ಬೆಂಗಳೂರು: ಧಾರ್ಮಿಕ ರಾಷ್ಟ್ರೀಯತೆಯ ಮೂಲಕ ದೇಶ ಕಟ್ಟಲು ಸಾಧ್ಯವಾಗದು. ಇದು ಬಹುಧರ್ಮ, ಬಹುಭಾಷೆ ಮತ್ತು ಬಹುಸಂಸ್ಕೃತಿಯನ್ನು ಪ್ರತಿಪಾದಿಸುವ ಪ್ರಜಾಪ್ರಭುತ್ವಕ್ಕೆ ಮಾರಕವಾದುದು. ಪ್ರಜಾಪ್ರಭುತ್ವವನ್ನು ನಂಬಿರುವ ಯಾರೂ ಇದನ್ನು ಒಪ್ಪಲು ಸಾಧ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.


COMMERCIAL BREAK
SCROLL TO CONTINUE READING

75ನೇ ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯನವರು ನೀಡಿದ ಸಂದೇಶದ ಪೂರ್ಣ ಭಾಷಣ


ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2024ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿವೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ.


ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.


‘ಸಂವಿಧಾನವೇ ನಮ್ಮ ಧರ್ಮ ಮತ್ತು ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದೇ ನಮ್ಮ ರಾಜಧರ್ಮ' ಎಂದು ತ್ರಿಕರಣಪೂರ್ವಕವಾಗಿ ನಂಬಿಕೊಂಡು ಬಂದಿರುವ ನಮ್ಮ ಸರ್ಕಾರ, ಜಾತಿ-ಧರ್ಮಗಳ ಭೇದವಿಲ್ಲದೆ ಸಂಪತ್ತು, ಅವಕಾಶ ಮತ್ತು ಅಧಿಕಾರದಲ್ಲಿ ಸರ್ವರಿಗೂ ಸಮಪಾಲು ಸಿಗಬೇಕೆಂಬ ಸರ್ವೋದಯದ ಉದಾತ್ತ ಉದ್ದೇಶವನ್ನು ಹೊಂದಿದೆ.


ಸಂವಿಧಾನ ಎನ್ನುವುದು ಪ್ರಜಾಪ್ರಭುತ್ವದ ಆತ್ಮ. ಸಂವಿಧಾನ ಇಲ್ಲದ ಪ್ರಜಾಪ್ರಭುತ್ವ, ಆತ್ಮ ಇಲ್ಲದ ಜೀವ. ಇತ್ತೀಚೆಗೆ ಸಂವಿಧಾನ ಬದಲಾವಣೆಯ ಕೂಗು ಅಲ್ಲಲ್ಲಿ ಕೇಳಿಬರುತ್ತಿದೆ. ಇದನ್ನು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಈ ಖಂಡನೆಗೆ ನಾನೂ ದನಿಗೂಡಿಸುತ್ತೇನೆ.


ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಗೌರವ ಮತ್ತು ಅದರ ಆಶಯಗಳ ಬಗ್ಗೆ ಬದ್ಧತೆ ಇರಲೇಬೇಕು. ಸಂವಿಧಾನೇತರ ಶಕ್ತಿಗಳಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾಗ ಇಲ್ಲ. ಸಂವಿಧಾನದ ಬಗ್ಗೆ ಭಿನ್ನಾಭಿಪ್ರಾಯ ಇಟ್ಟುಕೊಂಡು ಸಂಸದೀಯ ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಾರದು. ಇದು ಸಂವಿಧಾನಕ್ಕೆ ಮಾಡುವ ಅಪಚಾರ ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಕೂಡಾ ಹೌದು. ಇಂತಹವರನ್ನು ತಿರಸ್ಕರಿಸುವುದು ಪ್ರತಿಯೊಬ್ಬ ಪ್ರಜೆಯ ಧರ್ಮವಾಗಿದೆ.


