‘40% ಕಮಿಷನ್ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು 5 ದಿನ ರಾಜ್ಯ ಪ್ರವಾಸ’

ಬಿಜೆಪಿ ಸರ್ಕಾರದ ಕಮಿಷನ್ ಕಿರುಕುಳಕ್ಕೆ ಇನ್ನಷ್ಟು ಜೀವಗಳು ಬಲಿಯಾಗಬಾರದು ಎಂದು ಸಿದ್ದರಾಮಯ್ಯ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

Written by - Zee Kannada News Desk | Last Updated : Apr 13, 2022, 06:46 PM IST
  • ಭ್ರಷ್ಟ 40% ಕಮಿಷನ್ ಬಿಜೆಪಿ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು 5 ದಿನಗಳ ರಾಜ್ಯ ಪ್ರವಾಸ
  • ರಾಜ್ಯದ ಮಾನ ಕಾಪಾಡಲು ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವಂತೆ ಮನವಿ ಮಾಡುತ್ತೇವೆ
  • ಈಗ ಬಿಜೆಪಿ ಭ್ರಷ್ಟರ 2ನೇ‌ ಅಂಕ ಶುರುವಾಗಿದ್ದು, ಮತ್ತೆ ದೇಶದ ಮುಂದೆ ಕರ್ನಾಟಕ ತಲೆ ತಗ್ಗಿಸುವಂತಾಗಿದೆ
‘40% ಕಮಿಷನ್ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು 5 ದಿನ ರಾಜ್ಯ ಪ್ರವಾಸ’ title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರನ ಬಲಿ ಪಡೆದ ಭ್ರಷ್ಟ 40% ಕಮಿಷನ್ ಬಿಜೆಪಿ ಸರ್ಕಾರದ ವಿರುದ್ಧ ಜನ ಜಾಗೃತಿ ಮೂಡಿಸಲು ನಾವು 5 ದಿನಗಳ ಕಾಲ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ರಾಜ್ಯದ ಪ್ರತಿ ಜಿಲ್ಲೆಗೂ ನಮ್ಮ ಪಕ್ಷದ ನಾಯಕರ ನೇತೃತ್ವದಲ್ಲಿ ತಂಡಗಳಾಗಿ ತೆರಳಿ, ಜನರ ಜೀವ ಮತ್ತು ರಾಜ್ಯದ ಮಾನ ಕಾಪಾಡಲು ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವಂತೆ ಮನವಿ ಮಾಡುತ್ತೇವೆ. ನಾಳೆ ಬೆಳಿಗ್ಗೆ 10 ಗಂಟೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಘೇರಾವ್ ಹಾಕುತ್ತೇವೆ’ ಎಂದಿದ್ದಾರೆ.

‘ಭ್ರಷ್ಟಾಚಾರದಲ್ಲಿ ಕರ್ನಾಟಕವನ್ನು ನಂ.1 ಸ್ಥಾನಕ್ಕೇರಿಸಿದ್ದ ಮುಖ್ಯಮಂತ್ರಿಯೂ ಸೇರಿದಂತೆ ಸಾಲು ಸಾಲು ಸಚಿವರು ಜೈಲು ಸೇರಿದ್ದನ್ನು ದೇಶ ಕಂಡಿದೆ. ಈಗ ಈ ಭ್ರಷ್ಟರ 2ನೇ‌ ಅಂಕ ಶುರುವಾಗಿದೆ. ಮತ್ತೆ ದೇಶದ ಮುಂದೆ ಕರ್ನಾಟಕ ತಲೆ ತಗ್ಗಿಸುವಂತಾಗಿದೆ. ಜಬಾಬ್ದಾರಿಯುತ ವಿರೋಧ ಪಕ್ಷವಾಗಿ ಸಂತೋಷ್ ಪಾಟೀಲ್ ಸಾವಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನು ನಾವು ಮಾಡುತ್ತೇವೆ. ಇದು ನಮ್ಮ ಕರ್ತವ್ಯ. ಬಿಜೆಪಿ ಸರ್ಕಾರದ ಕಮಿಷನ್ ಕಿರುಕುಳಕ್ಕೆ ಇನ್ನಷ್ಟು ಜೀವಗಳು ಬಲಿಯಾಗಬಾರದು’ ಎಂದು ಸಿದ್ದರಾಮಯ್ಯ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ 40% ನಲ್ಲಿ ಪ್ರಧಾನಿ ಮೋದಿಯವರೂ ಪಾಲು ಪಡೆಯುತ್ತಿದ್ದಾರಾ?: ಕಾಂಗ್ರೆಸ್

