"ಎಲ್ಲ ಇಲಾಖೆ ಅಧಿಕಾರಿಗಳಿಗೆ ಕೇತ್ರ ಭೇಟಿ ಕಡ್ಡಾಯ; ಸಾಧ್ಯವಾದಷ್ಟು ಸ್ಥಳದಲ್ಲೆ ಸಾರ್ವಜನಿಕರ ಸಮಸ್ಯೆ ಬಗೆಹರಿಸಿ": ಸಚಿವ ಸಂತೋಷ ಲಾಡ್ 

  ಸ್ಥಳಿಯ ಮಟ್ಟದ ಅಧಿಕಾರಿಗಳು ನೀಡುವ ಪ್ರಗತಿ ವರದಿ ನೋಡಿ ಕೆಲಸ ಮಾಡದೇ, ಎಲ್ಲಾ ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಪ್ರತಿವಾರ ತಪ್ಪದೆ ಕಡ್ಡಾಯವಾಗಿ ಕ್ಷೇತ್ರ ಭೇಟಿ ನೀಡಿ, ಸಮಸ್ಯೆಗಳನ್ನು ತಿಳಿದುಕೊಂಡು ಸ್ಥಳದಲ್ಲಿಯೆ ಸಾರ್ವಜನಿಕರಿಗೆ ಪರಿಹಾರ ನೀಡಬೇಕು ಎಂದು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Written by - Manjunath N | Last Updated : Jun 11, 2023, 07:26 PM IST
  • ಜಿಲ್ಲೆಯಲ್ಲಿ ಔಷಧೀ, ಆರೋಗ್ಯ ಸಲಕರಣೆ, ಅಂಬುಲೇನ್ಸ್ ಕೊರತೆ ಆಗದಂತೆ ಎಚ್ಚರಿಕೆ ವಹಿಸಬೇಕು.
  • ತಪ್ಪಿದಲ್ಲಿ ಸಂಭಂದಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಅವರು ಹೇಳಿದರು.
  • ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಸ್ವಾಗತಿಸಿ, ಸಂಕ್ಷೇಪವಾಗಿ ಜಿಲ್ಲೆಯ ವಿವಿಧ ಪ್ರಮುಖ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
"ಎಲ್ಲ ಇಲಾಖೆ ಅಧಿಕಾರಿಗಳಿಗೆ ಕೇತ್ರ ಭೇಟಿ ಕಡ್ಡಾಯ; ಸಾಧ್ಯವಾದಷ್ಟು ಸ್ಥಳದಲ್ಲೆ ಸಾರ್ವಜನಿಕರ ಸಮಸ್ಯೆ ಬಗೆಹರಿಸಿ": ಸಚಿವ ಸಂತೋಷ ಲಾಡ್  title=

ಧಾರವಾಡ:  ಸ್ಥಳಿಯ ಮಟ್ಟದ ಅಧಿಕಾರಿಗಳು ನೀಡುವ ಪ್ರಗತಿ ವರದಿ ನೋಡಿ ಕೆಲಸ ಮಾಡದೇ, ಎಲ್ಲಾ ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಪ್ರತಿವಾರ ತಪ್ಪದೆ ಕಡ್ಡಾಯವಾಗಿ ಕ್ಷೇತ್ರ ಭೇಟಿ ನೀಡಿ, ಸಮಸ್ಯೆಗಳನ್ನು ತಿಳಿದುಕೊಂಡು ಸ್ಥಳದಲ್ಲಿಯೆ ಸಾರ್ವಜನಿಕರಿಗೆ ಪರಿಹಾರ ನೀಡಬೇಕು ಎಂದು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅವರು ಇಂದು ಮಧ್ಯಾಹ್ನ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಉಸ್ತುವಾರಿ ಸಚಿವರಿಗಾಗಿ ಆಯೋಜಿಸಿದ್ದ ವಿವಿಧ ಇಲಾಖೆ ಅಧಿಕಾರಿಗಳ ಮತ್ತು ಇಲಾಖೆ ಕಾರ್ಯಕ್ರಮಗಳ ಪರಿಚಯಾತ್ಮಕ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಜಿಲ್ಲೆಯ ಅಭಿವೃದ್ಧಿಗೆ ಅಧಿಕಾರಿಗಳು ಸಹಕರಿಸಬೇಕು. ಸರಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಮೂಲಕ ಯೋಜನೆಗಳನ್ನು ಯಶಸ್ವಿಗೊಳಿಸಬೇಕು. ಹಿರಿಯ ಅಧಿಕಾರಿಗಳು ಕಚೇರಿಯಲ್ಲಿ ಕಾಲ ಕಳೆಯದೇ, ಹಳ್ಳಿಗಳಿಗೆ ಭೇಟಿ ನೀಡಬೇಕು ಎಂದು ಸಚಿವರು ಹೇಳಿದರು.