ಜಾತ್ಯತೀತತೆ ಸಂವಿಧಾನದ ಮುಖ್ಯ ಆಶಯಗಳಲ್ಲಿ ಒಂದು. ಇದು ಅನ್ಯಧರ್ಮವನ್ನು ದ್ವೇಷಿಸದೆ ಸ್ವಂತ ಧರ್ಮವನ್ನು ಪ್ರೀತಿಸುವ ಉದಾತ್ತ ಮಾನವೀಯ ಗುಣ. ಜಾತಿ, ಧರ್ಮವನ್ನು ಮೀರಿ `ಮನುಷ್ಯ ಜಾತಿ ತಾನೊಂದೆ ವಲಂ' ಎಂಬ ಕವಿವಾಣಿ ಕೂಡಾ ಸಂವಿಧಾನದ ಈ ಆಶಯವನ್ನೇ ನೆನಪು ಮಾಡಿಕೊಡುತ್ತದೆ.


ಧಾರ್ಮಿಕ ರಾಷ್ಟ್ರೀಯತೆಯ ಮೂಲಕ ದೇಶ ಕಟ್ಟಲು ಸಾಧ್ಯವಾಗದು. ಇದು ಬಹುಧರ್ಮ, ಬಹುಭಾಷೆ ಮತ್ತು ಬಹುಸಂಸ್ಕೃತಿಯನ್ನು ಪ್ರತಿಪಾದಿಸುವ ಪ್ರಜಾಪ್ರಭುತ್ವಕ್ಕೆ ಮಾರಕವಾದುದು. ಪ್ರಜಾಪ್ರಭುತ್ವವನ್ನು ನಂಬಿರುವ ಯಾರೂ ಇದನ್ನು ಒಪ್ಪಲು ಸಾಧ್ಯ ಇಲ್ಲ.


ಸ್ವಾತಂತ್ರ್ಯ ಎನ್ನುವುದು ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾದುಲ್ಲ, ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಾಕ್ಷಾತ್ಕಾರಗೊಂಡಾಗ ಮಾತ್ರ ಪ್ರಜಾಪ್ರಭುತ್ವ. ಇದನ್ನೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಾಮಾಜಿಕ ಪ್ರಜಾಪ್ರಭುತ್ವ ಎಂದು ಹೇಳಿದ್ದು. ಸಂವಿಧಾನದ ಈ ಆಶಯವನ್ನು ಸಾಕಾರಗೊಳಿಸುವುದು ಚುನಾಯಿತ ಸರ್ಕಾರದ ಕರ್ತವ್ಯವಾಗಿದೆ.


ನಮ್ಮ ಯೋಚನೆಗಳು ಮತ್ತು ಯೋಜನೆಗಳು ಸಂವಿಧಾನದ ಆಶಯಗಳೇ ಆಗಿವೆ. ನಮ್ಮ ಆಡಳಿತದ ‘ಕರ್ನಾಟಕ ಮಾದರಿ’ ಬಗ್ಗೆ ಇಡೀ ದೇಶ ಮಾತ್ರ ಅಲ್ಲ ವಿಶ್ವಶ್ರೇಷ್ಠ ಆರ್ಥಿಕ ತಜ್ಞರು ಕೂಡಾ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ಕನ್ನಡಿಗರೆಲ್ಲರಿಗೂ ಅಭಿಮಾನದ ಸಂಗತಿಯಾಗಿದೆ.


ಬಡತನ ಎನ್ನುವುದು ಅಪರಾಧ ಅಲ್ಲ. ಇದು ಸಂಪತ್ತು ಮತ್ತು ಅವಕಾಶಗಳ ಅಸಮಾನ ಹಂಚಿಕೆಯ ಫಲ ಎನ್ನುವುದನ್ನು ನಾವು ಮರೆಯಬಾರದು. ನಮ್ಮ ಸಂಪತ್ತು ಮತ್ತು ಅವಕಾಶದ ಸಮಾನ ಹಂಚಿಕೆಯಾದಾಗ ಮಾತ್ರ ಸಮೃದ್ಧ, ಬಲಿಷ್ಠ ಮತ್ತು ಕ್ರಿಯಾಶಾಲಿಯಾದ ಸಮಾಜ ನಿರ್ಮಾಣ ಸಾಧ್ಯ ಎನ್ನುವದನ್ನು ನಾನು ಬಲವಾಗಿ ನಂಬಿದ್ದೇನೆ.


