ಸಿಎಂ ಜನತಾದರ್ಶನ: ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು 15 ಕೌಂಟರುಗಳ ಸ್ಥಾಪನೆ!

ಚಂಡರಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜನತಾ ದರ್ಶನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಮದತ್ತ ಜನಸಾಗರವೇ ಹರಿದು ಬರುತ್ತಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸುಮಾರು 15 ಕೌಂಟರುಗಳನ್ನು ಸ್ಥಾಪಿಸಲಾಗಿದೆ. ಮಹಿಳೆಯರು, ವಿಕಲಚೇತನರಿಗೆ ಪ್ರತ್ಯೇಕ ಕೌಂಟರುಗಳಿವೆ.

Last Updated : Jun 21, 2019, 12:15 PM IST
ಸಿಎಂ ಜನತಾದರ್ಶನ: ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು 15 ಕೌಂಟರುಗಳ ಸ್ಥಾಪನೆ! title=
Pic Courtesy:Facebook

ಯಾದಗಿರಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಜನತಾದರ್ಶನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸನ್ನದ್ಧವಾಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ  ಸಮಾರಂಭದ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಜನತಾ ದರ್ಶನಕ್ಕೆ ಅರ್ಜಿ ಸಲ್ಲಿಸಲು ಇಂದು ಬೆಳಿಗ್ಗೆ ಏಳು ಗಂಟೆಯಿಂದಲೇ ಸಾರ್ವಜನಿಕರು ಬರುತ್ತಿದ್ದಾರೆ, ಇದಕ್ಕಾಗಿ ಜಿಲ್ಲಾಡಳಿತ ಕೌಂಟರುಗಳನ್ನು ತೆರೆದಿದ್ದು, ಅರ್ಜಿ ಸಲ್ಲಿಸಿದವರಿಗೆ ಟೋಕನ್ ನೀಡಲಾಗುತ್ತಿದೆ. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮವೂ ಜರುಗಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ಮುಖ್ಯಮಂತ್ರಿಗಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. 

ಚಂಡರಕಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಜನತಾ ದರ್ಶನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಯಾದಗಿರಿಯಿಂದ ಗುರುಮಠಕಲ್ ಮಾರ್ಗವಾಗಿ ಬಸ್ ಮೂಲಕ ಪ್ರಯಾಣ ಬೆಳೆಸಿದರು. ಮಾರ್ಗದುದ್ದಕ್ಕೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ತಳಿರು, ತೋರಣ, ಸ್ವಾಗತ ಕಮಾನುಗಳು, ಜನಪದ ಕಲಾ ತಂಡಗಳು ಮುಖ್ಯಮಂತ್ರಿಯವರನ್ನು ಬರಮಾಡಿಕೊಳ್ಳಲು ಅಣಿಯಾಗಿವೆ.

ಹೈದರಾಬಾದ್ ಕರ್ನಾಟಕ ಪ್ರದೇಶದ ಈ ಭಾಗದ ಜನತೆ ಮುಖ್ಯಮಂತ್ರಿಗಳ ಈ ಐತಿಹಾಸಿಕ ಕಾರ್ಯಕ್ರಮವನ್ನು ಕುತೂಹಲದಿಂದ ಎದುರು ನೋಡುತ್ತಿದ್ದಾರೆ. ಮುಖ್ಯಮಂತ್ರಿಗಳು ದಾರಿಯುದ್ದಕ್ಕೂ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಸಚಿವರಾದ ಶ್ರೀ ವೆಂಕಟರಾವ ನಾಡಗೌಡ, ಶಾಸಖರುಗಳಾದ ನಾಗನಗೌಡ ಕಂದಕೂರ, ಶರಣಬಸಪ್ಪ ದರ್ಶನಾಪೂರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೋನರೆಡ್ಡಿ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ. ಜಿಲ್ಲಾಧಿಕಾರಿ ಕೂರ್ಮರಾವ, ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿವಿಧ ಇಲಾಖೆಗಳ ಯೋಜನೆಗಳನ್ನು ಬಿಂಬಿಸುವ ಪ್ರದರ್ಶನ  ಮಳಿಗೆಗಳು, ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಗಳ ಫಲಕಗಳು, ದೃಶ್ಯ  ಮಾಹಿತಿಗಳೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸ್ಥಾಪಿಸಿರುವ ಮಳಿಗೆ ಕಾರ್ಯಕ್ರಮದ ಜನಾಕರ್ಷಣೆಯ ಕೇಂದ್ರವಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸುಮಾರು 15 ಕೌಂಟರುಗಳನ್ನು ಸ್ಥಾಪಿಸಲಾಗಿದೆ. ಮಹಿಳೆಯರು, ವಿಕಲಚೇತನರಿಗೆ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಲಾಗಿದೆ.


 

Trending News