ಬಿ.ಎಸ್.ಯಡಿಯೂರಪ್ಪ ಸರ್ಕಾರ ರಾಜ್ಯವನ್ನು ಆರ್ಥಿಕ ದಿವಾಳಿಗೆ ತಳ್ಳುತ್ತಿದೆ.- ಸಿದ್ದರಾಮಯ್ಯ

ರಾಜ್ಯದಲ್ಲಿನ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಶಿಸ್ತಿನ ಕೊರತೆ ಇದೆ, ಅದು ರಾಜ್ಯವನ್ನು ಆರ್ಥಿಕ ದಿವಾಳಿಗೆ ತಳ್ಳುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

Last Updated : Sep 25, 2020, 05:13 PM IST
ಬಿ.ಎಸ್.ಯಡಿಯೂರಪ್ಪ ಸರ್ಕಾರ ರಾಜ್ಯವನ್ನು ಆರ್ಥಿಕ ದಿವಾಳಿಗೆ ತಳ್ಳುತ್ತಿದೆ.- ಸಿದ್ದರಾಮಯ್ಯ title=
Photo Courtsey : facebook

ಬೆಂಗಳೂರು: ರಾಜ್ಯದಲ್ಲಿನ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಶಿಸ್ತಿನ ಕೊರತೆ ಇದೆ, ಅದು ರಾಜ್ಯವನ್ನು ಆರ್ಥಿಕ ದಿವಾಳಿಗೆ ತಳ್ಳುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ರಾಜ್ಯದ ವಿತ್ತೀಯ ಕೊರತೆ ನಮ್ಮ ಆಂತರಿಕ ಉತ್ಪನ್ನದ(GSDP) ಶೇಕಡಾ ಮೂರನ್ನು ಮೀರಬಾರದು ಎಂದು ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ ಹೇಳಿದೆ. ಬಿ.ಎಸ್ ಯಡಿಯೂರಪ್ಪ ಸರ್ಕಾರ ಈ ಮಿತಿಯನ್ನು ಶೇಕಡಾ 5ಕ್ಕೆ ಹೆಚ್ಚಿಸಲು ಹೊರಟಿರುವುದು ರಾಜ್ಯದ ಆರ್ಥಿಕತೆಗೆ ಬೀಳುವ ಮಾರಣಾಂತಿಕ ಹೊಡೆತ ಎಂದು ಹೇಳಿದರು

ಯಡಿಯೂರಪ್ಪ ವಿರುದ್ಧ ಅವಿಶ್ವಾಸ ಮಂಡಿಸಲು ತೀರ್ಮಾನ ಮಾಡಿದ್ದೇವೆ: ಸಿದ್ದರಾಮಯ್ಯ

ಮುಖ್ಯಮಂತ್ರಿಯಾಗಿ ನಾನು ಮಂಡಿಸಿದ್ದ ಆರು ಆಯವ್ಯಯಪತ್ರಗಳಲ್ಲಿ ವಿತ್ತೀಯಕೊರತೆ ಎಂದೂ ಶೇಕಡಾ ಮೂರರ ಮಿತಿಯನ್ನು ಮೀರಿರಲಿಲ್ಲ. ನನ್ನ ಕೊನೆಯ ಬಜೆಟ್ ನಲ್ಲಿ ಈ ಮಿತಿ ಶೇಕಡಾ 2.49ರಷ್ಟಿತ್ತು. ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳಲು ಇದು ಅನಿವಾರ್ಯ ಯಡಿಯೂರಪ್ಪ ಸರ್ಕಾರ ರಾಜ್ಯವನ್ನು ಆರ್ಥಿಕ ದಿವಾಳಿಗೆ ತಳ್ಳುತ್ತಿದೆ ಎಂದು ಟೀಕಿಸಿದರು. 

ವಿತ್ತೀಯ ಹೊಣೆಗಾರಿಕೆ ಅಧಿನಿಯಮದ ಪ್ರಕಾರ ನಮ್ಮ ಸಾಲ 25%ರ ಮಿತಿಯಲ್ಲಿರಬೇಕಾಗುತ್ತದೆ.. ನಾನೆಂದೂ ಈ ಮಿತಿಯನ್ನು ಮೀರಿರಲಿಲ್ಲ. ಆದರೆ ಬಿ.ಎಸ್ ಯಡಿಯೂರಪ್ಪ ಸರ್ಕಾರ ರೂ.53000 ಕೋಟಿ ಸಾಲ ಮಾಡಿದೆ, ಈಗ ಹೆಚ್ಚುವರಿಯಾಗಿ ರೂ.33,000 ಕೋಟಿ ಸಾಲ ಎತ್ತಲು ಹೊರಟಿದೆ. ಈ ಒಟ್ಟು ಸಾಲ ಖಂಡಿತ 25%ರ ಮಿತಿಯನ್ನು ಮೀರಲಿದೆ ಎಂದರು.