ಬೇರೆ ಬೇರೆ ಇಲಾಖೆ ಅಧಿಕಾರಿಗಳು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನ ತರುವಾಗ ಪರಸ್ಪರ ಸಮನ್ವ ಸಾಧಿಸಿ, ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಅಧಿಕಾರಿಗಳು ಆಡಳಿತದಲ್ಲಿ ಚುರುಕಾಗಿ, ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಜನರಿಗೆ ಉತ್ತಮ ಆಡಳಿತ ನೀಡಲು ಸಲಹೆ, ಸಹಕಾರ ನೀಡಬೇಕೆಂದು ಅಧಿಕಾರಿಗಳಿಗೆ ಸಚಿವರು ವಿನಂತಿಸಿದರು.

ಇದನ್ನೂ ಓದಿ: Viral Story: ಕರೆಂಟ್ ಶಾಕ್‌ನಿಂದ ಮರಿ ಮಂಗ ಸಾವು; ಮುಗಿಲು ಮುಟ್ಟಿದ ತಾಯಿ ಮಂಗನ ರೋಧನೆ

ತಾವು ಕರೆಯುವ ಮುಂದಿನ ಸಭೆಯಲ್ಲಿ ಅಧಿಕಾರಿಗಳು ತಮ್ಮ ಇಲಾಖೆ ಕಾರ್ಯಕ್ರಮಗಳು, ಸಮಸ್ಯೆಗಳು, ಪರಿಹಾರ ಸಾಧ್ಯತೆಗಳ ಕುರಿತು ವಾಸ್ತವಿಕ ವರದಿ ಸಲ್ಲಿಸಬೇಕೆಂದು ಎಲ್ಲ ಅಧಿಕಾರಿಗಳಿಗೆ ಸಚಿವ ಸಂತೋಷ ಲಾಡ ತಾಕೀತು ಮಾಡಿದರು.

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಅವರು ಮಾತನಾಡಿ, ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆಗೆ ಎಲ್ ಆ್ಯಂಡ್ ಟಿ ಕಂಪನಿ ಕಾರಣವಾಗಿದೆ. ಅವಕಾಶ ನೀಡಿದರೂ ನೀರು ಸರಬರಾಜುವಿನಲ್ಲಿ ಸುಧಾರಣೆ ಕಾಣುತ್ತಿಲ್ಲ. ಜಲಮಂಡಳಿ ಸಿಬ್ಬಂದಿಗಳಿಗೆ ಮರು ನೇಮಕಾತಿ ನೀಡಬೇಕು ಎಂದು ಅವರು ತಿಳಿಸಿದರು.

ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರ ಶಾಸಕ ಅಬ್ಬಯ್ಯ ಪ್ರಸಾದ ಅವರು ಮಾತನಾಡಿ, ಮಹಾನಗರದಲ್ಲಿ ನಾಗರಿಕ ಸಮಸ್ಯೆಗಳಿಗೆ ಪಾಲಿಕೆ ಅಧಿಕಾರಿಗಳು ಸಹಾಯವಾಣಿಗೆ ಕರೆ ಬಂದ ತಕ್ಷಣ ಸ್ಪಂದಿಸಬೇಕು. ವಿದ್ಯುತ್ ದೀಪಗಳ ಸಮಸ್ಯೆಗಳನ್ನು ಬಗೆಹರಿಸಬೇಕು. ವಿದ್ಯುತ್ ಕಂಬಗಳ ಬದಲಾವಣೆ ಹಾಗೂ ವಿದ್ಯುತ್ ತಂತಿ ಬದಲಾವಣೆ ಕುರಿತು ಒಂದು ವಾರದಲ್ಲಿ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.

ನವಲಗುಂದ ಶಾಸಕ ಎನ್.ಎಚ್.ಕೋನರಡ್ಡಿ ಅವರು ಮಾತನಾಡಿ, ಕುಡಿಯುವ ನೀರು ಕೊರತೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಅರೆಕುರಹಟ್ಟಿ,ಬಸಾಪುರದಂತ ಗ್ರಾಮದಲ್ಲಿ ಅತೀವ ಕುಡಿಯುವ ನೀರಿನ ಕೊರತೆ ಇದೆ. ಬಗೆಹರಿಸಬೇಕು. ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.

ನವಲಗುಂದ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಜಲ್ಲಾ ಪಂಚಾಯತ ಅಧೀನ ರಸ್ತೆಗಳು ತುಂಬಾ ಹಾಳಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಸಂಚಾರಕ್ಕೆ ಅಡಚಣೆ ಆಗಿರುವ ರಸ್ತೆಗಳ ದುರಸ್ತಿಗೆ ತಕ್ಷಣ ಕ್ರಮವಹಿಸಬೇಕೆಂದು ಶಾಸಕ ಎನ್.ಎಚ್.ಕೋನರಡ್ಡಿ ತಿಳಿಸಿದರು.

ಕುಂದಗೋಳ ಶಾಸಕ ಎಂ.ಆರ್.ಪಾಟೀಲ ಅವರು ಮಾತನಾಡಿ, ತಾಲೂಕಿನಲ್ಲಿ ಮೆಣಸಿನಕಾಯಿ ಬದಲಿಗೆ ಹತ್ತಿ ಬೆಳೆ ಹೆಚ್ಚುತ್ತಿದೆ. ರೈತರಿಗೆ ಕೃಷಿ ಅಧಿಕಾರಿಗಳು ಸೂಕ್ತ ಸಲಹೆ, ಮಾರ್ಗದರ್ಶನ ನೀಡಬೇಕು. ಕುಂದಗೋಳ ತಾಲೂಕಿನ ಯರಗುಪ್ಪಿ ಹಾಗೂ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ಅಧಿಕಾರಿಗಳು ಕ್ರಮವಹಿಸಿ, ಸಾರ್ವಜನಿಕರ ಮೂಲಸೌಕರ್ಯ ಕುರಿತ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಬೇಕು ಎಂದು ಹೇಳಿದರು.

ಹುಬ್ಬಳಿ ಲೋಹಿಯಾನಗರದ ಚರಂಡಿ ನೀರು ರಾಯನಾಳ ಗ್ರಾಮ ಮತ್ತು ರಾಯನಾಳ ಕೆರೆಗೆ ಬಂದು ಸೇರುತ್ತಿದೆ. ಇದನ್ನು ತಡೆಗಟ್ಟಲುಪಾಲಿಕೆ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕೆಂದು ಶಾಸಕರು ತಿಳಿಸಿದರು.

