ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರಕ್ಕೆ ಭರ್ಜರಿ ತಯಾರಿ ನಡೆಸಿದ್ದು, ಇದಕ್ಕೆ ಮುನ್ನುಡಿಯಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಹಾವೇರಿಗೆ ಆಗಮಿಸಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.


COMMERCIAL BREAK
SCROLL TO CONTINUE READING

ಹಾವೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಜನ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ರಣಕಹಳೆ ಊದಲಿದ್ದಾರೆ.


ಈಗಾಗಲೇ ಸಮಾವೇಶಕ್ಕಾಗಿ ಬೃಹತ್​ ವೇದಿಕೆ ಸಿದ್ಧವಾಗಿದ್ದು,  ಹಾವೇರಿ ಮತ್ತು ಗದಗ ಜಿಲ್ಲೆಗಳ ಕಾರ್ಯಕರ್ತರು ಮತ್ತು ಸಾರ್ವಜನಿಕರು ಆಗಮಿಸುವ ಹಿನ್ನೆಲೆಯಲ್ಲಿ 40 ಸಾವಿರಕ್ಕೂ ಹೆಚ್ಚು ಖುರ್ಚಿಗಳು,  10 ಎಲ್‌ಇಡಿ ಟಿ.ವಿ. ಪರದೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಭದ್ರತೆ ದೃಷ್ಟಿಯಿಂದ ಸುತ್ತಮುತ್ತಲೂ ಸಿ.ಸಿ. ಕ್ಯಾಮರಾ ಕಣ್ಗಾವಲು ಅಳವಡಿಸಲಾಗಿದೆ. ಸಮೀಪದಲ್ಲೇ ಹೆಲಿಪ್ಯಾಡ್ ನಿರ್ಮಿಸಲಾಗಿದ್ದು, ನಗರಾದ್ಯಂತ ರಾಹುಲ್ ಗಾಂಧಿಗೆ ಸ್ವಾಗತ ಕೋರುವ ಬ್ಯಾನರ್ಗಳು ರಾರಾಜಿಸುತ್ತಿವೆ. 


ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್‌, ಮಾಜಿ ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಜಮೀರ್ ಅಹಮದ್ ಸೇರಿದಂತೆ ಅನೇಕ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.