)
ಬೆಂಗಳೂರು : ನಾಯಕತ್ವ ಬದಲಾವಣೆ, ಅಧಿಕಾರ ಹಸ್ತಾಂತರ ವಿಚಾರವಾಗಿ ನಡೆಯುತ್ತಿರುವ ಚರ್ಚೆ ಬಗ್ಗೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಡಿ.ಕೆ. ಸುರೇಶ್ ಅವರು, ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ವಿಚಾರಗಳು ಪಕ್ಷದ ಮುಂದೆ ಇಲ್ಲ. ಸಿದ್ದರಾಮಯ್ಯ ಅವರಿಗೆ ಇನ್ನು ವಯಸ್ಸಾಗಿಲ್ಲ. ಮುಂದಿನ ದಿನಗಳಲ್ಲಿ ಬರುವ ಎಲ್ಲಾ ಚುನಾವಣೆಗಳು ಅವರ ನೇತೃತ್ವದಲ್ಲೇ ನಡೆಯಲಿವೆ ಎಂದರು.
ಮೇಕೆದಾಟು ವಿಚಾರಣೆ ಸಂಬಂಧ ಡಿಸಿಎಂ ದೆಹಲಿ ಪ್ರವಾಸ : ಮೇಕೆದಾಟು ಯೋಜನೆ ಸಂಬಂಧ ನ್ಯಾಯಾಲಯದಲ್ಲಿ ಗುರುವಾರ (ಡಿ.6) ವಿಚಾರಣೆ ನಡೆಯಲಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳು ವಿಶೇಷ ಪೀಠ ರಚಿಸಿರುವಂತೆ ಕಾಣಿಸುತ್ತದೆ. ಈ ವಿಚಾರಣೆ ವೇಳೆ ನಮ್ಮ ನಿಲುವು ಏನಿರಬೇಕು ಎಂಬುದರ ಬಗ್ಗೆ ಅಧಿಕಾರಿಗಳು ಮತ್ತು ವಕೀಲರ ಜೊತೆ ಚರ್ಚೆ ನಡೆಸಲು ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ ಎಂದರು ಡಿಕೆ ಸುರೇಶ್ ಅವರು ತಿಳಿಸಿದರು.
ಇದನ್ನೂ ಓದಿ:ರೈತರು, ಸಾರ್ವಜನಿಕರನ್ನು ಸೆಳೆಯಲು ಹಲವು ವಿಶೇಷ
ವರಿಷ್ಠರೂ ದೆಹಲಿಯಲ್ಲಿರುವ ಕಾರಣ ಈ ಪ್ರವಾಸದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, ವರಿಷ್ಠರು ದೆಹಲಿಯಲ್ಲಿ ಇರದೇ ಎಲ್ಲಿ ಹೋಗುತ್ತಾರೆ. ಬಿಹಾರ ಚುನಾವಣೆಗೂ ಇದಕ್ಕೂ ಸಂಬಂಧ ವಿಲ್ಲ. ಶಿವಕುಮಾರ್ ಅವರು ಈ ಹಿಂದಿನಿಂದಲೂ ದೆಹಲಿಗೆ ಹೋದಾಗೆಲ್ಲಾ ಕಾಂಗ್ರೆಸ್ ಕಚೇರಿಗೆ ಹೋಗುತ್ತಾರೆ, ವರಿಷ್ಠರು ಸಿಕ್ಕರೆ ಮಾತನಾಡುತ್ತಾರೆ, ಬರುತ್ತಾರೆ. ತುರ್ತಾಗಿ ಮೇಕೆದಾಟು ಪ್ರಕರಣ ವಿಚಾರಣೆಗೆ ಬಂದಿದೆ. ವಿಶೇಷ ಪೀಠ ರಚನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಈ ಪೀಠ ರಚನೆಯಿಂದ ಯಾವ ರೀತಿ ಲಾಭ ಆಗಲಿದೆ, ನಮ್ಮ ನಿಲುವು ಹೇಗಿರಬೇಕು ಎಂದು ಚರ್ಚೆ ಮಾಡಲು ತೆರಳಿದ್ದಾರೆ. ನಾಳೆ ಹೆಚ್ಚು ಕಮ್ಮಿ ಆದರೆ ಯಾಕೆ ಸರಿಯಾಗಿ ನಿಭಾಯಿಸಲಿಲ್ಲ ಎಂದು ನೀವುಗಳೇ ಪ್ರಶ್ನೆ ಮಾಡುತ್ತೀರಿ. ಇದು ರಾಜಕೀಯ ಕೆಲಸ ಅಲ್ಲ. ಕರ್ನಾಟಕ ರಾಜ್ಯದ ಹಿತ ಕಾಪಾಡುವ ಕೆಲಸ ಎಂದರು.