‘ಇದು ಕೇವಲ ಕಾಂಗ್ರೆಸ್ ಪಕ್ಷದ ರಾಜಕೀಯ ಪ್ರತಿಭಟನೆಯಾಗಬಾರದು. ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು ಲೂಟಿ‌ಮಾಡುತ್ತಿರುವ ಮತ್ತು ರಾಷ್ಟಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಬೀದಿಗಿಳಿಯಬೇಕಾಗಿದೆ. ಸಚಿವ ಕೆ.ಎಸ್.ಈಶ್ವರಪ್ಪ ಮೇಲೆ ನಿನ್ನೆಯೇ ಎಫ್‍ಐಆರ್ ದಾಖಲಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನ ವಾಟ್ಸ್‍ಆ್ಯಪ್ ಮೂಲಕ ಕಳುಹಿಸಿರುವ ಡೆತ್ ನೋಟ್‍ನಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಎಂದು ಬರೆದಿದ್ದಾರೆ’ ಎಂದು ಹೇಳಿದ್ದಾರೆ.

‘ರಾಜೀನಾಮೆ ಕೊಡುವುದಿಲ್ಲವೆಂದು ಹಟ ಹಿಡಿದಿರುವ ಈಶ್ವರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿಯಾದಿಯಾಗಿ ಎಲ್ಲಾ ನಾಯಕರು ಮತ್ತು ಸರ್ಕಾರ ಹೆದರುತ್ತಿರುವುದು ಯಾಕೆ? 40% ಕಮಿಷನ್‍ನಲ್ಲಿ ಪಾಲು‌ ಪಡೆದವರೆಲ್ಲರ ಹೆಸರು ಬಯಲು ಮಾಡುತ್ತೇನೆಂದು ಈಶ್ವರಪ್ಪ ಬ್ಲಾಕ್ ಮೇಲ್ ಮಾಡುತ್ತಿದ್ದಾರೆಯೇ? ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ದಂಧೆಯ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದೆ ಪ್ರಧಾನಿ ಮೋದಿ ಸುಮ್ಮನಿರುವುದು ಏಕೆ? 40% ಕಮಿಷನ್‍ನಲ್ಲಿ ಪಿಎಂ ಅವರಿಗೂ ಪಾಲಿದೆಯಾ?’ ಅಂತಾ ಪ್ರಶ್ನಿಸಿದ್ದಾರೆ.

‘ಸಚಿವ ಈಶ್ವರಪ್ಪ ಮೇಲೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣದ ಜೊತೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ -13ರಡಿ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಬೇಕು. ಇದೊಂದು ಗಂಭೀರ ಸ್ವರೂಪದ ಅಪರಾಧ, ಕೂಡಲೇ ಅವರ ಬಂಧನವಾಗಬೇಕೆಂದು ಒತ್ತಾಯಿಸುತ್ತೇನೆ. ಮೃತ ಸಂತೋಷ್ ಪಾಟೀಲ್ ಅವರು ಈಶ್ವರಪ್ಪರನ್ನು ಅನೇಕ ಬಾರಿ ಭೇಟಿ ಮಾಡಿದರೂ ಪ್ರಯೋಜನವಾಗದ ಕಾರಣಕ್ಕೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದರು, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಮಾಡಿ ಮನವಿ ಮಾಡಿದ್ದರು. ಇವರ ಪ್ರತಿಕ್ರಿಯೆ ಏನು?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಪ್ರಕರಣ 40% ಕಾಂಗ್ರೆಸ್ ಟೂಲ್ ಕಿಟ್‍ನ ಭಾಗ: ಬಿಜೆಪಿ

‘ಸಿಎಂ ಭೇಟಿ ಮಾಡುವ ಉದ್ದೇಶದಿಂದ ಸಂತೋಷ್ ಪಾಟೀಲ್ ಉಡುಪಿಗೆ ಹೋಗಿದ್ದರು, ತಮ್ಮ ಕೊನೆ ಪ್ರಯತ್ನವೂ ಫಲ ನೀಡದೆ ಇರುವುದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.‌‌ ಇದರಿಂದ ಕಮಿಷನ್ ಗಾಗಿ ಕಿರುಕುಳ ನೀಡಿದ ಸಚಿವರು ಮಾತ್ರವಲ್ಲ‌ ಸಿಎಂ ಬೊಮ್ಮಾಯಿಯವರೂ ಈ ಸಾವಿಗೆ  ಹೊಣೆಗಾರರಾಗಿದ್ದಾರೆ. ಕಾಂಗ್ರೆಸ್ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಮಾಡಿ ಮನವಿ ಪತ್ರ ಕೊಟ್ಟಿದೆ. ರಾಜ್ಯಪಾಲರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮತ್ತು ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಲು ಬಿಜೆಪಿ ಸರ್ಕಾರಕ್ಕೆ ನಿರ್ದೇಶನ ನೀಡುತ್ತಾರೆಂಬ ಭರವಸೆ ನಮಗಿದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News