ಬೆಂಗಳೂರು: ಕೊರೋನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಠದಲ್ಲಿರುವ ಕೈಮಗ್ಗ ನೇಕಾರರಿಗೆ ನೇಕಾರರ ಸಮ್ಮಾನ ಯೋಜನೆಯಡಿ ರಾಜ್ಯ ಸರ್ಕಾರವು ವಾರ್ಷಿಕವಾಗಿ 2,000 ರೂ. ಗಳ ಆರ್ಥಿಕ ನೆರವು ನೀಡುತ್ತಿದೆ.ಇದಕ್ಕಾಗಿ ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಸಲ್ಲಿಕೆ ಅವಧಿಯನ್ನು 2020ರ ಜುಲೈ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಆರ್ಥಿಕ ನೆರವು ಪಡೆಯಲು ಕೈಮಗ್ಗ ನೇಕಾರರು ಕೈಮಗ್ಗ ನೇಕಾರಿಕೆಯಲ್ಲಿ ತೊಡಗಿರಬೇಕು. 4 ನೇ ರಾಷ್ಟ್ರೀಯ ಕೈಮಗ್ಗ ಗಣತಿಯಲ್ಲಿ ನೊಂದಾಯಿಸಿರಬೇಕು. 2,000 ರೂ. ಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿರುವುದರಿಂದ ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆ ವಿವರ, ಪೆಹಚಾನ್ ಕಾರ್ಡ್ ಮತ್ತು ರೇಷನ್ ಕಾರ್ಡ ವಿವರ ಒದಗಿಸಿ ಸೇವಾಸಿಂಧು ತಂತ್ರಾಂಶದ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.


ಈಗಾಗಲೇ ಅರ್ಜಿಗಳನ್ನು ಸೇವಾಸಿಂಧು ತಂತ್ರಾಂಶದಲ್ಲಿ ಇಲಾಖೆಯಿಂದ ಅಪ್‍ಲೋಡ ಮಾಡುವ ಕಾರ್ಯ ಚಾಲನೆಯಲ್ಲಿದೆ. ಪೆಹಚಾನ್ ಕಾರ್ಡ್ ಪಡೆದ ನೇಕಾರರು ಸಂಬಂಧಿಸಿದ ಕೈಮಗ್ಗ ನೇಕಾರರ ಸಹಕಾರ ಸಂಘಗಳಲ್ಲಿ ಹಾಗೂ ಕಲಬುರಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೆಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಿರುವುದಿಲ್ಲ. ಈವರೆಗೆ ಅರ್ಜಿ ಸಲ್ಲಿಸದೇ ಇವರು ಪೆಹಚಾನ್ ಕಾರ್ಡ್ ಹೊಂದಿದ ಸಂಘಟಿತ ಮತ್ತು ಅಸಂಘಟಿತ ವಲಯದ ನೇಕಾರರು ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆಯ ವಿವರ, ನೇಕಾರರ ಪೆಹಚಾನ್ ಕಾರ್ಡ ಮತ್ತು ರೇಷನ್ ಕಾರ್ಡ್‍ಗಳ ಪ್ರತಿಯನ್ನು ಲಗತ್ತಿಸಿ ಕಲಬುರಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ 2020ರ ಜುಲೈ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.


ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ , ಕೊಠಡಿ ಸಂಖ್ಯೆ 15, ಎರಡನೇ ಮಹಡಿ, ಮಿನಿ ವಿಧಾನ ಸೌಧ, ಕಲಬುರಗಿ-585102 ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08472-278629, 9008941033, 9900391684 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.