ಎಲ್ಲಾ ನಾಯಕರು ಸೇರಿ ಕಾಂಗ್ರೆಸ್ ಪಕ್ಷ : ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರಿಗೆ ಪರ್ಯಾಯ ನಾಯಕರು ಇಲ್ಲ ಎಂದು ಕೇಳಿದಾಗ, ಎಲ್ಲಾ ನಾಯಕರೂ ಸೇರಿ ಕಾಂಗ್ರೆಸ್ ಪಕ್ಷವಾಗಿದೆ. ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಅವರಿಂದ ಮಾತ್ರ ಪಕ್ಷವಿಲ್ಲ. ಎಂ.ಬಿ ಪಾಟೀಲ್, ಪರಮೇಶ್ವರ್, ಸತೀಶ್ ಜಾರಕಿಹೋಳಿ, ಮಹದೇವಪ್ಪ ಸೇರಿದಂತೆ ಎಲ್ಲಾ ಸಮುದಾದ ನಾಯಕರು ಸೇರಿ ಪಕ್ಷ ಕಟ್ಟಿಕೊಂಡು ಬಂದಿದ್ದೇವೆ ಎಂದರು.
ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆ ವಿಚಾರಾಗಿ ರಾಹುಲ್ ಗಾಂಧಿ ಅವನ್ನು ಭೇಟಿ ಮಾಡುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, ಆ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ವಿಚಾರವಾಗಿ ಈಗಾಗಲೇ ಮಾಹಿತಿ ನೀಡಲಾಗಿದೆ. ಅವರು ಸಮಯ ನಿಗದಿ ಮಾಡಿದ ಬಳಿಕ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರನ್ನು ಕರೆದು ಒಂದೇ ಸ್ಥಳದಲ್ಲಿ ಎಲ್ಲ ಕಡೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯ ಮಾಡುವ ಆಲೋಚನೆ ಇದೆ ಎಂದು ತಿಳಿಸಿದರು.
ರಾಜ್ಯ ನಾಯಕರು ಸಧ್ಯಕ್ಕೆ ದೆಹಲಿ ಕಡೆ ಬರಬೇಡಿ ಎಂಬ ಹೈಕಮಾಂಡ್ ಸಂದೇಶ ರವಾನಿಸಿದೆಯೇ? ಎಂಬ ಪ್ರಶ್ನೆಗೆ, ನಾನು ಅಷ್ಟು ದೊಡ್ಡ ನಾಯಕನಲ್ಲ. ನನಗೆ ಬೇಕಾದಾಗ ಹೋಗಿ ಬರುತ್ತೇನೆ ಎಂದು ತಿಳಿಸಿದರು. ಅಲ್ಲದೆ, ಶಿವಕುಮಾರ್ ಅವರು ಸಿಎಂ ರೇಸ್ ನಿಂದ ಹಿಂದೆ ಸರಿದಿದ್ದಾರಾ ಎಂದು ಕೇಳಿದಾಗ.. ಆ ವಿಚಾರಗಳು ಇಲ್ಲಿ ಪ್ರಸ್ತಾಪವಿಲ್ಲ. ಈಗ ನಾಯಕತ್ವ ಗಟ್ಟಿಯಾಗಿದೆ ಎಂದು ಡಿಕೆ ಸುರೇಶ್ ಅವರು ತಿಳಿಸಿದರು.