ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿ: ಸಿಎಂ ಬೊಮ್ಮಾಯಿ

CM Basavaraj Bommai : ಇಂದು ಹನೂರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ ಎಂದು  ತಿಳಿಸಿದರು. 

Written by - Prashobh Devanahalli | Edited by - Chetana Devarmani | Last Updated : Dec 13, 2022, 08:38 PM IST
  • ಚಾಮರಾಜನಗರಕ್ಕೆ ಸಚಿವ, ಶಾಸಕನಾಗಿದ್ದ ಸಂದರ್ಭದಲ್ಲಿ ಭೇಟಿ ನೀಡಿದ್ದೆ
  • ಈಗ ಮುಖ್ಯಮಂತ್ರಿಯಾಗಿ ಇಲ್ಲಿಗೆ ಬಂದಿರುವುದು ನನ್ನ ಪುಣ್ಯ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿ: ಸಿಎಂ ಬೊಮ್ಮಾಯಿ title=
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಾಮರಾಜನಗರ : ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹನೂರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಚಾಮರಾಜನಗರಕ್ಕೆ ಸಚಿವ ಹಾಗೂ  ಶಾಸಕನಾಗಿದ್ದ ಸಂದರ್ಭದಲ್ಲಿ ಭೇಟಿ ನೀಡಿದ್ದು, ಈಗ ಮುಖ್ಯಮಂತ್ರಿಯಾಗಿ ಇಲ್ಲಿಗೆ ಬಂದಿರುವುದು ನನ್ನ ಪುಣ್ಯ ಎಂದರು. 

ಗಡಿ ಜಿಲ್ಲೆಗಳ ಅಭಿವೃದ್ಧಿಗೆ  ಹೆಚ್ಚಿನ ಪ್ರಾಶಸ್ತ್ಯವನ್ನು ನಮ್ಮ ಸರ್ಕಾರ ನೀಡಿದೆ. ಗಡಿ ಜಿಲ್ಲೆಯ ಗ್ರಾಮ ಪಂಚಾಯತ್‍ಗಳ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳುವುದಾಗಿ ಈಗಾಗಲೇ ಬಜೆಟ್ ನಲ್ಲಿ ಘೋಷಿಸಲಾಗಿದೆ.  ಗಡಿ ಭಾಗದ ಶಾಲೆಗಳು, ರಸ್ತೆಗಳ ಅಭಿವೃದ್ಧಿಗೆ ವಿವಿಧ ಇಲಾಖೆಗಳಿಗೆ 100 ಕೋಟಿ ರೂ.ಗಳನ್ನು ಕಾಮಗಾರಿಗಳಿಗೆ ಬಿಡುಗಡೆ ಮಾಡುತ್ತಿದ್ದೇವೆ. ಗಡಿ ಭಾಗಗಳ ಜನರ ಸಂಪೂರ್ಣ ಅಭಿವೃದ್ಧಿಯನ್ನು ಕೈಗೊಳ್ಳಬೇಕಿದೆ. ನಡುಭಾಗದ ರಾಜ್ಯವನ್ನು ಗಮನಿಸಿದಷ್ಟೇ ದೂರದ ಪ್ರತಿ ಒಂದು ಗ್ರಾಮವನ್ನು ಅಭಿವೃದ್ಧಿ ಮಾಡುವ ಸಂಕಲ್ಪ ನಮ್ಮ ಸರ್ಕಾರಕ್ಕಿದೆ ಎಂದು ಹೇಳಿದರು. 

ಕರ್ನಾಟಕದಲ್ಲಿರುವ ಗಡಿ ಭಾಗದ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡುತ್ತಿರುವುದರಿಂದ ಗಡಿಯಾಚೆ ಇರುವ ಕನ್ನಡಿಗರೂ ಕೂಡ ಅದೇ ರೀತಿಯ ಅಭಿವೃದ್ಧಿಯನ್ನು ಆಶಾಭಾವದಿಂದ ನೋಡುತ್ತಿದ್ದಾರೆ.  ಹೀಗಾಗಿ ಗಡಿಯಾಚೆ  ಇರುವ ಕನ್ನಡಿಗರು ವಾಸಿಸುವ ಪ್ರದೇಶಗಳಲ್ಲಿ ಶಾಲೆಗಳ ಅಭಿವೃದ್ದಿಗೆ ವಿಶೇಷ ಅನುದಾನ ಮೀಸಲಿಡುವ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಹಿಂದಿನ ಸರ್ಕಾರಗಳಿಗಿಂತ ಹೆಚ್ಚಿನ ಹಣ ಬೊಕ್ಕಸದಲ್ಲಿದೆ: ಸಚಿವ ಆರ್.ಅಶೋಕ್

