ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿದ್ದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಜನರ ತಲೆ ಮೇಲೆ ಸಾಲದ ಹೊರೆ ಹೊರಿಸಿದ್ದೇನೆ ಎಂದು ನಿರಾಧಾರವಾಗಿರುವ ಅಂಕಿ-ಅಂಶಗಳನ್ನು ಹುಟ್ಟುಹಾಕಿ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸತ್ಯ ಸಂಗತಿಯನ್ನು ಜನತೆಯ ಮುಂದಿಡುವುದು ನನ್ನ ಕರ್ತವ್ಯ ಎಂದು ಭಾವಿಸಿದ್ದೇನೆ.    ಬಿಜೆಪಿಗೆ ತಾನು ಮಾಡಿರುವ ಆರೋಪದ ಮೇಲೆ ಅಷ್ಟೊಂದು ವಿಶ್ವಾಸ ಇದ್ದರೆ ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಐದು ವರ್ಷಗಳ ಆಡಳಿತಾವಧಿಯ ಹಣಕಾಸು ಸ್ಥಿತಿ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಏರ್ಪಡಿಸಿ ಸ್ಥಳ ಸಮಯ ತಿಳಿಸಿದರೆ ನಾನು ಬಂದು ಅದರಲ್ಲಿ ಭಾಗವಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಸಾವಲು ಹಾಕಿದ್ದಾರೆ.


COMMERCIAL BREAK
SCROLL TO CONTINUE READING

ಬಿಜೆಪಿ (BJP) ತನ್ನ ನಾಯಕರಿಗೆ ದೇಶ, ಧರ್ಮ, ಸಮಾಜ ಒಡೆಯುವ ತರಬೇತಿಯನ್ನಷ್ಟೇ ನೀಡದೆ ಆಡಳಿತ  ಮತ್ತು ಆರ್ಥಿಕ ನಿರ್ವಹಣೆ ಬಗ್ಗೆಯೂ ಪಾಠ ಮಾಡಿದ್ದರೆ ಅವರಿಂದ ಇಂತಹ ಅಜ್ಞಾನದ ಮುತ್ತುಗಳು ಉದುರಿ ಬೀಳುತ್ತಿರಲಿಲ್ಲ. ತರಬೇತಿದಾರರ ಕೊರತೆಯಿದ್ದರೆ ನಾನೇ ಬಂದು ಪಾಠ ಮಾಡ್ತೇನೆ ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


2008-09ರಿಂದ 2013-14ರ ವರೆಗಿನ ಬಿಜೆಪಿ ಸರ್ಕಾರದ (BJP Government) ಐದು ವರ್ಷಗಳ ಅವಧಿಯಲ್ಲಿ ಸಾಲದ ಪ್ರಮಾಣ ಶೇಕಡಾ 212ರಷ್ಟು ಹೆಚ್ಚಿತ್ತು. 2013-14ರಿಂದ 2018-19ರ ನಮ್ಮ ಸರ್ಕಾರದ ಅವಧಿಯಲ್ಲಿ ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇಕಡಾ 65ರಷ್ಟು ಮಾತ್ರ. ಹಿಂದಿನ ಅವಧಿಯ ಸಾಲವನ್ನು ಸೇರಿಸಿ ರಾಜ್ಯದ ಒಟ್ಟು ಸಾಲದ ಪ್ರಮಾಣ 2008-09ರಿಂದ 2013-14ರ ಅವಧಿಯಲ್ಲಿ ಶೇಕಡಾ 94.18ರಷ್ಟು ಹೆಚ್ಚಿದ್ದರೆ, 2013-14ರಿಂದ 2018-19ರ ಅವಧಿಯಲ್ಲಿ ಒಟ್ಟು ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇಕಡಾ 78.19ರಷ್ಟು ಮಾತ್ರ ಎಂದು ವಿವರಿಸಿದ್ದಾರೆ.