2020-21ರ ಆಯವ್ಯಯದಲ್ಲಿ ನಮ್ಮ ಒಟ್ಟು ಆಂತರಿಕ ಉತ್ಪನ್ನ ರೂ.18 ಲಕ್ಷ ಕೋಟಿ ಎಂದು ಅಂದಾಜು ಮಾಡಲಾಗಿದೆ. ಆದರೆ ಕೊರೊನಾ ಹಾವಳಿ ಮತ್ತು ರಾಜ್ಯ ಸರ್ಕಾರದ ಆರ್ಥಿಕ ಎಡವಟ್ಟುಗಳ ಕಾರಣದಿಂದ ಅದು ರೂ.12 ಲಕ್ಷ ಕೋಟಿಗಿಂತಲೂ ಕೆಳಗಿಳಿಯಬಹುದು. ಆಗ ನಮ್ಮ ಸಾಲದ ಸಾಮರ್ಥ್ಯ ಕೂಡಾ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಸಂವಿಧಾನದ 101ನೇ ತಿದ್ದುಪಡಿ ಮೂಲಕ ಕಾರ್ಯರೂಪಕ್ಕೆ ಬಂದಿರುವ ಜಿಎಸ್ ಟಿ ಕಾಯ್ದೆಯ ಸೆಕ್ಷನ್ 18ರ ಪ್ರಕಾರ 5 ವರ್ಷಗಳ ಕಾಲ ಜಿಎಸ್ ಟಿ ಪರಿಹಾರ ನೀಡಬೇಕಾಗಿರುವುದು ಸಂವಿಧಾನಾತ್ಮಕ ಕರ್ತವ್ಯ. ಈ ಪರಿಹಾರದ ನಿರಾಕರಣೆ ನಮ್ಮ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳು, ಸಿಎಂ ಇಡೀ ಕುಟುಂಬದಿಂದ ಭ್ರಷ್ಟಾಚಾರ: ಗಂಭೀರ ಆರೋಪ

2020-2021ರ ಆರ್ಥಿಕ ವರ್ಷದ ಅಂತ್ಯಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಜಿಎಸ್ ಟಿ ಪರಿಹಾರವಾಗಿ ರೂ.30,000 ಕೋಟಿ ನೀಡಬೇಕಾಗುತ್ತದೆ. ಕೇಂದ್ರ ಸರ್ಕಾರದ ಅನ್ಯಾಯವನ್ನು ಪ್ರತಿಭಟಿಸಲಿಕ್ಕಾಗದ ಮುಖ್ಯಮಂತ್ರಿಗಳು ಜಿಎಸ್ ಟಿ ಪರಿಹಾರವನ್ನು ತುಂಬಿಕೊಳ್ಳಲು ಆರ್ ಬಿ ಐನಿಂದ ಸಾಲ ಪಡೆಯಲು ಹೊರಟು ರಾಜ್ಯವನ್ನು ಸಾಲದ ಶೂಲಕ್ಕೆ ಒಡ್ಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಹಿತದೃಷ್ಟಿಯಿಂದ ವಿತ್ತೀಯ ಕೊರತೆಯ ಮಿತಿಯನ್ನು 3% ಇಂದ 5% ಗೆ ಏರಿಕೆ ಮಾಡುವುದು ಸರಿಯಲ್ಲ. ಹೆಚ್ಚೆಂದರೆ 3.5 ಕ್ಕೆ ಏರಿಕೆ ಮಾಡಿ, ಮುಂದಿನ ದಿನಗಳಲ್ಲಿ ಮತ್ತೆ ಇಳಿಕೆ ಮಾಡಬೇಕು. 5% ಗೆ ಏರಿಕೆ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ.
ಈಗಿನ ಆರ್ಥಿಕ ಸಂಕಷ್ಟದಿಂದ ಪಾರಾಗಬೇಕಾದರೆ ರಾಜ್ಯ ಸರ್ಕಾರ ಬದ್ಧತಾ ವೆಚ್ಚಕ್ಕೆ ಕಡಿವಾಣ ಹಾಕಬೇಕಾಗಿದೆ. ದುಂದು ವೆಚ್ಚಗಳನ್ನು ನಿಲ್ಲಿಸಬೇಕು, ಅನಗತ್ಯ ಹುದ್ದೆಗಳನ್ನು ರದ್ದುಮಾಡಬೇಕು, ತೆರಿಗೆಯೇತರ ಆದಾಯವನ್ನು ಹೆಚ್ಚಿಸಬೇಕು. ಆರ್ಥಿಕ ಶಿಸ್ತನ್ನು ಪಾಲಿಸಬೇಕು

