ಮಲ್ಲಿಕಾರ್ಜುನ ಖರ್ಗೆ ಬಳಿ ರಾಜಕೀಯ ಚರ್ಚೆ ಮಾಡಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

Written by - Bhavishya Shetty | Last Updated : Nov 18, 2025, 07:25 AM IST
    • ಖರ್ಗೆ ಅವರ ಬಳಿ ರಾಜಕೀಯ ಚರ್ಚೆ ಮಾಡಿಲ್ಲ
    • ಕಾರ್ಯಕ್ರಮಕ್ಕೆ ದಿನಾಂಕ ನಿಗದಿಗೆ ಮನವಿ ಮಾಡಿರುವೆ
    • ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ
ಮಲ್ಲಿಕಾರ್ಜುನ ಖರ್ಗೆ ಬಳಿ ರಾಜಕೀಯ ಚರ್ಚೆ ಮಾಡಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: "ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ರಾಜಕೀಯ ಚರ್ಚೆ ಮಾಡಿಲ್ಲ. ಪಕ್ಷದ ನೂತನ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಗೆ ಮನವಿ ಮಾಡಿರುವೆ " ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

Add Zee News as a Preferred Source

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಸಚಿವ ಸಂಪುಟ ಪುನಾರಚನೆ ಕುರಿತು ಸಿಎಂ ಅವರು ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ, ಭಾನುವಾರ ನೀವು ಭೇಟಿ ಮಾಡಿದ್ದೀರಿ, ಈ ಬಗ್ಗೆ ಚರ್ಚೆ ಮಾಡಿದ್ದೀರಾ ಎಂದು ಕೇಳಿದಾಗ, "ನಾನು ದೆಹಲಿಗೆ ಹೋದಾಗೆಲ್ಲಾ ನಮ್ಮ ನಾಯಕರನ್ನು ಭೇಟಿ ಮಾಡುತ್ತೇನೆ. ಆದರೆ ನಾನು ರಾಜಕೀಯ ವಿಚಾರವಾಗಿ ಅವರನ್ನು ಭೇಟಿ ಮಾಡಿಲ್ಲ. ಈ ವಿಚಾರ ಚರ್ಚಿಸಿಲ್ಲ. ನಾನು ಡಿಸಿಎಂ ಮಾತ್ರವಲ್ಲ, ಪಕ್ಷದ ಅಧ್ಯಕ್ಷನೂ ಆಗಿದ್ದೇನೆ. ಇಷ್ಟು ದಿನ ಅವರು ಬಿಹಾರ ಚುನಾವಣೆಯಲ್ಲಿ ನಿರತರಾಗಿದ್ದರು. ಹೀಗಾಗಿ ನಾನು ಅವರಿಗೆ ತೊಂದರೆ ನೀಡಿರಲಿಲ್ಲ. ಡಿ. 1ರಿಂದ ಸಂಸತ್ ಅಧಿವೇಶನ ನಡೆಯಲಿದೆ. ಹೀಗಾಗಿ ಈ ಬಗ್ಗೆ ಚರ್ಚೆ ಮಾಡಿದೆ" ಎಂದರು.

ಮೇಕೆದಾಟು ಯೋಜನೆ ಜಾರಿಗೆ ತಡ ಮಾಡುವುದಿಲ್ಲ

ನಿಮ್ಮ ದೆಹಲಿ ಭೇಟಿ ವೇಳೆ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಫಲಪ್ರದವಾಯಿತೇ ಎಂದು ಕೇಳಿದ್ದಕ್ಕೆ, "ನಾನು ಯಾವುದೇ ವರಿಷ್ಠ ನಾಯಕರನ್ನು ಭೇಟಿ ಮಾಡಿಲ್ಲ. ಮೇಕೆದಾಟು ಯೋಜನೆ ಪರ ನ್ಯಾಯಾಲಯದಲ್ಲಿ ನಮ್ಮ ಪರವಾಗಿ ವಾದ ಮಂಡಿಸಿದ ವಕೀಲರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ನ್ಯಾಯಾಲಯ ನಮಗೆ ನಮ್ಮ ಯೋಜನೆ ಮುಂದುವರಿಸಲು, ತಮಿಳುನಾಡಿಗೆ ಅದರ ಪಾಲಿನ ನೀರನ್ನು ಪಡೆಯಲು ಹಾಗೂ ಕೇಂದ್ರ ಜಲ ಆಯೋಗಕ್ಕೆ ಯೋಜನೆಗೆ ಅನುಮತಿ ನೀಡುವ ಅಧಿಕಾರವನ್ನು ನೀಡಿ ಆದೇಶ ನೀಡಿದೆ. ಇದಕ್ಕೆ ಕಾಲಮಿತಿ ಇದ್ದು, ಈ ಕಾರಣಕ್ಕೆ ಸೋಮವಾರ ಬೆಳಗ್ಗೆ ವಕೀಲರಾದ ಶ್ಯಾಮ್ ದಿವಾನ್ ಅವರನ್ನು ಭೇಟಿ ಮಾಡಿದೆ. ಅವರ ಜತೆ ಕೃಷ್ಣಾ ಹಾಗೂ ಮಹದಾಯಿ ಯೋಜನೆ ವಿಚಾರವಾಗಿ ಚರ್ಚೆ ಮಾಡಿದೆ. ನಾಳೆ ಕಾವೇರಿ ನೀರವರಿ ನಿಗಮದ (ಸಿಎನ್ಎನ್ಎಲ್) ಸಭೆ ಇದೆ. ಈ ಸಭೆಯಲ್ಲಿ ಯಾವ ರೀತಿ ಈ ಯೋಜನೆ ಪ್ರಸ್ತಾವನೆ ಮಾಡಬೇಕು ಎಂದು ಚರ್ಚೆ ಮಾಡಲಾಗುವುದು. ಈ ವಿಚಾರದಲ್ಲಿ ಇನ್ನು ಸಮಯ ವ್ಯರ್ಥ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಸಿಎಂ ಕೂಡ ಪ್ರಧಾನಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ" ಎಂದು ತಿಳಿಸಿದರು.

