5 ದಿನಗಳ ಕಾಲ ಗಣೇಶೋತ್ಸವಕ್ಕೆ ಸರ್ಕಾರದಿಂದ ಅನುಮತಿ: ಷರತ್ತುಗಳು ಅನ್ವಯ..!

ರಾಜ್ಯದಲ್ಲಿ 5 ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಿಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.

Written by - Puttaraj K Alur | Last Updated : Sep 5, 2021, 05:17 PM IST
  • ನಗರ ಪ್ರದೇಶದಲ್ಲಿ ವಾರ್ಡ್​ಗೆ 1 ಮತ್ತು ಗ್ರಾಮಕ್ಕೊಂದು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ
  • ಮೆರವಣಿಗೆ ಸೇರಿದಂತೆ ಎಲ್ಲ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ
  • ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಂಡಿರಬೇಕು
5 ದಿನಗಳ ಕಾಲ ಗಣೇಶೋತ್ಸವಕ್ಕೆ ಸರ್ಕಾರದಿಂದ ಅನುಮತಿ: ಷರತ್ತುಗಳು ಅನ್ವಯ..! title=
ಗಣೇಶೋತ್ಸವಕ್ಕೆ ಸರ್ಕಾರದಿಂದ ಷರತ್ತುಬದ್ಧ ಅನುಮತಿ (Photo Courtesy: Twitter/@Zee News)

ಬೆಂಗಳೂರು: ರಾಜ್ಯದಲ್ಲಿ 5 ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ(Ganesh Festival 2021) ಆಚರಿಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಮೆರವಣಿಗೆ ಸೇರಿದಂತೆ ಎಲ್ಲ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ನೇತೃತ್ವದಲ್ಲಿ ಭಾನುವಾರ ನಡೆದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.  

‘ನಗರ ಪ್ರದೇಶದಲ್ಲಿ ವಾರ್ಡ್​ಗೆ 1, ಗ್ರಾಮಕ್ಕೊಂದು ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಮೂರ್ತಿ ಪ್ರತಿಷ್ಠಾಪಿಸುವವರು ತಹಶೀಲ್ದಾರ್, ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು. ಈ ಬಾರಿ ಯಾವುದೇ ಮನರಂಜನೆ ಕಾರ್ಯಕ್ರಮಕ್ಕೆ ಅವಕಾಶವಿರುವುದಿಲ್ಲ’ವೆಂದು ಸಿಎಂ ಜೊತೆಗಿನ ಸಭೆ ಬಳಿಕ ಕಂದಾಯ ಸಚಿವ ಆರ್.ಅಶೋಕ್(R Ashok) ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿ ವರದಿ ಒಪ್ಪಿಕೊಳ್ಳದ ಬಿಜೆಪಿ ನಾಯಕರಿಂದ ಕುಂಟುನೆಪ: ಸಿದ್ದರಾಮಯ್ಯ

‘ಪೊಲೀಸ್‌ ಇಲಾಖೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತು(Ganesha Festival Guidelines)ಗಳನ್ನು ಪಾಲಿಸಿಕೊಂಡು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ’ ಅಂತಾ ಸಚಿವರು ಮಾಹಿತಿ ನೀಡಿದ್ದಾರೆ. ‘ನಗರಗಳಲ್ಲಿ ಪ್ರತಿ ವಾರ್ಡ್‌ಗೆ ಕೇವಲ 1 ಸ್ಥಳದಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿರಲಿದೆ. ಕಾರ್ಯಕ್ರಮದ ಸಂಘಟಕರ ಜೊತೆ ಚರ್ಚಿಸಿ ಸ್ಥಳೀಯ ಪೊಲೀಸರು ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಡಿಜೆ ಧ್ವನಿವರ್ಧಕ ಬಳಕೆಗೆ ಯಾವುದೇ ರೀತಿ ಅನುಮತಿ ಇರಲ್ಲ. ಗಣೇಶ ಮೂರ್ತಿಗಳ ವಿಸರ್ಜನೆಗೆ ಯಾವುದೇ ರೀತಿ ಮೆರವಣಿಗೆ ನಡೆಸುವಂತಿಲ್ಲ. ಕೆಲವರಷ್ಟೇ ಗಣೇಶ ಮೂರ್ತಿ ವಿಸರ್ಜನೆಯಲ್ಲಿ ಪಾಲ್ಗೊಳ್ಳಬಹುದು. ಶಾಲೆ-ಕಾಲೇಜು ಸೇರಿ ಸರ್ಕಾರಿ ಸ್ಥಳಗಳಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿರುವುದಿಲ್ಲ’ವೆಂದು ಸಚಿವ ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಸಾವು ಖಚಿತ, ಶವಸಂಸ್ಕಾರ ಉಚಿತ!: ಕಾಂಗ್ರೆಸ್ ವ್ಯಂಗ್ಯ

‘ಸಾರ್ವಜನಿಕರ ಮತ್ತು ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತೆ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ. ಸಾರ್ವಜನಿಕ ಗಣೇಶೋತ್ಸವ(Ganesha Utsav)ದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಕೊರೊನಾ ಲಸಿಕೆ(Corona Vaccine)ಯನ್ನು ಹಾಕಿಸಿಕೊಂಡಿರಬೇಕು. ಕಾರ್ಯಕ್ರಮ ಸಂಘಟಕರು ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿರಬೇಕು. ಕಾರ್ಯಕ್ರಮದ ಸ್ಥಳದಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಮಾಡಬೇಕು’ ಎಂದು ಸಚಿವರು ಹೇಳಿದ್ದಾರೆ.  

ಸಭೆಯಲ್ಲಿ ಸಚಿವ ಬಿ.ಸಿ.ನಾಗೇಶ್, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News