ಮಹಾನಗರದಲ್ಲಿ ವಿದ್ಯುತ್, ಕುಡಿಯುವ ನೀರು, ಚರಂಡಿ, ಸ್ವಚ್ಚತೆಗೆ ಮೊದಲ ಆದ್ಯತೆ ನೀಡಿ:

ಮಹಾನಗರದಲ್ಲಿ ಬೀದಿ ದೀಪ, ವಿದ್ಯುತ್ ಕಂಬ, ಕುಡಿಯುವ ನೀರು, ಚರಂಡಿ ಸ್ವಚ್ಚತೆ, ತ್ಯಾಜ್ಯ ವಿಲೇವಾರಿ ಬಗ್ಗೆ ಮಹತ್ವ ನೀಡಬೇಕು. ಜಲಮಂಡಳಿ ಸಿಬ್ಬಂದಿಗಳ ಸಮಸ್ಯೆ ಬಗೆಹರಿಸಲು ಕ್ರಮವಹಿಸಬೇಕು ಎಂದು ಸಚಿವರು ಪಾಲಿಕೆ ಅಧಿಕಾರಿಗಳಿಗೆ ಹೇಳಿದರು.

ಗ್ರಾಮೀಣ ಕುಡಿಯುವ ನೀರು: ಜಿಲ್ಲೆಯಲ್ಲಿ 388 ಗ್ರಾಮಗಳಿದ್ದು, ಇವುಗಳಲ್ಲಿ ಏಳು ತಾಲೂಕಿನ ಸುಮಾರು 77 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಗುರುತಿಸಲಾಗಿದೆ. ಸಮಸ್ಯಾತ್ಮಕ ಗ್ರಾಮಗಳಲ್ಲಿ ಬಾಡಿಗೆ ಬೋರವೆಲ್ ಗಳಿಂದ ಹಾಗೂ ಟ್ಯಾಂಕರ ಮೂಲಕ ನೀರು ಪೂರೈಸಲು ಕ್ರಮವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು. ಕುಡಿಯುವ ನೀರಿನ ಸಮಸ್ಯೆ ಇರುವ ಎಲ್ಲ ಗ್ರಾಮಗಳಲ್ಲಿ ಸರಿಯಾಗಿ, ನಿರಂತರವಾಗಿ ಕುಡಿಯುವ ನೀರು ಸರಬರಾಜು ಮಾಡಲು ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಬೇಕೆಂದು ಸಚಿವರು ಅಧಿಕಾರಿಗೆ ಸೂಚಿಸಿದರು.

ಜಲಜೀವನ ಮಿಷನ್: ಜಲ್ ಜೀವನ ಮಿಷನ್ ಕಾಮಗಾರಿಗಳು ತೃಪ್ತಿಕರವಾಗಿ ಇಲ್ಲ. ವಿಶೇಷವಾಗಿ ಗುತ್ತಿಗೆದಾರ ಪೈಪಲೈನ್ ಮಾಡಲು ರಸ್ತೆ ಅಗೆದು ಗುಂಡಿ ತೊಡಿದ್ದು, ಸರಿಯಾಗಿ ಅದನ್ನು ರಿಸ್ಟ್ರೋಷನ್ ಮಾಡಿಲ್ಲ. ಈ ಕುರಿತು ಎಲ್ಲ ಕಡೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ರಸ್ತೆ ಗುಂಡಿ ಮುಚ್ಚಿ ಮೊದಲಿನಂತೆ ರಸ್ತೆ ನಿರ್ಮಿಸಿದ ನಂತರ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದು, ಅವರು ಕಾಮಗಾರಿ ಅನುಷ್ಠಾನದ ಬಗ್ಗೆ ಮುಂದಿನ ಸಭೆಯಲ್ಲಿ ತೃಪ್ತಿ ವ್ಯಕ್ತಪಡಿಸಿದ ನಂತರ ಮುಂದಿನ ಬಿಲ್ಲ್ ಬಿಡುಗಡೆ ಮಾಡಬೇಕು ಎಂದು ಸಚಿವರು ಜಲ್ ಜೀವನ ಮಿಷನ್ ಅಧಿಕಾರಿಗೆ ಸೂಚಿಸಿದರು.