ಈ ನಂಬಿಕೆಯ ಆಧಾರದಲ್ಲಿಯೇ ಸಾರ್ವತ್ರಿಕ ಮೂಲ ಆದಾಯದ (Universal basic income ) ಪರಿಕಲ್ಪನೆಯಡಿ ರೂಪುಗೊಂಡದ್ದು ನಮ್ಮ ಪಂಚ ಗ್ಯಾರಂಟಿ ಯೋಜನೆಗಳು. ಇಂದು ಇಡೀ ದೇಶ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತಿವೆ. ಹಲವಾರು ರಾಜ್ಯಗಳು ಇದನ್ನು ಅನುಷ್ಠಾನಕ್ಕೆ ತರುತ್ತಿವೆ.


ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ ಎಂದು ನಾನು ಬಲವಾಗಿ ನಂಬಿದವನು. ಇದು ನಮ್ಮ ಪಕ್ಷದ ಬದ್ಧತೆ ಕೂಡಾ ಆಗಿದೆ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಗೆದ್ದು ಬಂದಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿ ಯೋಜನೆಗಳ ಭರವಸೆಯ ಈಡೇರಿಕೆಗೆ ಮೊದಲ ಸಚಿವ ಸಂಪುಟದಲ್ಲಿಯೇ ತಾತ್ವಿಕ ಅಂಗಿಕಾರ ಪಡೆದು ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ್ದೆವು. ಇದರ ಫಲವಾಗಿ ಇಂದು ಐದು ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿವೆ ಎನ್ನುವುದನ್ನು ನಿಮ್ಮ ಮುಂದೆ ಹೇಳಲು ಹೆಮ್ಮೆ ಪಡುತ್ತೇನೆ. ದೇಶದ ಯಾವುದೇ ರಾಜ್ಯ ಸರ್ಕಾರ ಕೂಡಾ ಇಂತಹದ್ದೊಂದ ಸಾಧನೆ ಮಾಡಿಲ್ಲ ಎನ್ನುವುದನ್ನು ವಿಶ್ವಾಸಪೂರ್ವಕವಾಗಿ ಹೇಳಬಲ್ಲೆ. ಇದು ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ಕೊಟ್ಟಿರುವ ಶಕ್ತಿ ಎನ್ನುವುದನ್ನು ನಾವು ಮರೆತಿಲ್ಲ.


ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ನಮ್ಮ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಕೃಷಿಭಾಗ್ಯ, ಪಶುಭಾಗ್ಯ, ಋಣಮುಕ್ತಭಾಗ್ಯ, ವಿದ್ಯಾಸಿರಿ, ಆರೋಗ್ಯಭಾಗ್ಯ, ಜಲಭಾಗ್ಯ ಕಾರ್ಯಕ್ರಮಗಳು ಕೂಡಾ ಯಶಸ್ವಿಯಾಗಿ ಜಾರಿಯಲ್ಲಿದೆ. ಇವೆಲ್ಲ ಯೋಜನೆಗಳು ದುಡಿಯುವ ಕೈಗಳನ್ನು ಇನ್ನಷ್ಟು ಬಲಪಡಿಸಿ ಅವುಗಳು ರಾಜ್ಯದ ಅಭಿವೃದ್ಧಿಗೆ ಬಳಕೆಯಾಗುವಂತೆ ಮಾಡುವ ಕಾರ್ಯಕ್ರಮಗಳು.


ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 1.2 ಕೋಟಿ ಕುಟುಂಬಗಳಿಗೆ ವಾರ್ಷಿಕ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯ ದೊರೆಯುತ್ತಿದೆ.


ಅಧಿಕಾರಕ್ಕೆ ಬಂದ ಕೂಡಲೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಮಾಡಲು ಅನುವು ಮಾಡಿಕೊಟ್ಟ ಶಕ್ತಿ ಯೋಜನೆ ಅಭೂತಪೂರ್ವ ಜನಮನ್ನಣೆಗೆ ಪಾತ್ರವಾಗಿದೆ. ಮಹಿಳೆಯರು 138 ಕೋಟಿ ಬಾರಿ ಶಕ್ತಿ ಯೋಜನೆಯ ಮೂಲಕ ಉಚಿತವಾಗಿ ಪ್ರಯಾಣಿಸಿದ್ದಾರೆ. 1.18 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ.ಗಳ ನೆರವು ನೀಡಲಾಗುತ್ತಿದ್ದು, ಗೃಹಜ್ಯೋತಿ ಯೋಜನೆಯಡಿ 1.51 ಕೋಟಿ ಜನರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ.


