗುರುಳಿದ ಮರಗಳು, ವಾಹನ ಸವಾರರ ಪರದಾಟ


ಬಿಜೆಪಿಯದ್ದು 40% ಕಮಿಷನ್ ಲೂಟಿ ಗ್ಯಾರಂಟಿ. ನಮಗೆ ಎಲ್ಲಾ ಜಾತಿ, ಧರ್ಮಗಳೂ ಒಂದೇ. ನಾವು ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ. ನಾನು, ಕೇಶವ ರಾಜಣ್ಣ ಹಿಂದೂ ಅಲ್ಲವೇ? ಕೇಶವ ರಾಜಣ್ಣ ಯಾವುದೇ ಅಧಿಕಾರ ಇಲ್ಲದಿದ್ದರೂ ಕೋವಿಡ್ ಕಾಲದಲ್ಲಿ ಜನಸೇವೆ ಮಾಡಿದ್ದಾರೆ. ಈ ಕ್ಷೇತ್ರದಲ್ಲಿ ಗುಪ್ತ ಮತದಾರರಿದ್ದು, ನಿಮ್ಮ ಭವಿಷ್ಯ ಬದಲಾಗಬೇಕಾದರೆ, ವಿಶ್ವನಾಥ್ ಸೋಲಬೇಕು. ಜೆಡಿಎಸ್ ಪಕ್ಷಕ್ಕೆ ಮತ ಹಾಕಿ ನಿಮ್ಮ ಮತ ವ್ಯರ್ಥ ಮಾಡಿಕೊಳ್ಳಬೇಡಿ. ಬಿಜೆಪಿ ಆಡಳಿತದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಸತ್ತಿದ್ದಾರೆ. ಬೆಲೆಗಳು ಗಗನಕ್ಕೇರಿವೆ, ರೈತರು ಬಳಸುವ ಗೊಬ್ಬರ, ಸಲಕರಣೆ, ಪಶುಗಳ ಮೇವು ಎಲ್ಲದರ ಬೆಲೆ ಹೆಚ್ಚಾಗಿದೆ.ಈ ಸರ್ಕಾರ ಕೋವಿಡ್ ಸಮಯದಲ್ಲಿ ಚಿಕಿತ್ಸೆಗೆ ಹಣ ನೀಡಿತೇ? ಸಾಂಪ್ರದಾಯಿಕ ವೃತ್ತಿಪರರಿಗೆ, ಕೋವಿಡ್ ಮೃತರಿಗೆ ಪರಿಹಾರ ನೀಡಿದರಾ? ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.