)
ಚಿಕ್ಕಬಳ್ಳಾಪುರ : ಹಳೆ ದ್ವೇಷದ ಹಿನ್ನೆಲೆಯಲ್ಲಿ ಆರು ವರ್ಷಗಳ ಹಿಂದೆ ನಡೆದಿದ್ದ 27 ವರ್ಷದ ಯುವಕನ ಅಪಹರಣ ಮತ್ತು ಕೊಲೆ ಪ್ರಕರಣದ ರಹಸ್ಯವನ್ನು ಭೇದಿಸುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಪ್ರಕರಣದ ವಿವರ :
ಶಿಡ್ಲಘಟ್ಟ ನಗರದ ನಿವಾಸಿಯಾಗಿದ್ದ ಆಟೋ ಚಾಲಕ ಗಿರೀಶ್ (27) ಅವರನ್ನು 2019ರ ಮೇ 12 ರಂದು ಹಳೆ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ಅಪಹರಿಸಿದ್ದರು. ನಂತರ ಅವರನ್ನು ಕೋಲಾರ ಜಿಲ್ಲೆಯ ನರಸಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಮಾಡಿ, ಶವವನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ತಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲಿಪಿಲಿ ಮಂಗಲ ಗ್ರಾಮದ ಬಳಿ ಎಸೆದು ಪರಾರಿಯಾಗಿದ್ದರು.
ಇದನ್ನೂ ಓದಿ : ZEE ಕನ್ನಡ ನ್ಯೂಸ್ ಈ ದಿನದ ಮುಖ್ಯಾಂಶಗಳು (22/08/2025)
ತನಿಖೆಯ ಹಾದಿ :
ಘಟನೆಯ ನಂತರ, ಗಿರೀಶ್ ಕುಟುಂಬಸ್ಥರು ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಅದೇ ಸಮಯದಲ್ಲಿ, ತಮಿಳುನಾಡಿನ ತಳಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿತ್ತು. ತಳಿ ಪೊಲೀಸರು ನಾಲ್ವರನ್ನು ಬಂಧಿಸಿದ್ದರೂ, ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಮತ್ತು ದೋಷಾರೋಪ ಪಟ್ಟಿ ಸಲ್ಲಿಸದ ಕಾರಣ, ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡಿತ್ತು. ಈ ಹಂತದಲ್ಲಿ ಪೊಲೀಸರ ನಿರ್ಲಕ್ಷ್ಯದ ಆರೋಪಗಳು ಕೂಡ ಕೇಳಿಬಂದಿದ್ದವು.
ನಂತರ ಪ್ರಕರಣವನ್ನು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು. ತನಿಖೆಯನ್ನು ಚುರುಕುಗೊಳಿಸಿದ ಗ್ರಾಮಾಂತರ ಪೊಲೀಸರು, ಸುದೀರ್ಘ ಪ್ರಯತ್ನದ ನಂತರ ಈಗ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.