Karnataka Budget: ಪಂಚ ಗ್ಯಾರಂಟಿಗಳು, ಕಲ್ಯಾಣ ಕಾರ್ಯಕ್ರಮಗಳು ಉಚಿತ ಕೊಡುಗೆಗಳಲ್ಲ... ಬಜೆಟ್‌ನಲ್ಲಿ 6 ಅಭಿವೃದ್ಧಿಯ ಆಯಾಮ..!

ಈ ವರ್ಷದ ಆಯವ್ಯಯದಲ್ಲಿ ಪ್ರಮುಖವಾಗಿ ಆರು ಅಭಿವೃದ್ಧಿಯ ಆಯಾಮಗಳನ್ನು ಗುರುತಿಸಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ವೇಳೆ ಉಲ್ಲೇಖಿಸಿದರು. 

Written by - Yashaswini V | Last Updated : Mar 7, 2025, 06:36 PM IST
  • ಗ್ಯಾರಂಟಿ ಯೋಜನೆಗಳ ಜೊತೆಗೆ ಇತರ ಜನಪರ ಕಾರ್ಯಕ್ರಮಗಳಿಗೂ ನಮ್ಮ ಸರ್ಕಾರ ಒತ್ತು ನೀಡಿದೆ.
  • ದುರ್ಬಲ ವರ್ಗದವರಿಗೆ ನೀಡುತ್ತಿರುವ ಸವಲತ್ತುಗಳನ್ನು ಇನ್ನಷ್ಟು ಬಲಪಡಿಸುವ ಗುರಿ ಹೊಂದಿದ್ದೇವೆ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು, ರೈತರು, ಶ್ರಮಿಕರು ಸೇರಿದಂತೆ ವಿವಿಧ ವರ್ಗಗಳ ಅಭ್ಯುದಯಕ್ಕೆ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಿದೆ.
Karnataka Budget: ಪಂಚ ಗ್ಯಾರಂಟಿಗಳು, ಕಲ್ಯಾಣ ಕಾರ್ಯಕ್ರಮಗಳು ಉಚಿತ ಕೊಡುಗೆಗಳಲ್ಲ... ಬಜೆಟ್‌ನಲ್ಲಿ 6 ಅಭಿವೃದ್ಧಿಯ ಆಯಾಮ..!

Karnataka Budget: ರಾಜ್ಯದಲ್ಲಿ ಜಾರಿಯಲ್ಲಿಊರುವ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರ ನೀಡಿರುವ ಹಲವು ಕಲ್ಯಾಣ ಕಾರ್ಯಕ್ರಮಗಳು ಉಚಿತ ಕೊಡುಗೆಗಳಲ್ಲ. ಇವು ಆರ್ಥಿಕ ಮತ್ತು ಸಾಮಾಜಿಕ ತತ್ವದಲ್ಲಿ ಮಾಡಿರುವ ಹೂಡಿಕೆಗಳು ಎಂದು ಆತ್ಮವಿಶ್ವಾಸದಿಂದ ಹೇಳಬಯಸುತ್ತೇನೆ. ನಾಡಿನ ಖ್ಯಾತ ವಿದ್ವಾಂಸರಾಗಿದ್ದ ಮುಜಾಫರ್‌ ಅಸ್ಸಾದಿಯವರು "ಗ್ಯಾರಂಟಿ ಯೋಜನೆಗಳ ಹಿಂದೆ ಬಡತನದ ನೋವಿದೆ, ಬಡತನದ ಹಿಂಸೆ ಇದೆ, ಮಹಿಳೆಯರಲ್ಲಿ ಮಡುಗಟ್ಟಿದ ನೋವುಗಳಿವೆ, ಅಸಮಾನ ಭಾರತದ ಪರಿಕಲ್ಪನೆ ಇದೆ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  

Add Zee News as a Preferred Source

ಈ ವರ್ಷದ ಆಯವ್ಯಯದಲ್ಲಿ ಪ್ರಮುಖವಾಗಿ ಆರು ಅಭಿವೃದ್ಧಿಯ ಆಯಾಮಗಳನ್ನು ಗುರುತಿಸಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿರುವ ಸಿದ್ದರಾಮಯ್ಯ ಇದನ್ನು ವಿವರಿಸಿದ್ದು ಹೀಗೆ... 