ಯುವನಿಧಿ ಯೋಜನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಸುಮಾರು ಒಂದು ಲಕ್ಷ ಯುವಕ ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ನಿರುದ್ಯೋಗ ಭತ್ಯೆಯನ್ನು ಪಡೆಯುವ ಅಭ್ಯರ್ಥಿಗಳು ಅನೇಕ ಸ್ಪರ್ಧಾತ್ಮಕ ಪರೀಕ್ಷಾ ಶುಲ್ಕವನ್ನು ಭರಿಸಲು, ಉತ್ತಮ ಪುಸ್ತಕಗಳನ್ನು ಖರೀದಿಸಿ ಅಧ್ಯಯನ ಮಾಡಲು, ಉದ್ಯೋಗ ಸಂದರ್ಶನಕ್ಕೆ ತೆರಳುವ ವೆಚ್ಚಕ್ಕೆ, ಉದ್ಯಮಶೀಲತೆ ತರಬೇತಿ ಪಡೆಯುವ ಮತ್ತು ವ್ಯಕ್ತಿತ್ವ ರೂಪಿಸಿಕೊಳ್ಳಲು ಬಳಸಲೆಂದೇ ಈ ಯೋಜನೆ ಜಾರಿಯಾಗಿದೆ.


ಯುವನಿಧಿಯ ಫಲಾನುಭವಿ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಮೂಲಕ ಅವರಿಗೆ ಉತ್ತಮ ಉದ್ಯೋಗಾವಕಾಶ ಕಲ್ಪಿಸಲು ಸಹ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.


ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧಿಗಳಿಂದ ವ್ಯಕ್ತವಾದ ಟೀಕೆ-ಟಿಪ್ಪಣಿ, ಅನುಮಾನ-ಆತಂಕಗಳನ್ನು ನಾವು ಗಮನಿಸಿದ್ದೇವೆ. ನಮ್ಮ ಸರ್ಕಾರ ದಿವಾಳಿಯಾಗಲಿದೆ ಎಂಬ ಅಪಪ್ರಚಾರವನ್ನು ಮಾಡಿದ್ದಾರೆ. ಇಂತಹವರೆಲ್ಲರಿಗೂ ನಮ್ಮ ಯೋಜನೆಗಳ ಫಲಾನುಭವಿಗಳೇ ದಿಟ್ಟತನದಿಂದ ಉತ್ತರ ನೀಡಬೇಕೆಂದು ನಾನು ಮನವಿ ಮಾಡುತ್ತೇನೆ. ನಾವು ಮಾತುಗಾರರಲ್ಲ, ಕೆಲಸಗಾರರು.


ಚುನಾವಣೆಯ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ (ತಿದ್ದುಪಡಿ) ವಿಧೇಯಕಕ್ಕೆ ಮೊದಲ ಅಧಿವೇಶನದಲ್ಲಿಯೇ ಮಂಡಿಸಿ ಒಪ್ಪಿಗೆ ಪಡೆಯಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಜಮೀನು ಪರಭಾರೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಈ ಸಮುದಾಯಗಳ ಭೂ-ಒಡೆತನದ ಹಕ್ಕನ್ನು ಖಾತರಿಪಡಿಸಿದ್ದೇವೆ.


ಎಸ್.ಸಿ.ಎಸ್‍.ಪಿ/ಟಿ.ಎಸ್‍ಪಿ ಅಧಿನಿಯಮ 2013ರಡಿ ಹಂಚಿಕೆಯಾಗುವ ಅನುದಾನ ಆ ಸಮುದಾಯಗಳಿಗೇ ಬಳಕೆಯಾಗಬೇಕೆನ್ನುವುದು ಸರ್ಕಾರದ ಆಶಯ. ಈ ಬಗ್ಗೆ ದಲಿತ ಸಮುದಾಯಗಳ ದೀರ್ಘಕಾಲದ ಮನವಿಗೆ ಸರ್ಕಾರ ಸ್ಪಂದಿಸಿ ಕಾಯ್ದೆಯ ಕಲಂ 7 (ಡಿ) ಅನ್ನು ಕೈಬಿಡಲಾಗಿದೆ. ಹಿಂದುಳಿದ ಪ್ರವರ್ಗ-1 ಮತ್ತು ಪ್ರವರ್ಗ-2ಎ ಗಳಲ್ಲಿನ ಜಾತಿಗಳ ಜನರಿಗೆ ಕಾಮಗಾರಿಗಳ ಗುತ್ತಿಗೆಯಲ್ಲಿ 1 ಕೋಟಿ ರೂ.ಗಳವರೆಗೆ ಮೀಸಲಾತಿ ನೀಡಲಾಗಿದೆ. ಇದು ಸಾಮಾಜಿಕ ನ್ಯಾಯದ ಬಂಡಿ ಮೇಲೆ ಅಭಿವೃದ್ದಿಯ ರಥವನ್ನು ಮುಂದಕ್ಕೆ ಒಯ್ಯುವ ನಮ್ಮ ಪ್ರಯತ್ನವಾಗಿದೆ.


