ಧಾರವಾಡ : ಮಳೆಗಾಲ ಆರಂಭವಾಗುತ್ತಿದ್ದು, ಆರೋಗ್ಯ ಇಲಾಖೆ ಮತ್ತು ಇತರ ಇಲಾಖೆಗಳು ಸಮನ್ವಯದಿಂದ ಕಾರ್ಯ ಮಾಡಿ, ಸಾಂಕ್ರಾಮಿಕ ರೋಗಗಳ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು, ಸಾರ್ವಜನಿಕ ಆರೋಗ್ಯ ಸುರಕ್ಷತೆಗೆ ಆಧ್ಯತೆ ನೀಡಿ. ಜಲಜನ್ಯ ಮತ್ತು ಕೀಟ ಜನ್ಯ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ. ಯಾವುದೇ ಇಲಾಖೆ ಅಧಿಕಾರಿಗಳ ನಿಲಕ್ಷ್ರ್ಯದಿಂದ ರೋಗ, ರುಜೀನ ಹೆಚ್ಚಿದರೆ ಅಂತವರ ವಿರುದ್ದ ಸಾರ್ವಜನಿಕ ಆರೋಗ್ಯ ರಕ್ಷಣೆ ಕಾಯ್ದೆಯಡಿ, ಕ್ರಿಮಿನಲ್ ಪ್ರಕರಣ ದಾಖಲಿಸಿ, ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.


COMMERCIAL BREAK
SCROLL TO CONTINUE READING

ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.


ಕಳೆದ ಜನವರಿಯಿಂದ ಏಪ್ರೀಲ್‍ವರೆಗೆ ಸುಮಾರು 451 ವಾಂತಿಭೇದಿ ಪ್ರಕರಣಗಳು ವರದಿಯಾಗಿವೆ. ಮಳೆಗಾಲದಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ಎಚ್ಚರವಹಿಸಿ. ಕಾಲಕಾಲಕ್ಕೆ ಕುಡಿಯುವ ನೀರನ್ನು ಸರಬರಾಜು ಆರಂಭ ಮತ್ತು ಬಳಕೆಯ ಕೊನೆಯ ಸ್ಥಳದಲ್ಲಿ ಪೆÇ್ರಟೊಕಾಲ್ ಪ್ರಕಾರ ಪರೀಕ್ಷೆ ಮಾಡಬೇಕು. ಇದಕ್ಕೆ ಆರೋಗ್ಯ ಇಲಾಖೆಗೆ ಸ್ಥಳೀಯ ಸಂಸ್ಥೆಗಳು ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.


ನೀರು ಅಮೂಲ್ಯವಾದದ್ದು, ಜನರಿಗೆ ಸ್ವಚ್ಛ, ಸುರಕ್ಷೀತ ನೀರು ಕೊಡುವುದು ನಮ್ಮ ಕರ್ತವ್ಯ. ನಗರ ಹಾಗೂ ಗ್ರಾಮಗಳಲ್ಲಿ ಇರುವ ಎಲ್ಲ ನೀರಿನ ಟ್ಯಾಂಕ್‍ಗಳನ್ನು ಮಳೆಗಾಲ ಪೂರ್ವದಲ್ಲಿ ಸ್ವಚ್ಛಗೊಳಿಸಿ. ಸಣ್ಣಪುಟ್ಟ ದುರಸ್ತಿಗಳಿದ್ದರೆ ಮಾಡಿ. ಈ ಕುರಿತು ಸರ್ವೆ ಮಾಡಿ. ಯಾವ ಸ್ಥಳದಲ್ಲಿಯೂ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.


ಇದನ್ನೂ ಓದಿ: ಇಡೀ ಸಂಪುಟವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಬಸವರಾಜ ಬೊಮ್ಮಾಯಿ ಆರೋಪ


ಜಾತ್ರೆ, ವಿವಾಹ ಹಾಗೂ ಹೆಚ್ಚಿನ ಜನ ಸೇರುವ ಸ್ಥಳಗಳಲ್ಲಿ ಸರಬರಾಜು ಆಗುವ ಕುಡಿಯುವ ನೀರು, ಉಪಹಾರ, ಊಟಗಳನ್ನು ಪರಿಶೀಲನೆ ಮಾಡಿ. ಇಂದಿನ ದಿನಗಳಲ್ಲಿ ಜಾತ್ರೆ, ಉತ್ಸವಗಳಲ್ಲಿ ಸಾಮೂಹಿಕವಾಗಿ ಅನಾರೋಗ್ಯಕ್ಕೆ ಒಳಗಾಗುತ್ತಿರುವ ಪ್ರಕರಣಗಳು ವರದಿ ಆಗುತ್ತಿವೆ. ಆರೋಗ್ಯ ಇಲಾಖೆಯು ಸ್ಥಳೀಯ ಸಂಸ್ಥೆಯ ಸಹಯೋಗದಲ್ಲಿ ಜಿಲ್ಲೆಯಲ್ಲಿ ಜನರಿಗೆ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.


