ಕಲಬುರಗಿ: ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಇಂದು ರಾಜ್ಯದ 14 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಉಳಿದ 14 ಸ್ಥಾನಗಳಿಗೆ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 23ರ ಚುನಾವಣೆಗೆ ಅಂತಿಮ ಹಂತದ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿರುವ ಅಭ್ಯರ್ಥಿಗಳು ಗೆಲುವು ಸಾಧಿಸಲು ನಾನಾ ಕಸರತ್ತು ನಡೆಸಿದ್ದಾರೆ. 


COMMERCIAL BREAK
SCROLL TO CONTINUE READING

ರಾಜ್ಯದ ಹೈ ಪ್ರೊಫೈಲ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಈ ಬಾರಿ ತಮ್ಮ ಪರ ಚುನಾವಣಾ ಪ್ರಚಾರಕ್ಕೆ ತೆಲುಗು ನಟಿ ವಿಜಯಶಾಂತಿ ಅವರನ್ನು ಕರೆತರಲಿದ್ದಾರೆ ಎನ್ನಲಾಗಿದೆ. ಕರ್ನಾಟಕ-ಆಂದ್ರ ಗಡಿ ಭಾಗದ ಮತದಾರರನ್ನು ಸೆಳೆಯಲು ಖರ್ಗೆ ಈ ನಿರ್ಧಾರ ಕೈಗೊಂಡಿದ್ದಾರೆ.


ಮೂಲಗಳ ಪ್ರಕಾರ, ಏಪ್ರಿಲ್ 19ರಂದು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ನಾಲ್ಕು ಕಡೆಯಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ನಟಿ ವಿಜಯಶಾಂತಿ ಅವರು ಭಾಗಿಯಾಗಲಿದ್ದು, ಖರ್ಗೆ ಪರವಾಗಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.


ಈಗಾಗಲೇ ಸತತ 9 ಬಾರಿ ಶಾಸಕರಾಗಿ ಆಯ್ಕೆಯಾಗುವುದರ ಜತೆಗೆ ಸತತ 2 ಬಾರಿ ಸಂಸದರಾಗಿಯೂ ಗೆಲುವು ಸಾಧಿಸಿ ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ಖರ್ಗೆ, ಈ ಬಾರಿಯೂ ಕಲಬುರಗಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.