ಈ ಬಾರಿ ಹವಾಮಾನ ವೈಪರೀತ್ಯ, ಮಳೆಯ ತೀವ್ರ ಕೊರತೆಯಿಂದಾಗಿ, 236 ರಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.


ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ಬರಗಾಲವನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿದೆ. ನಮ್ಮ ನಿರಂತರ ಪ್ರಯತ್ನದ ಹೊರತಾಗಿಯೂ ಬರಪರಿಹಾರದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸದೆ ಬಿಡಿಗಾಸನ್ನೂ ನೀಡದಿರುವುದನ್ನು ವಿಷಾದದಿಂದ ಹೇಳಬೇಕಾಗಿದೆ.


ರಾಜ್ಯ ಸರ್ಕಾರವೇ ಬರದಿಂದ ಬಾಧಿತರಾದವರಿಗೆ ಬೆಳೆ ಪರಿಹಾರವಾಗಿ 2000 ರೂ.ಗಳ ವರೆಗಿನ ತಾತ್ಕಾಲಿಕ ಪರಿಹಾರದ ಘೋಷಣೆಯನ್ನು ಮಾಡಿದ್ದು, ಈವರೆಗೆ 550 ಕೋಟಿ ರೂ.ಗಳನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ವಾರದೊಳಗೆ ಮೊದಲ ಕಂತಿನ ಪರಿಹಾರ ರೈತರಿಗೆ ತಲುಪಿಸಲಾಗುವ ವ್ಯವಸ್ಥೆಯಾಗುತ್ತಿದೆ.


ರೈತರು ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಅಸಲು ಪಾವತಿಸಿದಲ್ಲಿ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ಆದೇಶ ಹೊರಡಿಸಿದೆ.


ಕೊಬ್ಬರಿ ಬೆಲೆ ಕುಸಿತಗೊಂಡು ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 1500 ರೂಗಳ ನೆರವನ್ನು ರಾಜ್ಯ ಸರ್ಕಾರವೆ ನೀಡುತ್ತಿದೆ.


ನೆಟೆ ರೋಗದಿಂದ ಬಾಧಿತರಾದ ತೊಗರಿ ಬೆಳೆಗಾರರಿಗೆ 223 ಕೋಟಿ ರೂಪಾಯಿ ಪರಿಹಾರ ನೀಡಿದ್ದೇವೆ.


ಬಿತ್ತನೆ ವೈಫಲ್ಯ, ಮಧ್ಯಂತರ ಬೆಳೆ ಪರಿಹಾರ ವಿಮೆ ಮತ್ತು ಸ್ಥಳ ನಿರ್ಧಿಷ್ಠ ವಿಕೋಪಗಳಿಗೆ ಪರಿಹಾರವಾಗಿ 8.10 ಲಕ್ಷ ರೈತರಿಗೆ 591 ಕೋಟಿ ರೂಪಾಯಿಗಳನ್ನು ನೀಡಿದ್ದೇವೆ. ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿ ಮಾಡಲಾಗಿದೆ.


