ಬೆಂಗಳೂರು: ಇತಿಹಾಸವನ್ನು ಪುನಃ ಬರೆಯುವ ಬಗ್ಗೆ ಬಿಜೆಪಿ ನಾಯಕರು ಮಾತನಾಡಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಟಿಪ್ಪು ಸುಲ್ತಾನ್ ಹೆಸರನ್ನು ಶಾಲಾ ಪಠ್ಯಪುಸ್ತಕಗಳಿಂದ ತೆಗೆದುಹಾಕುವ ಪ್ರಸ್ತಾಪದ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಎಎನ್ಐಗೆ ಪ್ರತಿಕ್ರಿಯಿಸಿರುವ ಅವರು, ಬಿಜೆಪಿ ನಾಯಕರು ಇತಿಹಾಸವನ್ನು ಪುನಃ ಬರೆಯುವ ಬಗ್ಗೆ ಮಾತನಾಡಬಾರದು. ಇದು ಸಮಾಜದಲ್ಲಿ ಶಾಂತಿಯನ್ನು ಹಾಳು ಮಾಡಲಿದೆ ಎಂದು ಹೇಳಿದರು.
ಕೊಡಗು ಪ್ರದೇಶದಿಂದ ಬರುವ ಪ್ರತಿಯೊಬ್ಬ ಬಿಜೆಪಿ ನಾಯಕ ಟಿಪ್ಪು ಸುಲ್ತಾನ್ ಹೆಸರನ್ನು ಇತಿಹಾಸದಿಂದ ತೆಗೆದುಹಾಕುವಂತೆ ಒತ್ತಾಯಿಸುತ್ತಾರೆ. ಹಾಗೆಂದ ಮಾತ್ರಕ್ಕೆ ಅವರ ಒತ್ತಾಯಕ್ಕೆ ಸಿಎಂ ಯಡಿಯೂರಪ್ಪ ಮಣಿದು, ಟಿಪ್ಪು ಸುಲ್ತಾನ್ ಹೆಸರನ್ನು ತೆಗೆದುಹಾಕುವಂತಹ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಟಿ.ಬಿ.ಜಯಚಂದ್ರ ಹೇಳಿದರು.
ಬುಧವಾರ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಎಲ್ಲಾ ಪಠ್ಯಪುಸ್ತಕಗಳಿಂದ ಟಿಪ್ಪು ಸುಲ್ತಾನ್ ಕುರಿತಾದ ವಿಷಯಗಳನ್ನು ತೆಗೆದು ಹಾಕಳು ಸರ್ಕಾರ ಚಿಂತನೆ ನಡೆಸಿದೆ. ಟಿಪ್ಪುವನ್ನು ವಿರೋಧಿಸುವ ನಮ್ಮ ಪಕ್ಷ ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆಗೆ ಒಪ್ಪಿಗೆ ನೀಡುವುದಿಲ್ಲ ಎಂದು ಹೇಳಿದ್ದರು.
ಇದಕ್ಕೂ ಮುನ್ನ ಅಕ್ಟೋಬರ್ 28 ರಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದು, ಇತಿಹಾಸ ಪಠ್ಯಪುಸ್ತಕಗಳಿಂದ ಟಿಪ್ಪು ಸುಲ್ತಾನರ ಉಲ್ಲೇಖಗಳನ್ನು ರದ್ದು ಮಾಡುವ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಅವರ ಪ್ರಸ್ತಾವನೆಯ ಕುರಿತು ಮೂರು ದಿನಗಳಲ್ಲಿ ವರದಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ.