Independence Day 2021: ‘ಅಮೃತ’ ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

ನಾಡಿನ ಜನತೆಗೆ 75ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ತಿಳಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಹೊಸ ‘ಅಮೃತ’ ಯೋಜನೆಗಳನ್ನು ಘೋಷಿಸಿದ್ದಾರೆ.

Written by - Puttaraj K Alur | Last Updated : Aug 15, 2021, 12:18 PM IST
  • ವಸತಿ ರಹಿತ, ಆಶ್ರಯರಹಿತರನ್ನು ಗುರುತಿಸಿ ವಸತಿ ಸೌಲಭ್ಯ ಕಲ್ಪಿಸುವ ಅಮೃತ ಗ್ರಾಮೀಣ ವಸತಿ ಯೋಜನೆ
  • ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳಿಗೆ ನೆರವಾಗಲು ಅಮೃತ ರೈತ ಉತ್ಪಾದಕ ಸಂಸ್ಥೆ ಯೋಜನೆ
  • ಸಮಗ್ರ ಮೂಲಸೌಕರ್ಯದೊಂದಿಗೆ ಶಾಲೆಗಳ ಮತ್ತು ಗ್ರಾಮಗಳ ಅಭಿವೃದ್ಧಿಗೆ ಅಮೃತ ಗ್ರಾಮ ಪಂಚಾಯಿತಿ ಯೋಜನೆ
Independence Day 2021: ‘ಅಮೃತ’ ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ್ ಬೊಮ್ಮಾಯಿ title=
ಹೊಸ ‘ಅಮೃತ’ ಯೋಜನೆ ಘೊಷಿಸಿದ ಸಿಎಂ ಬಸವರಾಜ್ ಬೊಮ್ಮಾಯಿ (Photo Courtesy: Twitter/@CMofKarnataka))

ಬೆಂಗಳೂರು: 75ನೇ ಸ್ವಾತಂತ್ರ್ಯೋತ್ಸವ(75th Independence Day)ದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ತೆರೆದ ಜೀಪ್‌ನಲ್ಲಿ ಸಿಎಂ ಬೊಮ್ಮಾಯಿ ಪರೇಡ್ ಪರಿವೀಕ್ಷಣೆ ಮಾಡಿದರು. ಗೌರವ ರಕ್ಷೆ ಸ್ವೀಕಾರ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಶುಭಾಶಯ ಕೋರಿದರು. ಇದೇ ವೇಳೆ ಹಲವು ಹೊಸ ‘ಅಮೃತ’ ಯೋಜನೆಗಳನ್ನು ಘೋಷಿಸಿದರು.

ಅಮೃತ ಗ್ರಾಮೀಣ ವಸತಿ ಯೋಜನೆ

ಸ್ವಾತಂತ್ರ್ಯೋತ್ಸವದಂದು ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ಅಮೃತ ಗ್ರಾಮೀಣ ವಸತಿ ಯೋಜನೆ ಘೋಷಿಸಿದ್ದಾರೆ. ಆಯ್ದ 750 ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆ ಅನುಷ್ಠಾನವಾಗಲಿದೆ. ವಸತಿ ರಹಿತ, ಆಶ್ರಯರಹಿತರನ್ನು ಗುರುತಿಸಿ ವಸತಿ ಸೌಲಭ್ಯ ಕಲ್ಪಿಸಲಾಗುವುದು.

ಅಮೃತ ರೈತ ಉತ್ಪಾದಕ ಸಂಸ್ಥೆ ಯೋಜನೆ

ಅಮೃತ ರೈತ ಉತ್ಪಾದಕ ಸಂಸ್ಥೆ ಯೋಜನೆಯನ್ನು ಸಿಎಂ ಘೋಷಿಸಿದ್ದಾರೆ. ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆಗೆ ಮತ್ತು ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು ಸಂಸ್ಥೆಗಳನ್ನು ಆರಂಭಿಸಲಾಗುತ್ತಿದೆ. 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಈ ಯೋಜನೆಯಡಿ ಸ್ಥಾಪಿಸಲಾಗುವುದು. ಪ್ರತಿ ಸಂಸ್ಥೆಗೆ 30 ಲಕ್ಷ ರೂ.ನಂತೆ 3 ವರ್ಷ ನೀಡಲಾಗುವುದು. ಇದಕ್ಕಾಗಿ 225 ಕೋಟಿ ರೂ. ಅನುದಾನ ನೀಡಲಾಗುವುದು ಅಂತಾ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಅಮೃತ ಗ್ರಾಮ ಪಂಚಾಯಿತಿ ಯೋಜನೆ

ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ ಆಯ್ದ 750 ಗ್ರಾಮ ಪಂಚಾಯಿಗಳಲ್ಲಿ ಬೀದಿ ದೀಪಗಳು, ಪ್ರತಿಯೊಂದು ಮನೆಗೆ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. ಶೇ.100ರಷ್ಟು ಘನತಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರು ವೈಜ್ಞಾನಿಕವಾಗಿ ವಿಸರ್ಜಿಸುವುದು, ಸೌರವಿದ್ಯುತ್, ಡಿಜಿಟಲ್ ಗ್ರಂಥಾಲಯಗಳೊಂದಿಗೆ ಶಾಲೆ ಸ್ಥಾಪನೆ ಮತ್ತು ಸಮಗ್ರ ಮೂಲಸೌಕರ್ಯದೊಂದಿಗೆ ಶಾಲೆಗಳ(School) ಮತ್ತು ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ವಾಹನ ಸವಾರರಿಗೆ ಸಿಹಿ ಸುದ್ದಿ : ಡೀಸೆಲ್‌ 'ಹೋಂ ಡೆಲಿವರಿ' ಆರಂಭಿಸಿದ BPCL 