ಮಾನ್ಸೂನ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಮತ್ತು ರೋಗವಾಹಕ ಆಶ್ರಿತ ರೋಗಗಳಾದ ಮಲೇರಿಯಾ, ಡೆಂಗ್ಯು, ಚಿಕನ್‍ಗುನ್ಯ, ಮೆದುಳಜ್ವರ ನಿಯಂತ್ರಣಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್, ಸಾರ್ವಜನಿಕ ಆರೋಗ್ಯ ಇಂಜಿನಿಯರಿಂಗ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮೀನುಗಾರಿಕೆ ಇಲಾಖೆ, ಕೈಗಾರಿಕೆ ಇಲಾಖೆ, ನೀರಾವರಿ ಇಲಾಖೆ, ಕಂದಾಯ, ವಾರ್ತಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಹಾವು ಕಡಿತ ಈಗ ಅಧಿಸೂಚಿತ ರೋಗವಾಗಿದ್ದು, ಕೃಷಿಕರಲ್ಲಿ, ಕೃಷಿ ಕಾರ್ಮಿಕರಲ್ಲಿ ಈ ಕುರಿತು ಜಾಗೃತಿ ಮೂಡಿಸಬೇಕು. ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಇರುವ ಔಷಧಿಗಳ ಅಗತ್ಯ ದಾಸ್ತಾನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಮಹಾನಗರ ಪಾಲಿಕೆ ವರದಿ ಪ್ರಕಾರ ಅವಳಿನಗರದಲ್ಲಿ ಬೀದಿ ನಾಯಿಗಳು ಹೆಚ್ಚಾಗಿವೆ. ಕಳೆದ ವರ್ಷ ನಾಯಿ ಕಡಿತಕ್ಕೆ ಅನೇಕ ಜನ ಒಳಗಾಗಿದ್ದಾರೆ. ಇದನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಬೇಕು. ಶ್ವಾನ ಪಾಲನಾ ಕೇಂದ್ರಗಳಿಗೆ ನೀಡಬೇಕು ಮತ್ತು ಶ್ವಾನ ದತ್ತು ಯೋಜನೆ ಮೂಲಕ ಅಗತ್ಯವಿರುವ ನಾಗರಿಕರಿಗೆ ನಾಯಿ ಮರಿಗಳನ್ನು ಸಾಕಲು ಉಚಿತವಾಗಿ ನೀಡಬೇಕು. ಮುಂದಿನ ಮೂರು ತಿಂಗಳಲ್ಲಿ ಈ ಕುರಿತು ಕೈಗೊಂಡ ವರದಿಯನ್ನು ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಜಿಲ್ಲೆಯಲ್ಲಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಮತ್ತು ತಂಬಾಕು ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿರುವುದು ಆರೋಗ್ಯ ಇಲಾಖೆ ಸಕ್ರಿಯತೆ ತೋರುತ್ತದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರ ಆರೋಗ್ಯ ಸುರಕ್ಷತೆಗೆ ಪರಿಣಾಮಕಾರಿ ಕ್ರಮಗಳನ್ನು ಆರೋಗ್ಯ ಇಲಾಖೆ ಕೈಗೊಳ್ಳಬೇಕೆಂದು ಅವರು ತಿಳಿಸಿದರು.


ಧಾರವಾಡ ಜಿಲ್ಲೆಯ ಕುಡಿಯುವ ನೀರಿನ ಮೂಲಗಳ ಮಾಹಿತಿ: ಆರೋಗ್ಯ ಇಲಾಖೆ ಸಮೀಕ್ಷೆ ಕೈಗೊಂಡಿರುವ ಕುಡಿಯುವ ನೀರಿನ ಮೂಲಗಳ ವ್ಯಾಪ್ತಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಒಟ್ಟು 52 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಈ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪೆÇ್ರಟೊಕಾಲ್ ಪ್ರಕಾರ ಕುಡಿಯುವ ನೀರಿನ ಪರೀಕ್ಷೆ ಮಾಡಲಾಗುತ್ತಿದೆ. ಹಾಗೂ ಅದೇ ರೀತಿಯಲ್ಲಿ ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದಲ್ಲಿಯೂ ಕುಡಿಯುವ ನೀರಿನ ಪರೀಕ್ಷೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.