ನರೇಗಾ ನಡೆ; ಗ್ರಾಮೀಣರ ಸಶಕ್ತಿಕರಣ ಕಡೆ: ಗ್ರಾಮೀಣ ಉದ್ಯೋಗ ಸೃಷ್ಟಿಯಲ್ಲಿ ಕ್ರಾಂತಿಕಾರಿ ಅಲೆ ಮೂಡಿಸಿರುವ ನರೇಗಾ ಯೋಜನೆಯನ್ನು ಜವಾಬ್ದರಿಯಿಂದ ಜಾರಿಗೊಳಿಸಿ. ಗ್ರಾಮೀಣ ಜನರು ಉದ್ಯೋಗ ಕಾರ್ಡ್ ಪಡೆದು ಕೆಲಸಕ್ಕೆ ಬೇಡಿಕೆ ಸಲ್ಲಿಸುವ ಪೂರ್ವದಲ್ಲಿ ಕೆಲಸ ಕೊಡಿ. ಹಳ್ಳಿಯ ಜನ ಉದ್ಯೋಗ ಅರಸಿ ನಗರಕ್ಕೆ ಬರದಂತೆ ಮಾಡಿ, ಅವರ ಊರಲ್ಲಿಯೇ ಅವರಿಗೆ ಉದ್ಯೋಗ ಕೊಡಬೇಕು. ಪಿಡಿಓ ಗಳು ಸ್ಥಳೀಯವಾಗಿ ಜನರಲ್ಲಿ ನರೇಗಾ ಕುರಿತು ಜನಜಾಗೃತಿ ಮೂಡಿಸಬೇಕು. ಹಿರಿಯ ಅಧಿಕಾರಿಗಳು ಗ್ರಾಮಗಳಿಗೆ ನಿರಂತರವಾಗಿ ಭೇಟಿ ನೀಡಿ, ಕ್ಷೆತ್ರಮಟ್ಟದ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲಿಸಬೇಕೆಂದು ಸಚಿವ ಲಾಡ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪ್ರಸಾರ, ಕಡಿವಾಣಕ್ಕೆ ಕ್ರಮ-ಸಚಿವ ಪ್ರಿಯಾಂಕ್ ಖರ್ಗೆ

ಕೃಷಿ ಇಲಾಖೆ ಅಂಕಿ,ಅಂಶ ನಿಖರವಿರಲಿ: ಜಿಲ್ಲೆಯ ಬಹು ಸಂಖ್ಯೆಯ ಜನರ ಮುಖ್ಯ ಉದ್ಯೋಗ ಕೃಷಿಯಾಗಿದ್ದು, ರೈತರಿಗೆ ಸಕಾಲಕ್ಕೆ ಬೀಜ, ಗೊಬ್ಬರ ವಿತರಿಸಬೇಕು. ಕೃಷಿ ಇಲಾಖೆಯು ಹೆಸ್ಕಾಂ, ಕಂದಾಯ, ತೋಟಗಾರಿಕೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು. ಕೃಷಿ ಭೂಮಿ,ರೈತರ ಸಂಖ್ಯೆ, ಬೆಳೆಗಳ ವಿಧ, ಬೊರವೆಲ್, ಕೃಷಿ ಪಂಪಸೆಟ್, ವೇಸ್ಟ್ ಲ್ಯಾಂಡ್, ನೀರಾವರಿ ಭೂಮಿ, ಕೃಷಿಯೇತರ ಭೂಮಿ ಮುಂತಾದವುಗಳ ಕುರಿತು ಸಂಭಂದಿಸಿದ ಇಲಾಖೆಗಳು ಪರಸ್ಪರ ವಿಷಯ ವಿನಿಮಯ ಮಾಡಿಕೊಳ್ಳಬೇಕು. ಇದರಿಂದ ಉತ್ತಮ ಕ್ರಿಯಾಯೋಜನೆಗಳನ್ನು ರೂಪಿಸಲು ಸಾಧ್ಯವಾಗುತ್ತದೆ ಎಂದು ಸಚಿವರು ಹೇಳಿದರು.