"ಈ ಯೋಜನೆಗಾಗಿ 'ನಮ್ಮ ನೀರು ನಮ್ಮ ಹಕ್ಕು' ಎಂದು ನೂರಾರು ಕಿ.ಮೀ. ಹೆಜ್ಜೆ ಹಾಕಿದ್ದು, ಅನೇಕ ಪ್ರಕರಣಗಳು ನಮ್ಮ ವಿರುದ್ಧ ದಾಖಲಾಗಿವೆ.  ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ, ಬೆಂಗಳೂರಿನ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು. ಕೈಗಾರಿಕೆಗಳಿಗೂ ನೀರು ಒದಗಿಸಲಾಗುವುದು. ಇದಕ್ಕಾಗಿ ಶ್ರಮಿಸುತ್ತಿದ್ದೇನೆ. ನನ್ನ ಶ್ರಮಕ್ಕೆ ಈಗ ಫಲ ಸಿಗುತ್ತಿದೆ. ಈ ಯೋಜನೆ ಜಾರಿಗೆ ಏನೆಲ್ಲಾ ಮಾಡಬೇಕು ಎಂದು ವಕೀಲರು, ಕಾನೂನು ತಜ್ಞರ ಜತೆ ಚರ್ಚೆ ಮಾಡಿರುವೆ. ಕಪಿಲ್ ಸಿಬಲ್ ಅವರ ಕಾರ್ಯಕ್ರಮದ ವೇಳೆ ಅನೇಕ ನಿವೃತ್ತ ನ್ಯಾಯಾಧೀಶರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವೆ" ಎಂದು ತಿಳಿಸಿದರು.

ಕೆಲವು ಶಾಸಕರು ಸಚಿವರಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಳಿದಾಗ, "ಅದರಲ್ಲಿ ತಪ್ಪೇನಿದೆ? ಶಾಸಕರು, ವಿಧಾನ ಪರಿಷತ್ ಸದಸ್ಯರಾದವರಿಗೆ ಸಚಿವರಾಗುವ ಹಕ್ಕಿದೆ. ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಅಧಿಕಾರ ಸಿಎಂ ಅವರಿಗೆ ಇದೆ. ಅವರು ತಮ್ಮದೇ ಆದ ರೀತಿ ಪಕ್ಷಕ್ಕೆ ತ್ಯಾಗ ಮಾಡಿ, ದುಡಿದಿರುತ್ತಾರೆ. ಹೀಗಾಗಿ ಅವರು ಅಧಿಕಾರಕ್ಕೆ ಆಸೆ ಪಡುತ್ತಾರೆ. ಅದನ್ನು ನಾವು ತಪ್ಪು ಎಂದು ಹೇಳಲು ಸಾಧ್ಯವೇ?

ಸಚಿವ ಸಂಪುಟ ಪುನಾರಚನೆ ಆಗುತ್ತದೆಯೋ ಅಥವಾ ನಾಯಕತ್ವ ಬದಲಾವಣೆ ಆಗುತ್ತದೆಯೋ ಎಂದು ಕೇಳಿದಾಗ, "ಯಾರಾದರೂ ಗಿಣಿ ಶಾಸ್ತ್ರ ಹೇಳುವವರ ಬಳಿ ಕೇಳಿ" ಎಂದರು.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News