1.​ಕಲ್ಯಾಣ ಕಾರ್ಯಕ್ರಮಗಳ ಆಯವ್ಯಯ:
ಗ್ಯಾರಂಟಿ ಯೋಜನೆಗಳ ಜೊತೆಗೆ ಇತರ ಜನಪರ ಕಾರ್ಯಕ್ರಮಗಳಿಗೂ ನಮ್ಮ ಸರ್ಕಾರ ಒತ್ತು ನೀಡಿದೆ. ದುರ್ಬಲ ವರ್ಗದವರಿಗೆ ನೀಡುತ್ತಿರುವ ಸವಲತ್ತುಗಳನ್ನು ಇನ್ನಷ್ಟು ಬಲಪಡಿಸುವ ಗುರಿ ಹೊಂದಿದ್ದೇವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು, ರೈತರು, ಶ್ರಮಿಕರು ಸೇರಿದಂತೆ ವಿವಿಧ ವರ್ಗಗಳ ಅಭ್ಯುದಯಕ್ಕೆ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಿದೆ.

ಇದನ್ನೂ ಓದಿ- Karnataka Budget: ಕೃಷಿಕರಿಗೆ 'ರೈತ' ರಾಮಯ್ಯ ಕೃಪಾಕಟಾಕ್ಷ

2.​ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಆಯವ್ಯಯ:  
ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿಗಳು ಪರಸ್ಪರ ಪೂರಕವಾಗಿ ದುಡಿಯುವ ಕಾರ್ಯಕ್ಷೇತ್ರಗಳು. ಇವುಗಳ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ರೈತರು, ಮೀನುಗಾರರು ಮುಂತಾದವರ ಆದಾಯ ಹೆಚ್ಚಿಸುವ ಈ ಯೋಜನೆಗಳು ಭವಿಷ್ಯದ ಕರ್ನಾಟಕದ ಆರ್ಥಿಕಾಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿವೆ. ಕೃಷಿ ಮತ್ತು ಇನ್ನಿತರೆ ಆಸ್ತಿಗಳ ದಾಖಲೀಕರಣ, ಮೂಲಸೌಲಭ್ಯ ಒದಗಿಸುವಿಕೆ, ಸಮರ್ಪಕ ವಿದ್ಯುತ್‌ ಪೂರೈಕೆ, ಗೋದಾಮುಗಳ ಒದಗಿಸುವಿಕೆ ಮುಂತಾದ ಚಟುವಟಿಕೆಗಳ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಹಾಗೂ ಗ್ರಾಮೀಣ ಜನರ ಆದಾಯ ಹೆಚ್ಚಿಸಲು ಶ್ರಮಿಸಲಾಗುವುದು.

3. ಅಭಿವೃದ್ಧಿ ಕೇಂದ್ರಿತ ಆಯವ್ಯಯ: 
ನಮ್ಮ ಸರ್ಕಾರ ರಾಜ್ಯದ ಆಮೂಲಾಗ್ರ ಆರ್ಥಿಕ ಬೆಳವಣಿಗೆ ಹೆಚ್ಚಿಸುವಲ್ಲಿ ಮೂಲಸೌಕರ್ಯ ಕ್ಷೇತ್ರದ ನಿರ್ಣಾಯಕ ಪಾತ್ರವನ್ನು ಗುರುತಿಸಿ, ಈ ಬಾರಿ ಬಂಡವಾಳದ ಮೇಲಿನ ವೆಚ್ಚಗಳಿಗೆ ಗಣನೀಯವಾದ ಅನುದಾನ ಒದಗಿಸಿದೆ. ಬಂಡವಾಳ ಲೆಕ್ಕದಲ್ಲಿ ಶೇ. 47.3 ರಷ್ಟು ಹೆಚ್ಚಳವಾಗಿರುವುದು ಅಭಿವೃದ್ಧಿ ಕೇಂದ್ರಿತ ಆಯವ್ಯಯ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಹೂಡಿಕೆಯು ಸ್ವಸ್ಥ ಸಮಾಜದ ನಿರ್ಮಾಣಕ್ಕೆ ದಾರಿಯಾಗಲಿದೆ.