ಸಾಮಾಜಿಕ ಬದಲಾವಣೆಗೆ ಶಿಕ್ಷಣ ಪ್ರಬಲ ಅಸ್ತ್ರ ಎಂದು ಡಾ: ಬಿ.ಆರ್.ಅಂಬೇಡ್ಕರ್ ಅವರು ಹೇಳಿದಂತೆ ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಮಹತ್ವವನ್ನು ನೀಡಿದೆ. ಮಕ್ಕಳಲ್ಲಿ ವೈಚಾರಿಕತೆ, ವೈಜ್ಞಾನಿಕ ಮನೋಭಾವ ಮತ್ತು ಮಾನವೀಯ ಗುಣಗಳನ್ನು ಬೆಳೆಸುವ ರೀತಿಯಲ್ಲಿ ಪಠ್ಯಪುಸ್ತಕಗಳನ್ನು ರೂಪಿಸುತ್ತಿದ್ದೇವೆ. ಇದಲ್ಲದೆ ರಾಜ್ಯದ ಶಿಕ್ಷಣ ಕ್ಷೇತ್ರವನ್ನು ಸ್ಥಳೀಯ ಅವಶ್ಯಕತೆಗಳಿಗೆ ತಕ್ಕಂತೆ ಸುಧಾರಣೆಗೆ ಒಳಪಡಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುತ್ತಿದೆ.


ಭವಿಷ್ಯದ ಜವಾಬ್ದಾರಿಯುತ ನಾಗರಿಕರಾಗುವ ಶಾಲಾ ಮಕ್ಕಳಿಗೆ ಸಂವಿಧಾನದ ಆಶಯಗಳನ್ನು ಮನದಟ್ಟು ಮಾಡಿಸುವ ಉದ್ದೇಶದಿಂದ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದುವುದನ್ನು ಕಡ್ಡಾಯ ಮಾಡಲಾಗಿದೆ. ತನ್ಮೂಲಕ ಸಂವಿಧಾನದ ಆಶಯಗಳನ್ನು ಮಕ್ಕಳಿಗೆ ಬಾಲ್ಯದಲ್ಲಿಯೇ ಪರಿಚಯಿಸುವ ಗುರಿ ನಮ್ಮದು.


75ನೇ ಗಣರಾಜ್ಯೋತ್ಸವದ ಆಚರಣೆಯ ಭಾಗವಾಗಿ ಜನವರಿ 26ರಿಂದ ಒಂದು ತಿಂಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಸಂವಿಧಾನ ಜಾಗೃತಿ ಜಾಥಾ’ ನಡೆಸಲಾಗುತ್ತಿದ್ದು, ನಾಡಿನ ಜನತೆಗೆ ಸಂವಿಧಾನದ ಸ್ವರೂಪ ಹಾಗೂ ಆಶಯಗಳನ್ನು ತಲುಪಿಸುವ ಗುರಿ ಹೊಂದಲಾಗಿದೆ. ನಾಗರಿಕರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಮ್ಮ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಲು ಕೈಜೋಡಿಸಬೇಕೆಂದು ಮನವಿ ಮಾಡುತ್ತೇನೆ.


ಸರ್ಕಾರ ಜನರ ಮನೆಬಾಗಿಲಿಗೆ ತಲುಪಲು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ಮೂಲೆಮೂಲೆಗಳಿಂದ ಸಮಸ್ಯೆಗಳನ್ನು ಹೊತ್ತು ತಂದುದ್ದನ್ನು ಗಮನಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ.


ಹೂಡಿಕೆದಾರ ಸ್ನೇಹಿ ನೀತಿಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ. ಈ ಬಾರಿ ನಡೆದ ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ಬಯೋಟೆಕ್ ನೀತಿ ಹಾಗೂ ಎವಿಜಿಸಿ ಪಾಲಿಸಿಯನ್ನು ಬಿಡುಗಡೆ ಮಾಡಲಾಗಿದೆ.


ದಾವೋಸ್ ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬಂಡವಾಳ ಹೂಡಲು ಎನ್ಟಿಟಿ ಡೇಟಾ, ಆ್ಯಬ್ ಸಮೂಹ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳು ಉತ್ಸುಕತೆ ತೋರಿದೆ. ಇದರಿಂದ ರಾಜ್ಯದ ಆರ್ಥಿಕತೆಯ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಅನುಕೂಲವಾಗಲಿದೆ.


ಬಸವಣ್ಣ ನಮ್ಮ ನಾಡಿನ ಸಾಮಾಜಿಕ ನ್ಯಾಯದ ಮೊದಲ ಹರಿಕಾರ. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸುವ ಬಸವಮಾರ್ಗದಲ್ಲಿ ನಡೆಯುವವನು ನಾನು. ಈ ಬದ್ದತೆಯಂದಾಗಿಯೇ ನಮ್ಮ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ.


