ಬೆಂಗಳೂರು: ಜೆಡಿಎಸ್ ಪಕ್ಷದ ಹಾಸನದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್(67) ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ , ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.


COMMERCIAL BREAK
SCROLL TO CONTINUE READING

67 ವರ್ಷ ವಯಸ್ಸಿನ ಪ್ರಕಾಶ್ ನವೆಂಬರ್ 20 ರಂದು ಅನಾರೋಗ್ಯ ನಿಮಿತ್ತ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 11.15ರ ಸಮಯದಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಹಿಂದೆ ಪ್ರಕಾಶ್ ಅವರಿಗೆ ಲಿವರ್ ಮತ್ತು ಕಿಡ್ನಿಯ ಟ್ರಾನ್ಸ್ ಪ್ಲಾಂಟೇಷನ್ ಸಹ ಮಾಡಲಾಗಿತ್ತು.


1994ರಿಂದ 2013ರವರೆಗೆ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 4 ಬಾರಿ ಚುನಾಯಿತರಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಕಾಶ್ ಅವರು ಪರಾಭವಗೊಂಡಿದ್ದರು. 


ಹಾಸನದ ಮಾಜಿ ಶಾಸಕರಾದ ಹೆಚ್.ಎಸ್. ಪ್ರಕಾಶ್ ಅವರು ನಮ್ಮನ್ನು ಅಗಲಿದ್ದಾರೆ ಎನ್ನುವ ಸುದ್ದಿ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ. ಶಾಸಕರಾಗಿ ಹಾಸನದ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿದ್ದ ಒಬ್ಬ ನಿಷ್ಠಾವಂತ, ನಿಷ್ಕಳಂಕ ನಾಯಕನನ್ನು ನಮ್ಮ ಪಕ್ಷ ಕಳೆದುಕೊಂಡಿದೆ.ದೇವರು ಅವರ ಆತ್ಮಕ್ಕೆ ಚಿರಶಾಂತಿ‌ ನೀಡಲಿ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಸಂತಾಪ ಸೂಚಿಸಿದ್ದಾರೆ.



ಹಾಸನದ ಮಾಜಿ ಶಾಸಕ ಹೆಚ್ ಎಸ್ ಪ್ರಕಾಶ್ ಅನಾರೋಗ್ಯದಿಂದ ನಿಧನರಾದ ಸುದ್ದಿ ತಿಳಿದು ನೋವುಂಟಾಗಿದೆ. ಅವರು ನಮ್ಮ ಪಕ್ಷದ ಅಭ್ಯರ್ಥಿಯಾಗಿ ಹಾಸನದಿಂದ 4 ಬಾರಿ ಶಾಸಕರಾಗಿ ಗೆಲುವು ಸಾಧಿಸಿದ್ದರು. ಸರಳತೆ ಹಾಗೂ ಪ್ರಾಮಾಣಿಕ ನಡೆ ನುಡಿಯಿಂದ ಜನಾನುರಾಗಿಯಾಗಿದ್ದ ಹೆಚ್.ಎಸ್.ಪ್ರಕಾಶ್ ಅಗಲಿಕೆ ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ಕರುಣಿಸಲಿ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಶೋಕ ವ್ಯಕ್ತಪಡಿಸಿದ್ದಾರೆ.