ಇದೊಂದು ಪಂಚೇಂದ್ರಿಯವನ್ನು ಕಳೆದುಕೊಂಡು ಮರಗಟ್ಟಿ ಹೋಗಿರುವ ಸರ್ಕಾರ- ಸಿದ್ಧರಾಮಯ್ಯ ವಾಗ್ದಾಳಿ


ಪ್ರಸಕ್ತ ಸಾಲಿನ ಬಜೆಟ್ (Budget) ಅಂದಾಜಿನ ಪ್ರಕಾರ  ರಾಜ್ಯದ ಸಾಲ ರೂ. 53,000 ಕೋಟಿ. ಕೊರೊನಾದಿಂದಾಗಿ ಆಗಿರುವ ಆದಾಯ ಖೋತಾ ತುಂಬಲು ಹೆಚ್ಚುವರಿ ರೂ.33,000 ಕೋಟಿ ಸಾಲದ ಜೊತೆ, ಜಿಎಸ್ ಟಿ ಪರಿಹಾರ ಭರಿಸಲು ಮತ್ತೆ ರೂ.12,000 ಕೋಟಿ ಸಾಲ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಒಂದೇ ವರ್ಷದಲ್ಲಿ ಸಾಲದ ಮೊತ್ತ ದುಪ್ಪಟ್ಟು ಮಾಡಿರುವುದು ಬಿಜೆಪಿಯ ಸಾಧನೆ ಎಂದು ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.


ಸಾಲದ ಹೊರೆಯ ಸುಳ್ಳು ಆರೋಪ ಮಾಡುವುದಕ್ಕಿಂತ ಮೊದಲು ರಾಜ್ಯದ ಬಿಜೆಪಿ ನಾಯಕರು ವಿತ್ತೀಯ ಹೊಣೆಗಾರಿಕೆ ಅಧಿನಿಯಮವನ್ನೊಮ್ಮೆ ಓದಿಕೊಳ್ಳಬೇಕಿತ್ತು. ಅದರ ಪ್ರಕಾರ ನಮ್ಮ ಸಾಲ ರಾಜ್ಯದ ಆಂತರಿಕ ಉತ್ಪನ್ನದ 25%ರ ಮಿತಿಯಲ್ಲಿರಬೇಕಾಗುತ್ತದೆ. ನನ್ನ ಕೊನೆಯ ಬಜೆಟ್ ನಲ್ಲಿ ರಾಜ್ಯದ ಸಾಲ ಶೇಕಡಾ 20.36ರ ಮಿತಿಯೊಳಗೆ ಇತ್ತು. ಈಗಿನ ಬಿಜೆಪಿ ಆಡಳಿತದಲ್ಲಿ ಅದು ಶೇಕಡಾ 33ರ ಮಿತಿ ದಾಟಲಿದೆ ಎಂದು ಬಿಜೆಪಿ ಬಣ್ಣವನ್ನು ಸಿದ್ದರಾಮಯ್ಯ ಬಯಲು ಮಾಡಿದ್ದಾರೆ.


ರಾಜ್ಯಕ್ಕೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್ ನಿಮಗಿದೆಯೇ ಕಟೀಲ್ ಅವರೇ? -ಸಿದ್ಧು ಪ್ರಶ್ನೆ


ರಾಜ್ಯದ ವಿತ್ತೀಯ ಕೊರತೆ ನಮ್ಮ ಆಂತರಿಕ ಉತ್ಪನ್ನದ (GSDP) ಶೇಕಡಾ ಮೂರನ್ನು ಮೀರಬಾರದು ಎಂದು ವಿತ್ತೀಯ ಹೊಣೆಗಾರಿಕೆ ಅಧಿನಿಯಮ ಹೇಳಿದೆ. ಮುಖ್ಯಮಂತ್ರಿಯಾಗಿ ನಾನು ಮಂಡಿಸಿದ್ದ ಆರು ಆಯವ್ಯಯಪತ್ರಗಳಲ್ಲಿ ವಿತ್ತೀಯಕೊರತೆ ಎಂದೂ ಶೇಕಡಾ ಮೂರರ ಮಿತಿಯನ್ನು ಮೀರಿರಲಿಲ್ಲ. ನನ್ನ ಕೊನೆಯ ಬಜೆಟ್ ನಲ್ಲಿ ಈ ಮಿತಿ ಶೇಕಡಾ 2.49ರಷ್ಟಿತ್ತು. ಆದರೀಗ ರಾಜ್ಯದ ಬಿಜೆಪಿ ಸರ್ಕಾರ ವಿತ್ತೀಯ ಕೊರತೆಯ ಮಿತಿಯನ್ನು 3% ಇಂದ 5% ಗೆ ಏರಿಕೆ ಮಾಡುವ ಅಪಾಯಕಾರಿ ನಿಲುವು ತೆಗೆದುಕೊಂಡಿದೆ. ಈ ರೀತಿ5% ಗೆ ಏರಿಕೆ ಮಾಡುವುದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ. ಹೆಚ್ಚೆಂದರೆ 3.5ಕ್ಕೆ ಏರಿಕೆ ಮಾಡಿ, ಮುಂದಿನ ದಿನಗಳಲ್ಲಿ ಮತ್ತೆ ಇಳಿಕೆ ಮಾಡಬಹುದಿತ್ತು. ಈ ಕಿವುಡು ಸರ್ಕಾರಕ್ಕೆ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ ಎಂದು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.


