ಸಿಎಂ ಸ್ಥಾನಕ್ಕೆ ಹೆಚ್.ಡಿ.ರೇವಣ್ಣ ಕೂಡಾ ಅರ್ಹರು: ಹೆಚ್ಡಿಕೆಗೆ ಸಿದ್ದರಾಮಯ್ಯ ಟಾಂಗ್
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಮುಖ್ಯಮಂತ್ರಿ ಸ್ಥಾನದ ಅರ್ಹತೆ ಹೊಂದಿರುವ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಯಾವತ್ತೋ ಸಿಎಂ ಆಗಬೇಕಿತ್ತು ಎಂದಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಮಾತಿಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಹೆಚ್.ಡಿ.ರೇವಣ್ಣ ಕೂಡ ಅರ್ಹರು ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿರುವುದು ಸರಿಯಾಗಿಯೇ ಇದೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇವಲ ಮುಖ್ಯಮಂತ್ರಿ ಸ್ಥಾನವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆ ಅವರಿಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಮುಖ್ಯಮಂತ್ರಿ ಸ್ಥಾನದ ಅರ್ಹತೆ ಹೊಂದಿರುವ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು" ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಎರಡು ದಿನಗಳ ಹಿಂದೆ ಚಿಂಚೋಳಿಯಲ್ಲಿ ಏರ್ಪಡಿಸಲಾಗಿದ್ದ ಉಪಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಸಿಎಂ ಕುಮಾರಸ್ವಾಮಿ ಅವರು, ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾ, ಖರ್ಗೆ ಅವರಿಗಿರುವ ರಾಜಕೀಯ ಅನುಭವ, ಜನಪರ ಹೋರಾಟ ಹಾಗೂ ಹಿನ್ನೆಲೆ ನೋಡಿದರೆ ಅವರು ಯಾವೊತ್ತೋ ಸಿಎಂ ಆಗಬೇಕಿತ್ತು. ಆದರೆ ಕೆಲ ರಾಜಕೀಯ ನಿರ್ಧಾರಗಳಿಂದ ಅವರು ಸಿಎಂ ಆಗಲಿಲ್ಲ ಎನ್ನುವ ನೋವು ನಮಗೂ ಇದೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದ್ದರು. ಅದಕ್ಕೀಗ ರೇವಣ್ಣ ಕೂಡ ಸಿಎಂ ಸ್ಥಾನಕ್ಕೆ ಅರ್ಹರು ಎಂದು ಹೇಳುವ ಮೂಲಕ ಹೆಚ್ಡಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.