)
ಚಿಕ್ಕೋಡಿ : ಬೆಳಗಿನ ಉಪಹಾರ ಸೇವಿಸಿದ ನಂತರ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ, ಭೇದಿ ಹಾಗೂ ಜ್ವರದ ತೊಂದರೆ ಕಾಣಿಸಿಕೊಂಡಿದ್ದು, ಅವರನ್ನ ತಕ್ಷಣ ಚಿಕ್ಕೋಡಿ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಸ್ಥಿತಿ ಎದುರಾದ ಕಾರಣ ತುರ್ತು ಚಿಕಿತ್ಸಾ ಘಟಕದಲ್ಲಿ ಇಡಲಾಗಿದೆ.
ಓರ್ವ 10th ವಿದ್ಯಾರ್ಥಿನಿ ರಾಜಮಾಳನ್ನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ನಂತರ ಡಿಡಿಪಿಐ ಸೀತಾರಾಮು, ಆರೋಗ್ಯ ಇಲಾಖೆಯ ಎಡಿಎಚ್ಓ ಗಡಾದ ಹಾಗೂ ಸಂಬಂಧಿತ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. “ಆಹಾರದ ಗುಣಮಟ್ಟದ ಬಗ್ಗೆ ತನಿಖೆ ನಡೆಸಿ, ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಡಿಪಿಐ ಭರವಸೆ ನೀಡಿದರು.
ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ತಾಲ್ಲೂಕು ವೈದ್ಯಾಧಿಕಾರಿ ಸುಕುಮಾರ ಬಾಗಾಯಿ ಅವರನ್ನು ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆಂದು ತರಾಟೆಗೆ ತೆಗೆದುಕೊಂಡರು. “ಹಾಸ್ಟೇಲ್ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೇ ಇರುವುದೇ ಇಂತಹ ಘಟನೆಗೆ ಕಾರಣ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಇದೇ ವೇಳೆ Zee ಕನ್ನಡ ಚಾನೆಲ್ ನಡೆಸಿದ ಎಕ್ಸ್ಪೋಸ್ನಲ್ಲಿ ವಸತಿ ನಿಲಯದಲ್ಲಿ ಕೊಳೆತ ತರಕಾರಿ ಹಾಗೂ ಹುಳು ಬಿದ್ದ ಧಾನ್ಯಗಳ ಚೀಲಗಳು ಪತ್ತೆಯಾಗಿವೆ. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟವೇ ಅಸ್ವಸ್ಥತೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.
400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸವಿರುವ ಈ ವಸತಿ ನಿಲಯದಲ್ಲಿ ಪುಡ್ ಪಾಯಿಸನ್ ಪ್ರಕರಣ ಬೆಳಕಿಗೆ ಬಂದಿರುವುದರಿಂದ ಪೋಷಕರು ಆತಂಕಗೊಂಡಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆ ವಿದ್ಯಾರ್ಥಿ ಪೋಷಕರಲ್ಲೂ ಕೇಳಿ ಬರುತ್ತಿದೆ.