ಮಲೆ ಮಹದೇಶ್ವರನ ಪುಣ್ಯ ಭೂಮಿ ಕರ್ನಾಟಕದ ಅತ್ಯಂತ ಅಭಿವೃದ್ಧಿಯಾಗಿರುವ ಭಾಗವಾಗಲಿದೆ. ಈ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ಅಗತ್ಯ ಸಹಕಾರವನ್ನು ಸರ್ಕಾರ ನೀಡಲು ಸಿದ್ಧವಿದೆ.  ಕೃಷಿ ಪ್ರಧಾನವಾಗಿರುವ ಈ ಭಾಗದಲ್ಲಿ ನೀರು ಕೊಟ್ಟರೆ, ಅದರ ಜೊತೆಗೆ ಶ್ರಮ ಸೇರಿದರೆ ಬಂಗಾರದ ಬೆಳೆ ತೆಗೆಯಬಹುದು. ಬರಗಾರ ಪೀಡಿತ, ಹಿಂದುಳಿದ ಪ್ರದೇಶ ಎಂಬ ಜಿಲ್ಲೆಯ ಹಣೆಪಟ್ಟಿ ಬರಲು ಮುಖ್ಯ ಕಾರಣ ನೀರು ದೊರಕದೇ ಇರುವುದು ಎಂದರು.  
 
20 ಲಕ್ಷ  ಹೊಸ ರೈತರಿಗೆ ಬಡ್ಡಿ ರಹಿತ  ಸಾಲವನ್ನು ನೀಡಲಾಗುತ್ತಿದೆ. ಯಶಸ್ವಿನಿ ಯೋಜನೆಯನ್ನು ಪುನ: ಪ್ರಾರಂಭಿಸಲಾಗಿದೆ. ಹಾಲು ಉತ್ಪಾದಕರಿಗೆ ವಿಶೇಷವಾದ ಹಣಕಾಸಿನ ನೆರವು, ರೈತ ವಿದ್ಯಾ ನಿದಿ,ü ಕುಶಲಕರ್ಮಿಗಳಿಗೆ ಸಹಾಯಧನ ನೀಡುವ ಕಾಯಕ ಯೋಜನೆ, ದುಡಿಯುವ ವರ್ಗಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸ್ತ್ರೀ ಸಾಮಥ್ರ್ಯ, ಸ್ವಾಮಿ ವಿವೇಕಾನಂದ ಯುವ ಶಕ್ತಿ,  ಸಾಮಾಜಿಕ ನ್ಯಾಯವನ್ನು  ಕೃತಿಯಲ್ಲಿ ತರಲು 100 ಅಂಬೇಡ್ಕರ್ ಹಾಸ್ಟೆಲ್, 50 ಕನಕದಾಸ ಹಾಸ್ಟೆಲ್, 75 ಯೂನಿಟ್ ವರೆಗೆ ಉಚಿತ ವಿದ್ಯುತ್,  ಭೂಮಿ ಖರೀದಿಸಲು 20 ಲಕ್ಷ ರೂ.ಗಳು ನೀಡಲಾಗುತ್ತಿದೆ ಎಂದರು.   

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡುವ ದೊಡ್ಡ ಕ್ರಾಂತಿಕಾರಿ ನಿರ್ಣಯವನ್ನು ಕೈಗೊಳ್ಳಲಾಗಿದೆ.  ಸಂವವಿಧಾನದ ಆಶಯದಂತೆ ನಿರ್ಣಯ ಕೈಗೊಳ್ಳಲಾಗಿದೆ. ಸಮಾನತೆಯ ಸಮಾಜ ನಿರ್ಮಾಣ ಮಾಡಲು ಮುಖ್ಯಮಂತ್ರಿಯಾಗಿ ಶ್ರಮಿಸುತ್ತಿದ್ದೇನೆ.  ಸರ್ಕಾರ ಕ್ರಾಂತಿಕಾರಿ ನಿರ್ಣಯಗಳನ್ನು ಕೈಗೊಂಡಾಗ ಬರುವ ಟೀಕೆಟಿಪ್ಪಣಿಗಳನ್ನು ನನ್ನ ಶಕ್ತಿಯನ್ನಾಗಿ ಮಾಡಿಕೊಳ್ಳುತ್ತೇನೆ ಎಂದರು.