14ನೇ ಹಣಕಾಸು ಆಯೋಗದಲ್ಲಿ 4.71% ಇದ್ದ ರಾಜ್ಯದ ಪಾಲನ್ನು 15ನೇ ಹಣಕಾಸು ಆಯೋಗದಲ್ಲಿ 3.64%ಗೆ ಇಳಿಸಲಾಗಿದೆ. ಇದರಿಂದ ರಾಜ್ಯಕ್ಕೆ ರೂ.12 ಸಾವಿರ ಕೋಟಿ ನಷ್ಟವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಆಯೋಗ ಶಿಫಾರಸು ಮಾಡಿದ್ದ ರೂ.5495 ಕೋಟಿ ವಿಶೇಷ ಅನುದಾನವನ್ನು ಹಣಕಾಸು ಸಚಿವೆ ತಿರಸ್ಕರಿಸಿ ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ.

ಈ ನಿರ್ಮಲಾ ಸೀತಾರಾಮನ್ ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋದವರು. ಅವರಿಗೆ ರಾಜ್ಯದ ಹಿತ ಬೇಕಿಲ್ಲವೇ? ಯಡಿಯೂರಪ್ಪ ಅವರೇ, ನೀವ್ಯಾಕೆ ಇದನ್ನೆಲ್ಲ ಸಹಿಸಿಕೊಂಡು ಕೂತಿದ್ದೀರಿ. ಇದರಲ್ಲಿ ನಾವು ರಾಜಕೀಯ ಮಾಡುತ್ತಿಲ್ಲ, ನೀವೂ ಮಾಡಬೇಡಿ. ರಾಜ್ಯದ ಹಿತ ನಮಗೆ ಮುಖ್ಯ.

ರಾಜ್ಯದ ಹಿತರಕ್ಷಣೆಯ ವಿಷಯದಲ್ಲಿ ರಾಜಕೀಯವನ್ನು ಎಳೆದು ತರಬಾರದು. ನಿಮ್ಮ ಪಕ್ಷದ ಸಂಸದರು ದೆಹಲಿಯಲ್ಲಿ ಬಾಯಿ ಬಿಡುತ್ತಿಲ್ಲ. ಸರ್ವಪಕ್ಷಗಳ ನಿಯೋಗವನ್ನಾದರೂ ಕರೆದುಕೊಂಡು ಹೋದರೆ ನಾವೇ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಪ್ರಧಾನಿಯವರಿಗೆ ತಿಳಿಸುತ್ತೇವೆ. ಇದರಲ್ಲಿ ರಾಜಕೀಯ ಬೇಡ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಆರ್ಥಿಕತೆ ಅಧೋಗತಿಗೆ ತಲುಪಿದೆ ಎನ್ನುವುದನ್ನು ಸರ್ಕಾರದ ಅಧಿಕೃತ ದಾಖಲೆಗಳೇ ಹೇಳುತ್ತಿವೆ. ಆರ್ ಬಿ ಐ ಗವರ್ನರ್ ಅವರಿಂದ ಹಿಡಿದು ಆರ್ಥಿಕ ಸಲಹೆಗಾರರ ವರೆಗೆ ದೇಶದ ಪ್ರಖ್ಯಾತ ಆರ್ಥಿಕ ತಜ್ಞರೆಲ್ಲರೂ ದೇಶದ ಆರ್ಥಿಕತೆ ಸಾಗುವ ದಾರಿ ಬಗ್ಗೆ ಆತಂಕ ಪಟ್ಟು ಎಚ್ಚರಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
 

Trending News