2024 ಜನೇವರಿ ಯಿಂದ ಮೇ 25 ರವರೆಗೆ ಒಟ್ಟು 5,213 ಪರೀಕ್ಷೆಗಳನ್ನು ಎಚ್‍ಟುಎಸ್ ಮೆಥೆಡ್ (H2S Method) ಮೂಲಕ ಮಾಡಲಾಗಿದ್ದು, ಅದರಲ್ಲಿ ಕುಡಿಯಲು ಯೋಗ್ಯವಾಗಿರುವ ನೀರು 5,071 ಬಂದಿದೆ, ಹಾಗೂ ಅಶುದ್ಧಯೆಂದು 142 ಮೂಲಗಳಲ್ಲಿ ಬಂದಿದ್ದನ್ನು, ಮತ್ತೊಮ್ಮೆ ಕ್ಲೋರಿನೇಷನ್ ಮಾಡಿಸಿ, ಮರು ಪರೀಕ್ಷೆಗೆ ಒಳಪಡಿಸಿದಾಗ 142 ಸ್ಥಳಗಳಲ್ಲಿಯೂ ಕುಡಿಯುವ ನೀರು ಯೋಗ್ಯವೆಂದು ವರದಿ ಬಂದಿದೆ ಎಂದು ಅವರು ತಿಳಿಸಿದರು.


ಪ್ರವಾಹ ಮತ್ತು ಮಳೆಗಾಲದಲ್ಲಿ ಉಲ್ಬಣಿಸಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸೂಕ್ತ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಆರೋಗ್ಯ ಇಲಾಖೆಗೆ ಸೂಚಿಸಿದರು.


ಪ್ರವಾಹಕ್ಕೆ ಒಳಪಟ್ಟ ಪ್ರದೇಶಗಳು ಹಾಗೂ ಪ್ರವಾಹ ಸಂಭವನೀಯ ಪ್ರದೇಶಗಳನ್ನು ಪೂರ್ವ ಭಾವಿಯಾಗಿ ಗುರುತಿಸಿ, ಪಟ್ಟಿಮಾಡಿ, ಆದ್ಯತೆಯ ಮೇರೆಗೆ ಸಾರ್ವಜನಿಕರ ಆರೋಗ್ಯ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸನ್ನದ್ಧವಾಗಿರಬೇಕು ಎಂದು ಅವರು ಹೇಳಿದರು.


ಪ್ರವಾಹವು ಸಾರ್ವಜನಿಕರ ಆರೋಗ್ಯದ ಮೇಲೆ ಗಣನೀಯ ಪರಿಣಾಮ ಬಿರುವುದರಿಂದ, ಪ್ರವಾಹ ಕಾಲದಲ್ಲಿ ಮತ್ತು ಪ್ರವಾಹ ನಂತರ ಉಂಟಾಗಬಹುದಾದ ಅತಿಸಾರ ಭೇದಿ ಮತ್ತು ಕಾಲರಾ, ಕರಳುಬೇನೆ ಪ್ರಕರಣಗಳನ್ನು ಗುರುತಿಸಲು ಮತ್ತು ನಿಯಂತ್ರಿಸಲು ಕ್ರಮವಹಿಸಬೇಕು. ತಾಲೂಕು ವ್ಯಾಪ್ತಿಯಲ್ಲಿ ಬರುವ ನಗರ ಪ್ರಾದೇಶಿಕ ಆರೋಗ್ಯ ಕೇಂದ್ರಗಳಲ್ಲಿ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ತಂಡವನ್ನು ರಚಿಸಿ, ತಾಲೂಕುವಾರು ವರದಿಯನ್ನು ಕಚೇರಿಗೆ ಸಲ್ಲಿಸಬೇಕು ಹಾಗೂ ಅತೀವೃಷ್ಟಿ ಮತ್ತು ನೆರೆಹಾವಳಿಗೊಳಗಾದ ಪ್ರದೇಶಗಳಿಗೆ ತಂಡದೊಂದಿಗೆ ಭೇಟಿ ನೀಡಿ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮಕೈಗೊಳ್ಳುಬೇಕು ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಕೈಗೆಟುಕುವ ಬೆಲೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್


ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ನಗರ ಆರೋಗ್ಯ ಕೇಂದ್ರ ವ್ಯಾಪ್ತಿಯ ಎಲ್ಲ ಕುಡಿಯುವ ನೀರಿನ ಮೂಲಗಳಿಂದ ನೀರಿನ ಮಾದರಿಗಳನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸುವುದು ಮತ್ತು ಎಮ್.ಪಿ.ಎನ್ ಪರೀಕ್ಷೆಗಾಗಿ ಜಿಲ್ಲಾ ಸರ್ವೇಕ್ಷಣಾ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡುವುದು. ಅತೀವೃಷ್ಠಿ ಹಾಗೂ ನೆರೆಹಾವಳಿಗೊಳಗಾದ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವರದಿಯನ್ನು ಸಲ್ಲಿಸಬೇಕು ಮತ್ತು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಅಗತ್ಯ ಔಷಧಿಗಳನ್ನು ದಾಸ್ತಾನು ಇಟ್ಟುಕೊಳ್ಳುಬೇಕು ಎಂದು ಅವರು ಹೇಳಿದರು.


ಯಾವುದಾದರೂ ಸಾಂಕ್ರಾಮಿಕ ರೋಗಗಳು ಉಲ್ಬಣಗೊಂಡ ಪ್ರದೇಶಗಳಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ತೆರೆದು ಚಿಕಿತ್ಸೆ ನೀಡುವುದು, ಅಗತ್ಯವಿದ್ದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕಾ ಆಸ್ಪತ್ರೆಗೆ ಅಥವಾ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿ ಕೊಡುವುದು, ಪ್ರಯೋಗ ಶಾಲಾ ಮಾದರಿಗಳನ್ನು ಕಿಮ್ಸ್ ಆಸ್ಪತ್ರೆಯ ಮೈಕ್ರೋ ಬಯೋಲಜಿ ವಿಭಾಗಕ್ಕೆ ಕಳುಹಿಸಿ ಕೊಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದರು.


ಸಾರ್ವಜನಿಕರಲ್ಲಿ ವೈಯಕ್ತಿಕ ಸ್ವಚ್ಛತೆ, ಶುದ್ಧ ಕುಡಿಯುವ ನೀರಿನ ಹಾಗೂ ಆಹಾರದ ಸಂರಕ್ಷಣೆ, ಪರಿಸರ ನೈರ್ಮಲ್ಯದ ನಿರ್ವಹಣೆ ಬಗ್ಗೆ ತಿಳಿಸಬೇಕು. ಮತ್ತು ರಸ್ತೆ, ಬೀದಿ ಬದಿಗಳಲ್ಲಿ ಮಾರುವ ಕತ್ತರಿಸಿದ ಹಣ್ಣು, ಪ್ರವಾಹದಲ್ಲಿ ಹಾನಿಗೊಳಗಾದ ಆಹಾರ ಪದಾರ್ಥಗಳನ್ನು ಸೇವಿಸಬಾರದೆಂದು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಲು ಎಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಅವರು ಹೇಳಿದರು.


ಸ್ಥಳೀಯ ಆಹಾರ ಸುರಕ್ಷತಾ ಅಧಿಕಾರಿಗಳು, ಹೋಟೆಲ್ ಮತ್ತು ಅಂಗಡಿಗಳಿಗೆ ಭೇಟಿ ನೀಡಿ, ನಿರಂತರ ತಪಾಸಣೆ ನಡೆಸಿ, ಆಹಾರ ಮತ್ತು ನೀರಿನ ಗುಣಮಟ್ಟ, ಸುರಕ್ಷತೆ ಬಗ್ಗೆ ಗಮನಹರಿಸಬೇಕು. ತುರ್ತು ಸಂದರ್ಭಗಳಲ್ಲಿ ಬಿಸಿ ನೀರು ಸರಬರಾಜು ಮಾಡಲು ಹೋಟಲ್ ಮಾಲೀಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಬೇಕೆಂದು ಅವರು ತಿಳಿಸಿದರು.