4. ​ನಗರಾಭಿವೃದ್ಧಿಗೆ ಆದ್ಯತೆ:
ದಿನೇ ದಿನೇ ವೇಗವಾಗಿ ಬೆಳೆಯುತ್ತಿರುವ ರಾಜ್ಯದ ನಗರಗಳಲ್ಲಿ ನಾಗರೀಕರಿಗೆ ಸಮರ್ಪಕ ಮೂಲಸೌಕರ್ಯ ಹಾಗೂ ಗುಣಮಟ್ಟದ ಸೇವೆಗಳನ್ನು ಒದಗಿಸಲು ನಗರಾಭಿವೃದ್ಧಿ ಯೋಜನೆಗಳಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ರಾಜ್ಯದ ಬೊಕ್ಕಸಕ್ಕೆ ಅತಿ ದೊಡ್ಡ ಕೊಡುಗೆ ನೀಡುವ ಬೆಂಗಳೂರು ಮಹಾನಗರದ ಮೂಲಸೌಕರ್ಯ, ಸೇವಾಪೂರೈಕೆ ಹಾಗೂ ಸಂಚಾರ ಸುವ್ಯವಸ್ಥೆಗಳಿಗಾಗಿ ʻಬ್ರ್ಯಾಂಡ್‌ ಬೆಂಗಳೂರುʼ ಎಂಬ ಪರಿಕಲ್ಪನೆಯಡಿ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಎರಡನೇ ಮತ್ತು ಮೂರನೇ ಹಂತದ ನಗರಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವುದರ ಮೂಲಕ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಯೋಜನೆಗಳನ್ನು ರೂಪಿಸಲಾಗಿದೆ.

ಇದನ್ನೂ ಓದಿ-  ಸಿದ್ದರಾಮಯ್ಯ ಬಜೆಟ್: ಇಲಾಖಾವಾರು ಅನುದಾನ ಹಂಚಿಕೆ... ಈ ಇಲಾಖೆಗೆ 'ಸಿಂಹ ಪಾಲು'..!

5. ​ಹೂಡಿಕೆ ಮತ್ತು ಉದ್ಯೋಗ ಸೃಜನೆ:
ಅತಿಹೆಚ್ಚು ಉದ್ಯೋಗ ಸೃಜನೆಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ  ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಾಣವಾಗಿ ಹೆಚ್ಚಿನ ಹೂಡಿಕೆ ಆಕರ್ಷಿಸಿ ಉದ್ಯೋಗ ಸೃಜನೆಗೆ ಆದ್ಯತೆ ನೀಡಲಾಗುತ್ತಿದೆ.

6. ​ಆಡಳಿತ ಸುಧಾರಣೆ: 
ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಹಾಗೂ ಭ್ರಷ್ಟಾಚಾರವನ್ನು ನಿಗ್ರಹಿಸಲು ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತಿದೆ. ನಾಗರೀಕ ಸೇವಾ ಪೂರೈಕೆ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಿ, ಕೌನ್ಸೆಲಿಂಗ್‌ ಮುಖಾಂತರ ವರ್ಗಾವಣೆ ನೀತಿ ಅಳವಡಿಸಿಕೊಂಡು ಆಡಳಿತ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಜನಸ್ನೇಹಿ ಮತ್ತು ಪರಿಣಾಮಕಾರಿಯಾದ ಸೇವೆಯನ್ನು ಒದಗಿಸಲು ಕಾರ್ಯತಂತ್ರಗಳನ್ನು ರೂಪಿಸಿ ಅನುಷ್ಠಾನ ಮಾಡುತ್ತೇವೆ. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ 1 ಲಕ್ಷ ಕೋಟಿ ರೂ.ಗಳಿಗೂ ಅಧಿಕ ಮೊತ್ತವನ್ನು ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ, ನೇರವಾಗಿ ಫಲಾನುಭವಿಗಳ ಖಾತೆಗೆ ಹಾಗೂ ಕೆಲವು ರೀತಿಯ ಸಹಾಯಧನಗಳನ್ನು ಇಲಾಖೆಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ.  ಗ್ಯಾರಂಟಿ ಯೋಜನೆಗಳೊಂದರಲ್ಲೆ ಈ ವರೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸರಾಸರಿ 233 ಕೋಟಿ ರೂ.ಗಳನ್ನು ನೇರವಾಗಿ ವರ್ಗಾಯಿಸಲಾಗಿದೆ. ನೇರ ನಗದು ವರ್ಗಾವಣೆಯಂತಹ ಕ್ರಮಗಳು ನಮ್ಮ ಸರ್ಕಾರದ ಉತ್ತರದಾಯಿತ್ವಕ್ಕೆ ಹಿಡಿದ ಕನ್ನಡಿ. ಇವೆಲ್ಲವೂ ಸರ್ಕಾರದ ಮೇಲೆ ಜನರ ಭರವಸೆಯನ್ನು ಇನ್ನಷ್ಟು ದೃಢಪಡಿಸುವ ಹೆಜ್ಜೆಗಳಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News