ಅಮೃತ ಸ್ವಸಹಾಯ ಕಿರು ಉದ್ದಿಮೆ ಘೋಷಣೆ
ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ಅಮೃತ ಸ್ವಸಹಾಯ ಕಿರು ಉದ್ದಿಮೆ ಘೋಷಿಸಿದರು. ಇದರಿಂದ 7,500 ಸ್ವಸಹಾಯ ಗುಂಪುಗಳು ಉದ್ದಿಮೆಗಳಾಗಿ ಬದಲಾಗಲಿವೆ. ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸಲು ತಲಾ 1 ಲಕ್ಷ ರೂ. ಅನುದಾನ ನೀಡಲಾಗುವುದು ಅಂತಾ ಸಿಎಂ ತಿಳಿಸಿದ್ದಾರೆ.

ಅಮೃತ ನಿರ್ಮಲ ನಗರ ಯೋಜನೆ

ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಸಿಎಂ ಬೊಮ್ಮಾಯಿ ಅಮೃತ ನಿರ್ಮಲ ನಗರ ಯೋಜನೆ ಘೋಷಿಸಿದರು. ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡುವುದು ಅಮೃತ ನಿರ್ಮಲ ನಗರ ಯೋಜನೆಯ ಉದ್ದೇಶವಾಗಿದೆ. ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂ. ಅನುದಾನ ನೀಡಲಾಗುವುದು. ಇದಕ್ಕಾಗಿ ಒಟ್ಟು 75 ಕೋಟಿ ರೂ. ಒದಗಿಸಲಾವುದು ಎಂದು ಸಿಎಂ ತಿಳಿಸಿದ್ದಾರೆ.

ಅಮೃತ ಶಾಲಾ ಸೌಲಭ್ಯ ಯೋಜನೆ

ಸಿಎಂ ಬಸವರಾಜ್ ಬೊಮ್ಮಾಯಿ ಮಕ್ಕಳಿಗೆ ಉನ್ನತ ಶಿಕ್ಷಣ ದೊರಕಿಸುವ ನಿಟ್ಟಿನಲ್ಲಿ ಅಮೃತ ಶಾಲಾ ಸೌಲಭ್ಯ ಯೋಜನೆಯನ್ನೂ ಘೋಷಿಸಿದ್ದಾರೆ. ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಸೇರಿದಂತೆ ಸಮಗ್ರ ಸೌಲಭ್ಯವನ್ನು ಈ ಯೋಜನೆಯಡಿ ಒದಗಿಸಲಾಗುವುದು. 750 ಶಾಲೆಗಳಿಗೆ ತಲಾ 10 ಲಕ್ಷ ರೂ. ನೀಡಲಾಗುವುದು. ಇದಕ್ಕಾಗಿ ಒಟ್ಟು 75 ಕೋಟಿ ರೂ. ವೆಚ್ಚ ಮಾಡಲಾಗುವುದು ಅಂತಾ ತಿಳಿಸಿದ್ದಾರೆ.

750 ಅಂಗನವಾಡಿ ಕೇಂದ್ರಗಳು ಮೇಲ್ದರ್ಜೆಗೆ

ಅಮೃತ ಅಂಗನವಾಡಿ ಯೋಜನೆಯಡಿ 750 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಪ್ರತಿ ಅಂಗನವಾಡಿಗೆ 1 ಲಕ್ಷ ರೂ. ನೀಡಲಾಗುವುದು. ಇದಕ್ಕಾಗಿ 7.5 ಕೋಟಿ ರೂ. ವಿನಿಯೋಗಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೊನೆಗೂ ಹರಾಜಾದ ವಿಜಯ್ ಮಲ್ಯಗೆ ಸೇರಿದ Kingfisher House, ಎಷ್ಟು ಬೆಲೆ ಬಂತು ಗೊತ್ತಾ?

ಧ್ವಜಾರೋಹಣಕ್ಕೆ ಅವಕಾಶ ಸಿಕ್ಕಿರುವ ನನ್ನ ಸೌಭಾಗ್ಯ

ಈ ಅಮೃತ ಮಹೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣ ಮಾಡುವ ಅವಕಾಶ ಸಿಕ್ಕಿರುವ ನನ್ನ ಸೌಭಾಗ್ಯ. ಭಾರತವು ಅತ್ಯಂತ ಯಶಸ್ವಿ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಅನೇಕ ಹೋರಾಟಗಾರ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ್ದರು. ಅವರ ತ್ಯಾಗ, ಬಲಿದಾನವನ್ನು ನಾವೆಲ್ಲರೂ ಸ್ಮರಿಸಬೇಕು. ನಾವೆಲ್ಲರೂ ಅವರ ಹೋರಾಟವನ್ನು ನೆನೆಯುತ್ತಾ ಗೌರವನಮನ ಸಲ್ಲಿಸಬೇಕು ಎಂದು ಸಿಎಂ ಬೊಮ್ಮಾಯಿ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದವರನ್ನು ಇದೇ ವೇಳೆ ಸ್ಮರಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News