*ಗ್ರಾಮ ಪಂಚಾಯತಿಗಳ ಕರ್ತವ್ಯ:* ಶುದ್ಧ ಕುಡಿಯುವ ನೀರು ಹಾಗೂ ಸಮರ್ಪಕ ನೈರ್ಮಲ್ಯ ನಿರ್ವಹಣೆಯಲ್ಲಿ ಅಗತ್ಯವಿರುವ ದುರಸ್ಥಿ ಕಾರ್ಯಗಳನ್ನು ಪೂರ್ವಭಾವಿಯಾಗಿ ಗುರುತಿಸಿ ಸರಿಪಡಿಸುವುದು ಮತ್ತು ನೀರು ಸಂಗ್ರಹಿಸುವ ಟ್ಯಾಂಕ್‍ಗಳನ್ನು ಬೀಚಿಂಗ್ ಪುಡಿಯಿಂದ ಸ್ವಚ್ಛಗೊಳಿಸಿ, ನೀರು ಶೇಖರಣೆ ಮಾಡವುದು, ಕುಡಿಯುವ ನೀರು ಕಲುಷಿತವಾಗದಂತೆ ಪೂರೈಕೆ ವ್ಯವಸ್ಥೆಯಲ್ಲಿ ಸೋರುವಿಕೆಯನ್ನು ಗುರುತಿಸಿ, ತಕ್ಷಣ ದುರಸ್ತಿಗೊಳಿಸುವುದು ಗ್ರಾಮ ಪಂಚಾಯತಿ ಮತ್ತು ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿಯ ಆದ್ಯ ಕರ್ತವ್ಯವಾಗಿದೆ.


ಯಾವುದೇ ರೋಗ ಕಂಡುಬಂದಲ್ಲಿ, ಪರಿಸ್ಥಿತಿ ಹತೋಟಿಗೆ ಬರುವವರೆಗೆ ಶುದ್ದೀಕರಿಸಿದ ನೀರನ್ನು ಟ್ಯಾಂಕರ್‍ಗಳ ಮೂಲಕ ಪೂರೈಸಬೇಕು. ಗ್ರಾಮದಲ್ಲಿ ನೈರ್ಮಲ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.


ಅಗತ್ಯ ಆರೋಗ್ಯ ಶಿಕ್ಷಣ ಪರಿಕರಗಳ ದಾಸ್ತಾನು ಹಾಗೂ ವಿತರಣೆ ಮತ್ತು ಜನಜಾಗೃತಿ ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆ ಹಮ್ಮಿಕೊಳ್ಳಬೇಕು. ಗರ್ಭಿಣಿಯರು, ಬಾಣಂತಿಯರು ಮತ್ತು ವಯೋವೃದ್ಧರ, ಅಸಾಂಕ್ರಾಮಿಕ ರೋಗಿಗಳ ಆರೋಗ್ಯ ಕುರಿತಂತೆ ವಿಶೇಷ ಕಾಳಜಿ ವಹಿಸಬೇಕು. ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯವರು ಕೇಂದ್ರಸ್ಥಾನದಲ್ಲಿದ್ದು ಸಾರ್ವಜನಿಕರಿಗೆ ಆರೋಗ್ಯ ಸೇವೆಯನ್ನು ಒದಗಿಸುವುದು ತಮ್ಮ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಬಿ., ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಆರ್.ಸಿ.ಎಚ್.ಓ ಅಧಿಕಾರಿ ಡಾ. ಸುಜಾತಾ ಹಸವಿಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ.ಎಸ್., ಪಶುವೈದ್ಯಕೀಯ ಮತ್ತು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ರವಿ ಸಾಲಿಗೌಡರ, ಮಹಾನಗರ ಪಾಲಿಕೆಯ ಮುಖ್ಯಾವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ, ಪಶುವೈದ್ಯಕೀಯ ವಿಭಾಗದ ಡಾ. ಕುಲಕರ್ಣಿ ಹಾಗೂ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಅನುμÁ್ಠನ ಅಧಿಕಾರಿಗಳಾದ ಡಾ. ಪರಶುರಾಮ ಎಫ್.ಕೆ., ಡಾ. ಮಂಜುನಾಥ ಸೊಪ್ಪಿಮಠ, ಡಾ.ರವೀಂದ್ರ ಬೋವೆರ, ಡಾ.ಮಹೇಶ ಚಿತ್ತರಗಿ, ಡಾ.ಎಸ್.ಬಿ.ಕಳಸೂರಮಠ, ಡಾ.ಮಂಜುನಾಥ, ಧಾರವಾಡ ತಾಲೂಕು ವೈಧ್ಯಾಧಿಕಾರಿ ಡಾ.ಕೆ.ಎನ್.ತನುಜಾ ಸೇರಿದಂತೆ ವಿವಿಧ ತಾಲೂಕುಗಳ ವೈಧ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.