ಫೋನ್ ಟ್ಯಾಪಿಂಗ್ ಪ್ರಕರಣ: ಸಿಬಿಐ ತನಿಖೆಗೆ ಸಿಎಂ ಬಿಎಸ್ವೈ ಆದೇಶ
ವಿರೋಧ ಪಕ್ಷದ ಹಲವು ನಾಯಕರು ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿರುವ ಕಾರಣ ಸಿಬಿಐ ತನಿಖೆಗೆ ಆದೇಶಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿರುವ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸೋಮವಾರವೇ ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಭಾನುವಾರ ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ಹಲವು ನಾಯಕರು ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿರುವ ಕಾರಣ ಸಿಬಿಐ ತನಿಖೆಗೆ ಆದೇಶಿಸಲಾಗುತ್ತಿದೆ ಎಂದು ಹೇಳಿದರು.
"ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸೇರಿ ಎಲ್ಲರೂ ಈ ಬಗ್ಗೆ ತನಿಖೆ ನಡೆಯಬೇಕು ಎಂದು ಹೇಳಿದ್ದಾರೆ. ಹಾಗಾಗಿ ಸಿಬಿಐ ತನಿಖೆಗೆ ಆದೇಶ ಮಾಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿ, ತಪ್ಪು ಯಾರೇ ಮಾಡಿದ್ದರೂ ಅದು ತಪ್ಪೇ" ಎಂದು ಯಡಿಯೂರಪ್ಪ ಹೇಳಿದರು.
ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾಗ ಸತತ 15 ದಿನಗಳ ಕಾಲ ರಾಜ್ಯದ ಹಲವು ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ. ಇದನ್ನು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರೇ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಈ ಬಗ್ಗೆ ತನಿಖೆ ನಡೆಯಲಿ, ನಾನ್ಯಾವ ಟೆಲಿಫೋನ್ ಕದ್ದಾಲಿಕೆಯನ್ನೂ ಮಾಡಿಸಿಲ್ಲ ಎಂದು ಹೇಳಿದ್ದರು.