ಬೆಂಗಳೂರು: ನಾನು, ಯಡಿಯೂರಪ್ಪ ತುಂಬಾ ಆತ್ಮೀಯ ಗೆಳೆಯರು. ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ನಮಗೂ ಕೂಡ ಹಲವು ಕೆಲಸ ಮಾಡಿಕೊಟ್ಟಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸಿಗಂದೂರು ಸೇತುವೆ ಹಾಗೂ ಶಿವಮೊಗ್ಗ ನೀರಾವರಿ ಬಗ್ಗೆ ಚರ್ಚೆ ನಡೆಸಲು ಬೆಂಗಳೂರಿನ ಶಿವಾನಂದ ವೃತ್ತದ ಬಳಿಯಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ನಮಗೆ ಕೂಡಾ ಹಲವು ಕೆಲಸ ಮಾಡಿಕೊಟ್ಟಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ನಾವು ಯಾರೂ ರಾಜಕಾರಣ ಮಾಡಲ್ಲ. ಬಹಳ ಒತ್ತಡ ಇದ್ದರೂ ಕೂಡಾ ಅಧಿಕಾರಿಗಳನ್ನು ಕರೆಸಿ ಸಭೆ ಮಾಡಿದ್ದೇನೆ. ಕಾಮಗಾರಿ ವಿಚಾರವಾಗಿ ಆಗಬೇಕಾಗಿರುವ ಕೆಲಸಗಳನ್ನು ಶೀಘ್ರವಾಗಿ ಪ್ರಾರಂಭಿಸುತ್ತೇವೆ ಎಂದರು.


ಇದಕ್ಕೂ ಮೊದಲು ಮನೆಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಅವರನ್ನು ಡಿ.ಕೆ.ಶಿವಕುಮಾರ್ ಹೂಗುಚ್ಛ ನೀಡಿ ಸ್ವಾಗತಿಸಿದರು. ಯಡಿಯೂರಪ್ಪ ಜೊತೆ ಹರತಾಳು ಹಾಲಪ್ಪ, ಪುತ್ರ ಬಿ.ವೈ.ರಾಘವೇಂದ್ರ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.