#ಸಾಮಾಜಿಕನ್ಯಾಯ: OBC ಆಯೋಗದ ವರದಿ ಜಾರಿಗೆ ಸಿದ್ಧರಾಮಯ್ಯ ಆಗ್ರಹ

ಬಿಜೆಪಿ ಸರ್ಕಾರ ಕಾಲವ್ಯಯಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Written by - Zee Kannada News Desk | Last Updated : Feb 22, 2022, 06:25 PM IST
  • ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧವಿದೆ
  • ಸುಪ್ರೀಂಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯವು ಆತಂಕ ಪಡಬೇಕಾಗಿಲ್ಲ
  • ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕೆಂದು ಸಿದ್ದರಾಮಯ್ಯ ಆಗ್ರಹ
#ಸಾಮಾಜಿಕನ್ಯಾಯ: OBC ಆಯೋಗದ ವರದಿ ಜಾರಿಗೆ ಸಿದ್ಧರಾಮಯ್ಯ ಆಗ್ರಹ title=
‘ಸಿಎಂ ಬೊಮ್ಮಾಯಿ ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು’

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಕಾಲವ್ಯಯಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ(Backward Class Commission Report)ಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ #ಸಾಮಾಜಿಕನ್ಯಾಯ ಹ್ಯಾಶ್ ಟ್ಯಾಗ್ ಬಳಿಸಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

‘ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ರಾಜ್ಯದ ಎಲ್ಲ ಜಾತಿ-ಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡಾ ಸಂಗ್ರಹಿಸಿದೆ. ರಾಜ್ಯ ಬಿಜೆಪಿ ಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಂಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು. ಸಾಮಾಜಿಕ-ಆರ್ಥಿಕ ಸಮೀಕ್ಷೆಗಾಗಿ ಪ್ರತ್ಯೇಕ ಆಯೋಗ ರಚಿಸಲು ಹೇಳಿರುವ ಸುಪ್ರೀಂಕೋರ್ಟ್(Supreme Court) ‘ರಾಜ್ಯ ಸರ್ಕಾರಗಳು ಈಗಾಗಲೇ ನಡೆಸಿರುವ ಸಮೀಕ್ಷೆಯ ಅಂಕಿ-ಅಂಶ ಮತ್ತು ಮಾಹಿತಿಯನ್ನು ಹೊಸ ಆಯೋಗಕ್ಕೆ ನೀಡಬಹುದು. ಆ ಮಾಹಿತಿಯನ್ನು ಆಧರಿಸಿ 2 ವಾರದೊಳಗೆ ಆಯೋಗ ಹಿಂದುಳಿದ ಜಾತಿಗಳ ಮೀಸಲಾತಿ ಬಗ್ಗೆ ಮಧ್ಯಂತರ ವರದಿಯನ್ನು ನೀಡಬಹುದು’ ಎಂದು ಕೂಡ ಹೇಳಿದೆ’ ಅಂತಾ ಹೇಳಿದ್ದಾರೆ.

‘ಸುಪ್ರೀಂಕೋರ್ಟ್‌ನ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿ(Backward Class)ಯ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ. 3 ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಂಕೋರ್ಟ್ ಹೇಳಿದೆ. ನಮ್ಮ ಸರ್ಕಾರ ದೇಶದಲ್ಲಿಯೇ ಮೊದಲ ಬಾರಿ ಮನೆಮನೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧವಾಗಿದೆ’ ಅಂತಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಶಂಖದಿಂದಲೇ ತೀರ್ಥ ಬರಬೇಕೇ?: ಡಿಕೆಶಿ

‘ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ(Political Reservation) ನೀಡಲು ಪ್ರತ್ಯೇಕವಾದ ಆಯೋಗವನ್ನು ರಚಿಸಬೇಕೆಂದು ಹೇಳಿದೆ. ಆದರೆ ಕರ್ನಾಟಕದಲ್ಲಿ ಸುಪ್ರೀಂಕೋರ್ಟ್ ಆದೇಶಕ್ಕೆ ಅನುಗುಣವಾಗಿ ಇದೇ ಉದ್ದೇಶದಿಂದ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ರಾಜ್ಯದ ಬಿಜೆಪಿ ಸರ್ಕಾರ ಕಾಲವ್ಯಯಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂಕೋರ್ಟ್ ಮುಂದೆ ತನ್ನ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು’ ಅಂತಾ ಒತ್ತಾಯಿಸಿದ್ದಾರೆ.

‘ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿರುವುದರಿಂದ ಎಲ್ಲ ಜಾತಿ-ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು. 2010ರಲ್ಲಿಯೇ ಸುಪ್ರೀಂಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ(TB Jayachandra)ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು’ ಅಂತಾ ಹೇಳಿದ್ದಾರೆ.

‘ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದಕ್ಕೆ ಕರ್ನಾಟಕದಲ್ಲಿ ನಡೆದಂತ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ. ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧವಿರುವುದರಿಂದ ಸುಪ್ರೀಂಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು’ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: #ಜನವಿರೋಧಿಕಾಂಗ್ರೆಸ್; “ಸದನದಲ್ಲಿ ನಿಮ್ಮ ಶಾಸಕರು ಮಾಡಿದ್ದೇನು, ಸಾಧಿಸಿದ್ದೇನು?”

‘ಸುಪ್ರೀಂಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್–ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಬಿಜೆಪಿ ಸರ್ಕಾರ ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ಧೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು. ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ತಕ್ಷಣ ವಿರೋಧ ಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಂಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು’ ಅಂತಾ ಹೇಳಿದ್ದಾರೆ.

‘ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ. ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದ ಕಾರಣಕ್ಕೆ ನ್ಯಾಯಬದ್ಧ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಂಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ’ ಅಂತಾ ಸಿದ್ದರಾಮಯ್ಯ(Siddaramaiah) ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News