ನಮ್ಮ ಸಂವಿಧಾನದ ಮೂಲತತ್ವಕ್ಕೆ ಪೂರಕವಾಗಿದ್ದ ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಅಲ್ಲಮಪ್ರಭುಗಳ ಹೆಸರನ್ನು ಶಿವಮೊಗ್ಗದ ಹಳೆ ಜೈಲು ಆವರಣದ ಪ್ರದೇಶಕ್ಕೆ ನಾಮಕರಣ ಮಾಡಲಾಗಿದೆ.


ನಮ್ಮ ನಡೆ ಅಭಿವೃದ್ಧಿಯ ಕಡೆಗೆ ಸಾಗುತ್ತಿದ್ದರೂ ನಮ್ಮ ಕನಸಿನ ಭಾರತದ ಗುರಿಯನ್ನು ತಲುಪಲು ಸಾಧ್ಯವಾಗಿಲ್ಲ ಎನ್ನುವುದನ್ನು ವಿಷಾದದಿಂದಲೇ ಒಪ್ಪಬೇಕಾಗಿದೆ. ಅಭಿವೃದ್ದಿಯ ದಾರಿಯಲ್ಲಿ ಹೊಸ ಸವಾಲುಗಳು ಎದುರಾಗಿವೆ. ಮುಖ್ಯವಾಗಿ ಇತ್ತೀಚೆಗೆ ಹೆಡೆ ಎತ್ತಿರುವ ಕೋಮುವಾದ, ನಮ್ಮ ಜಾತ್ಯತೀತ ಸಮಾಜಕ್ಕೆ ಅಪಾಯವನ್ನುಂಟು ಮಾಡುವ ಆತಂಕವನ್ನು ಅನುಭವಿಸುತ್ತಿದ್ದೇವೆ.


ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕನ್ನಡಿಗರು ನೀಡಿರುವ ಜನಮತದಲ್ಲಿ, ಸಂವಿಧಾನದ ಆಶಯವಾದ ಜಾತ್ಯತೀತ ಸಮಾಜದ ರಕ್ಷಣೆಯ ಸಂದೇಶವೂ ಇದೆ ಎನ್ನುವುದನ್ನು ನಮ್ಮ ಸರ್ಕಾರ ಅರ್ಥಮಾಡಿಕೊಂಡಿದೆ. ನಮ್ಮ ಸರ್ಕಾರ ಕೋಮುವಾದಿ ಶಕ್ತಿಗಳ ಹುಟ್ಟಡಗಿಸಲು ಸರ್ವ ಸನ್ನದ್ಧವಾಗಿದೆ. ಸಮಾಜವನ್ನು ಧರ್ಮಗಳ ಆಧಾರದಲ್ಲಿ ವಿಭಜಿಸುವ ಹುನ್ನಾರಕ್ಕೆ ಜನತೆ ಬಲಿಯಾಗಬಾರದು. ಚುನಾಯಿತ ಸರ್ಕಾರ ಇಲ್ಲವೇ ಜನಪ್ರತಿನಿಧಿಗಳು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಜಾತಿ-ಧರ್ಮಗಳಂತಹ ಭಾವನಾತ್ಮಕ ವಿಷಯಗಳನ್ನು ದುರ್ಬಳಕೆ ಮಾಡುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದುದು ಮತ್ತು ಸಂವಿಧಾನಕ್ಕೆ ಬಗೆವ ದ್ರೋಹವಾಗಿದೆ.


ಸಹೃದಯಿ ಕನ್ನಡಿಗರು ಇಂತಹ ಹುನ್ನಾರಗಳಿಗೆ ಬಲಿಯಾಗದೆ ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ತೊಡಗಿರುವ ನಮ್ಮ ಸರ್ಕಾರದ ಜೊತೆ ದೃಢಚಿತ್ತದಿಂದ ನಿಲ್ಲಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ.


ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನವು ನಮ್ಮನ್ನು ರಕ್ಷಿಸುತ್ತದೆ ಎಂಬ ತತ್ವವನ್ನು ಮರೆಯದಿರೋಣ. ಈ ಮೂಲಕ ಭಾರತದ ಗಣರಾಜ್ಯದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿಸೋಣ.


ಮತ್ತೊಮ್ಮೆ ನಿಮಗೆಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.


ನಮಸ್ಕಾರ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.


 


ಜೈ ಹಿಂದ್, ಜೈ ಕರ್ನಾಟಕ.