ಕೃಷಿ ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ರೈತರ ಹೊಲಗಳಿಗೆ ಭೇಟಿ ನೀಡಬೇಕು. ರೈತ ಸ್ನೇಹಿಯಾಗಿ ಇಲಾಖೆ ಅಧಿಕಾರಿಗಳು ಕೆಲಸ ಮಾಡಬೇಕು. ರೈತರಿಂದ ದೂರು ಬರದಂತೆ ಕರ್ತವ್ಯ ನಿರ್ವಹಿಸಬೇಕೆಂದು ಸಚಿವ ಸಂತೋಷ ಲಾಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ: ಜಿಲ್ಲಾ ಆಸ್ಪತ್ರೆ ಹಾಗೂ ಎಲ್ಲ ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಸಾರ್ವಜನಿಕರು ಸರಕಾರಿ ಆಸ್ಪತ್ರೆಗೆ ಬರುವಂತೆ ವೈದ್ಯರು ಸಕಾರಾತ್ಮಕವಾಗಿ ಸ್ಪಂದಿಸುವ ಕಾರ್ಯ ಮಾಡಬೇಕು. ಶಿಶು ಮರಣ, ರೋಗ ಪೂರ್ವ ಚಿಕಿತ್ಸೆ, ಆರೋಗ್ಯ ತಪಾಸಣಾ ಶಿಬಿರಗಳ ಆಯೋಜನೆ ಕುರಿತು ಕಾರ್ಯಕ್ರಮ ರೂಪಿಸಲು ಸಚಿವರು ತಿಳಿಸಿದರು.

ಜಿಲ್ಲೆಯಲ್ಲಿ ಔಷಧೀ, ಆರೋಗ್ಯ ಸಲಕರಣೆ, ಅಂಬುಲೇನ್ಸ್ ಕೊರತೆ ಆಗದಂತೆ ಎಚ್ಚರಿಕೆ ವಹಿಸಬೇಕು. ತಪ್ಪಿದಲ್ಲಿ ಸಂಭಂದಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಸ್ವಾಗತಿಸಿ, ಸಂಕ್ಷೇಪವಾಗಿ ಜಿಲ್ಲೆಯ ವಿವಿಧ ಪ್ರಮುಖ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಮತ್ತು ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿವಿಧ ಇಲಾಖೆಗಳಿಗೆ ಸಂಭಂದಿಸಿದ ಪೂರಕ ಮಾಹಿತಿ ನೀಡಿ, ಸಭೆ ನಿರ್ವಹಿಸಿದರು.

ವೇದಿಕೆಯಲ್ಲಿ ನಗರ ಪೊಲೀಸ್ ಆಯುಕ್ತ ರಮಣ ಗುಪ್ತ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ಮಹಾನಗರಪಾಲಿಕೆ ಆಯುಕ್ತ ಡಾ.ಗೋಪಾಲ ಕೃಷ್ಣ ಬಿ., ಉಪ ಪೊಲೀಸ್ ಆಯುಕ್ತರಾದ ರಾಜೀವ ಎಂ, ಡಾ.ಗೋಪಾಲ ಬ್ಯಾಕೂಡ ಇದ್ದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಹುಡಾ ಆಯುಕ್ತ ಡಾ.ಸಂತೋಷ ಬಿರಾದಾರ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ರೇಖಾ ಡೊಳ್ಳಿನವರ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಯೋಜನಾ ನಿರ್ದೇಶಕ ಬಿ.ಎಸ್.ಮೂಗನೂರಮಠ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಾಟೀಲ ಶಶಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ ಮಾನಕರ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ,

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ.ಉಮೇಶ ಕೊಂಡಿ, ಹೆಸ್ಕಾಂ ಇಇಗಳಾದ ಎಸ್.ಜಗದೀಶ, ಎಂ.ಎಂ. ನದಾಫ, ಜಿ.ಜೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕ ಎಚ್. ಎಚ್.ಕುಕನೂರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News