ಇದನ್ನೂ ಓದಿ : 754 ಕೋಟಿ ರೂ.ಗಳ ಕೆರೆ ತುಂಬಿಸುವ ಪ್ರಸ್ತಾವನೆಗೆ ಶೀಘ್ರ ಅನುಮೋದನೆ : ಸಿಎಂ ಬೊಮ್ಮಾಯಿ

ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸುವ ಕಾರ್ಯಕ್ರಮಕ್ಕೆ ವಿಶೇಷ ಅನುದಾನ, 8000 ಶಾಲಾಕೊಠಡಿಗಳ ನಿರ್ಮಾಣ, 100 ಪಿಹೆಚ್ಸಿಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಜಲಜೀವನ್ ಮಿಷನ್ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 30 ಲಕ್ಷ ಮನೆಗಳಿಗೆ ಕುಡಿಯುವ ನೀರು ಪೂರೈಸಲಾಗಿದೆ. 6000 ಕಿಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿದ್ದು, ಅದರಲ್ಲಿ 3000 ಕಿ.ಮೀ. ರಾಜ್ಯ ಹೆದ್ದಾರಿ ಅಭಿವೃದ್ಧಿಗೊಳಿಸಿ ರಾಷ್ಟ್ರೀಯ ಹೆದ್ದಾರಿಗಳಿಗೆ ಜೋಡಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ, ಕರಾವಳಿ, ಗಡಿಭಾಗ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೊಳಿಸಲು ಡಬಲ್ ಇಂಜಿನ್ ಸರ್ಕಾರ ಶಕ್ತಿಯನ್ನು ತುಂಬಿದೆ ಎಂದರು.

ಅಮೃತ ಯೋಜನೆಯಡಿ ನಗರ ಪ್ರದೇಶದ ಅಭಿವೃದ್ಧಿಗೆ 7000 ಕೋಟಿ ಯೋಜನೆಗೆ ಮಂಜೂರಾತಿ ನೀಡಲಾಗಿದೆ. ಈ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗೆ 274 ಕೋಟಿ ರೂ. ಅಮೃತ್-2 ಯೋಜನೆಯಡಿ ನೀಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರದಿಂದ ರಾಜ್ಯ ಅಭಿವೃದ್ಧಿಯಾಗುತ್ತಿದೆ.  ಈ ಸರ್ಕಾರದ ಅವಧಿಯಲ್ಲಿ  ಹಾಳೆಯಲ್ಲಿನ ಸರ್ಕಾರದ ಯೋಜನೆಗಳು ಭೌಧಿಕವಾಗಿ ಜನರಿಗೆ ತಲುಪುತ್ತಿವೆ. ಅಭಿವೃದ್ಧಿ ನಿರಂತವಾಗಿ ನಡೆಯುತ್ತದೆ. ಹಿಂದುಳಿದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಕಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೊಳ್ಳೇಗಾಲ ತಾಲ್ಲೂಕಿನಲ್ಲಿ 7 ಕೆರೆ ತುಂಬಿಸುವ ಯೋಜನೆ ಪ್ರಮುಖವಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಕೈಗಾರಿಕೆಗಳಲ್ಲಿ ಎಸ್ ಸಿ ಎಸ್ ಟಿಗಳಿಗೆ  ಪ್ರಾತಿನಿಧ್ಯ, ಆಸ್ಪತ್ರೆ ನಿರ್ಮಾಣ, ರೈತರಿಗೆ ಸಾಗುವಳಿ ಪತ್ರ ನೀಡಲು ಕಾನೂನು ಕ್ರಮ , ಉಡುತೊರೆ ನೀರಾವರಿ ಯೋಜನೆಗೆ ಮಂಜೂರಾತಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News