ಬೆಂಗಳೂರು: ಜಾತಿ-ಧರ್ಮಗಳ ನಡುವೆ ಜಗಳ ಹಚ್ಚಿ ಚುನಾವಣೆಯಲ್ಲಿ ಲಾಭ ಗಳಿಸುವ ದುರುದ್ದೇಶದ, ತಪ್ಪು ಮಾಹಿತಿ ಆಧರಿಸಿದ ಮತ್ತು ಸಂವಿಧಾನ ವಿರೋಧಿಯಾದ ಪರಿಷ್ಕೃತ ಮೀಸಲಾತಿಯನ್ನು ಪ್ರಕಟಿಸಿರುವ ರಾಜ್ಯ ಸರ್ಕಾರವನ್ನು ತಕ್ಷಣ ವಜಾಗೊಳಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಚುನಾವಣೆ ಘೋಷಣೆಗೆ ದಿನ ಎಣಿಕೆ ನಡೆಯುತ್ತಿರುವಾಗ ಅವಸರದಲ್ಲಿ ಪ್ರಕಟಿಸಲಾಗಿರುವ ಮೀಸಲಾತಿ ನೀತಿ ದೋಷಪೂರ್ಣವಾಗಿದ್ದು ಅನುಷ್ಠಾನಗೊಳಿಸಲು ಸಮಯವಕಾಶವೇ ಇಲ್ಲ. ವಿಶ್ವಾಸಾರ್ಹ ಮಾಹಿತಿ ಇಲ್ಲದ ಈ ಮೀಸಲಾತಿ ನೀತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ರದ್ದಾಗುವುದು ಖಂಡಿತ.


ಅವಕಾಶ ವಂಚಿತರಿಗೆ ವಿಶೇಷ ಸವಲತ್ತು ನೀಡಿ, ಅವರನ್ನು ಕೂಡ ಮುಖ್ಯವಾಹಿನಿಗೆ ತರಬೇಕು ಎನ್ನುವುದು ಸಂವಿಧಾನದ 14ನೇ ಪರಿಚ್ಛೇದದ ಆಶಯವಾಗಿದೆ. 15 ಮತ್ತು 16ನೇ ಪರಿಚ್ಛೇದವು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದೆ.ಪರಿಷ್ಕೃತ ಮೀಸಲಾತಿ ನೀತಿ ಇದಕ್ಕೆ ವಿರುದ್ಧವಾಗಿದೆ.ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿಯವರೆಗೆ ಮೀಸಲಾತಿ ಇರಬೇಕು ಎಂದು ಬಾಬಾ ಸಾಹೇಬರು ಹೇಳಿದ್ದಾರೆ. ಜಾತಿ ವ್ಯವಸ್ಥೆ ಇರುವುದರಿಂದಲೇ ಅಸಮಾನತೆ ನಿರ್ಮಾಣವಾಗಿರುವುದು.ಇನ್ನೂ ಎಷ್ಟು ಕಾಲ ಮೀಸಲಾತಿ ಪದ್ಧತಿ ಇರಬೇಕು ಎಂದು ವ್ಯಂಗ್ಯವಾಡುವವರು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.NIA : ಕುಕ್ಕರ್ ಬಾಂಬ್ ರೂವಾರಿ ಶಾರೀಖ್ ಬಗ್ಗೆ ಸ್ಫೋಟಕ ಮಾಹಿತಿ ಪತ್ತೆ!


ಮೇ 1995ರಿಂದ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗಿದೆ. ಇದನ್ನು ರದ್ದು ಮಾಡಿ ಎಂದು ಈ ವರೆಗೆ ಯಾವುದೇ ನ್ಯಾಯಾಲಯದ ತೀರ್ಪು ಬಂದಿಲ್ಲ, ಯಾವ ಸಮಿತಿಯ ವರದಿಗಳು ಬಂದಿಲ್ಲ. ಹೀಗಿರುವಾಗ ರಾಜ್ಯ ಸರ್ಕಾರ ಯಾಕೆ ಮುಸ್ಲಿಂಮರ ಮೀಸಲಾತಿ ರದ್ದು ಮಾಡುವ ನಿರ್ಧಾರ ಕೈಗೊಂಡಿದೆ.ಮುಸ್ಲಿಂಮರ ಮೀಸಲಾತಿ ರದ್ದುಗೊಳಿಸಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ.ಮುಸ್ಲಿಂಮರಿಗೆ ಈಗಲೂ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲಾಗಿಲ್ಲ. 13% ಇರುವ ಮುಸ್ಲಿಮರಿಗೆ ಅಲ್ಪಸಂಖ್ಯಾತರೊಟ್ಟಿಗೆ 4% ಮೀಸಲಾತಿ ನೀಡಲಾಗಿತ್ತು,ಈಗ ಅದನ್ನು ಕಿತ್ತುಹಾಕಲಾಗಿದೆ ಎಂದು ಕಿಡಿ ಕಾರಿದರು.


ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರ ಪ್ರಕಟ


ಬಿಜೆಪಿ ಎಂದಿಗೂ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ. ಮಂಡಲ್ ಕಮಿಷನ್ ವರದಿ, ಉನ್ನತ ಶಿಕ್ಷಣದಲ್ಲಿ ಮೀಸಲಾತಿ ನೀಡುವುದನ್ನು ವಿರೋಧ ಮಾಡಿದ್ದು ಬಿಜೆಪಿಯವರೇ. ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ತಂದಾಗ ಅದನ್ನು ವಿರೋಧಿಸಿ ರಾಮಾ ಜೋಯಿಸ್ ಅವರು ಸುಪ್ರೀಂ ಕೋರ್ಟ್ ಗೆ ಹೋಗಿದ್ದರು.ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ನೀಡಿದಾಗ ಅದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿ ಸ್ವತಃ ರಾಮಾ ಜೋಯಿಸ್ ಅವರೇ ವಾದ ಮಾಡಿದ್ದರು, ಆಗ ಯಡಿಯೂರಪ್ಪ, ಈಶ್ವರಪ್ಪ ಎಲ್ಲಿದ್ದರು? ಈ ರಾಮಾಜೋಯಿಸ್ ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿರಲಿಲ್ವಾ? ಎಂದು ಪ್ರಶ್ನಿಸಿದರು.


ಸ್ವಾತಂತ್ರ್ಯ ನಂತರ ನಮ್ಮ ದೇಶ ಸಂವಿಧಾನವನ್ನು ಒಪ್ಪಿಕೊಳ್ಳುವಾಗ ಆರ್.ಎಸ್.ಎಸ್ ನ ಮುಖವಾಣಿ ಪತ್ರಿಕೆಗಳು ಅದನ್ನು ವಿರೋಧಿಸಿ ಲೇಖನಗಳನ್ನು ಪ್ರಕಟಿಸಿದ್ದವು. ಆರ್.ಎಸ್.ಎಸ್ ನ ಆದರ್ಶ ಪುರುಷರಾದ ಗೋಲ್ವಾಲ್ಕರ್, ಸಾವರ್ಕರ್ ಕೂಡಾ ಮೀಸಲಾತಿಯನ್ನು ವಿರೋಧಿಸಿದ್ದರು. ಮೀಸಲಾತಿ ಪರಿಷ್ಕರಿಸಲು ಸರ್ಕಾರದ ಬಳಿ ಯಾವ ವಿಶ್ವಾಸಾರ್ಹ ಮಾಹಿತಿ ಇದೆ?  ಇಂತಹ ವರದಿಗಳು ಇಲ್ಲದ ಕಾರಣಕ್ಕೆ ಮಹಾರಾಷ್ಟ್ರ ಹರಿಯಾಣ ಮೊದಲಾದ ರಾಜ್ಯಗಳಲ್ಲಿ ಮೀಸಲಾತಿ ಪರಿಷ್ಕರಣೆಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ರಾಜ್ಯದ ಪರಿಷ್ಕೃತ ಮೀಸಲಾತಿ ನೀತಿಗೂ ಅದೇ ಗತಿ ಆಗಲಿದೆ.ಕಾಂಗ್ರೆಸ್ ಸದಾ ಸಾಮಾಜಿಕ ನ್ಯಾಯದ ಪರ ಇರುವ ಪಕ್ಷ. ನಾವು ಯಾವುದೇ ಜಾತಿ, ಧರ್ಮ, ಲಿಂಗದ ಜನರಿಗೆ ತಾರತಮ್ಯ ಮಾಡದೆ ರಕ್ಷಣೆ ಸಿಗಬೇಕು ಎಂದು ಪ್ರತಿಪಾದಿಸುವವರು.


ಎಲ್ಲಾ ಕಾಲದಲ್ಲೂ ಮೀಸಲಾತಿ ನೀಡಿದವರು, ಅವಕಾಶವಂಚಿತರಿಗೆ ಮೀಸಲಾತಿ ಕಲ್ಪಿಸಲು ಸಂವಿಧಾನ ತಿದ್ದುಪಡಿ ಮಾಡಿದವರು ನಾವೆ.ಮೀಸಲಾತಿ ವಿಷಯದಲ್ಲಿ ಬಿಜೆಪಿ ಮಾಡಿರುವ ಏಕೈಕ ಸಂವಿಧಾನ ತಿದ್ದುಪಡಿ ಎಂದರೆ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಿರುವುದು. ಬಿಜೆಪಿ ಪಕ್ಷ ಎಂದಾದರೂ ಪ್ರಾಮಾಣಿಕವಾಗಿ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಪರ ಮಾತನಾಡಿದೆಯೇ? ಎಂದು ಪ್ರಶ್ನಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.