)
ಕಲಬುರಗಿ: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಅವರ ಇಬ್ಬರು ಸಹೋದರರು ದುರಂತ ಸಾವಿಗೀಡಾಗಿದ್ದಾರೆ. 51 ವರ್ಷದ ಮಹಾಂತೇಶ್ ಬೀಳಗಿ ಅವರು ಈ ಹಿಂದೆ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಅಪಘಾತ ಹೇಗಾಯ್ತು..?
ವಿಜಯಪುರದಿಂದ ಕಲಬುರಗಿಗೆ ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಏಕಾಏಕಿ ನಾಯಿ ಅಡ್ಡ ಬಂದಿದ್ದು, ಅದನ್ನ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರು (KA 04, NC 7982) ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ.
ಮೂವರು ಸಹೋದರರ ದುರಂತ ಅಂತ್ಯ
ಈ ಭೀಕರ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ, ಅವರ ಸಹೋದರರಾದ ಶಂಕರ ಬೀಳಗಿ ಮತ್ತು ಈರಣ್ಣ ಶಿರಸಂಗಿ ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮಹಾಂತೇಶ್ ಬೀಳಗಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಐಜಿಪಿ ಶಾಂತನು ಸಿನ್ಹಾ, ಕಲಬುರಗಿ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ದೌಡಾಯಿಸಿ ಮಾಹಿತಿ ಪಡೆದರು.
ಮಹಾಂತೇಶ್ ಬೀಳಗಿ ಅವರ ಹಿನ್ನೆಲೆ
ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದರು. ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಹಿಂದೆ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದ ಅವರು, ದಾವಣಗೆರೆ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಹಾಗೂ ವಿವಿಧ ಹುದ್ದೆಗಳಲ್ಲಿ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದರು. ಇನ್ನೂ ವಿಧಿಯಾಟ ಎನ್ನುವಂತೆ ಕಾರಿನ ಏರ್ಬ್ಯಾಗ್ ಓಪನ್ ಆಗಿದ್ರೂ ಸಹ ಜೀವಗಳು ಉಳಿಯಲಿಲ್ಲ.
ಮಧ್ಯಾಹ್ನ 3ಗಂಟೆಯ ನಂತರ ಅಂತ್ಯಕ್ರಿಯೆ
ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿಯವರ ಮೃತದೇಹವನ್ನ ಹುಟ್ಟೂರಿಗೆ ತರಲಾಗಿದೆ. ಮಹಾಂತೇಶ್ ಬೀಳಗಿಯವರು ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿವಾಸಿಯಾಗಿದ್ದಾರೆ. ಅವರ ಮೃತದೇಹವು ಕಲಬುರಗಿಯಿಂದ ತಡರಾತ್ರಿಯೇ ರಾಮದುರ್ಗಕ್ಕೆ ತರಲಾಗಿದ್ದು, ಪಂಚಗಟಿ ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2ರವೆಗೆ ಅಂತಿಮ ದರ್ಶನಕ್ಕೆ ಅವಕಾಶವಿರುತ್ತದೆ. ನಂತರ ಹಿಂದೂ ಧರ್ಮದ ವಿಧಿ ವಿಧಾನಗಳೊಂದಿಗೆ ರಾಮದುರ್ಗ ಹೊರವಲಯದಲ್ಲಿ ಹಲಗತ್ತಿಯಲ್ಲಿರುವ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.