2020-21ರ ಆಯವ್ಯಯದಲ್ಲಿ ನಮ್ಮ ಒಟ್ಟು ಆಂತರಿಕ ಉತ್ಪನ್ನ 18 ಲಕ್ಷ ಕೋಟಿ ಎಂದು ಅಂದಾಜು ಮಾಡಲಾಗಿದೆ. ಆದರೆ ಕೊರೊನಾ ಹಾವಳಿ ಮತ್ತು ರಾಜ್ಯ ಸರ್ಕಾರದ ಆರ್ಥಿಕ ಎಡವಟ್ಟುಗಳ ಕಾರಣದಿಂದ ಅದು 12ಲಕ್ಷ ಕೋಟಿಗಿಂತಲೂ ಕೆಳಗಿಳಿಯಬಹುದು. ಆಗ ನಮ್ಮ ಸಾಲದ ಸಾಮರ್ಥ್ಯ ಕೂಡಾ ಕಡಿಮೆಯಾಗಲಿದೆ. ಸಂವಿಧಾನದ 101ನೇ ತಿದ್ದುಪಡಿ ಮೂಲಕ ಕಾರ್ಯರೂಪಕ್ಕೆ ಬಂದಿರುವ ಜಿಎಸ್ ಟಿ (GST) ಕಾಯ್ದೆಯ ಸೆಕ್ಷನ್ 18ರ ಪ್ರಕಾರ 5 ವರ್ಷಗಳ ಕಾಲ ಜಿಎಸ್ ಟಿ ಪರಿಹಾರ ನೀಡಬೇಕಾಗಿರುವುದು ಸಂವಿಧಾನಾತ್ಮಕ ಕರ್ತವ್ಯ. 2020-2021ರ ಆರ್ಥಿಕ ವರ್ಷದ ಅಂತ್ಯಕ್ಕೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಜಿಎಸ್ ಟಿ ಪರಿಹಾರವಾಗಿ 30,000 ಕೋಟಿ ನೀಡಬೇಕಾಗುತ್ತದೆ ಈ ಪರಿಹಾರದ ನಿರಾಕರಣೆ ನಮ್ಮ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.


ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಹೇಳಿದ ಮೋದಿ ಭಾಷಣವೇ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ-ಸಿದ್ಧರಾಮಯ್ಯ


14ನೇ ಹಣಕಾಸು ಆಯೋಗದಲ್ಲಿ 4.71% ಇದ್ದ ರಾಜ್ಯದ ಪಾಲನ್ನು 15ನೇ ಹಣಕಾಸು ಆಯೋಗದಲ್ಲಿ 3.64%ಗೆಇಳಿಸಲಾಗಿದೆ. ಇದರಿಂದ ರಾಜ್ಯಕ್ಕೆ ರೂ.12 ಸಾವಿರ ಕೋಟಿ ನಷ್ಟವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಆಯೋಗ ಶಿಫಾರಸು ಮಾಡಿದ್ದ ರೂ.5495 ಕೋಟಿ ವಿಶೇಷ ಅನುದಾನವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿರಸ್ಕರಿಸಿ ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ ಎಂದು ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೂ ಕಿಡಿಕಾರಿದ್ದಾರೆ.


ಈಗಿನ ಆರ್ಥಿಕ ಸಂಕಷ್ಟದಿಂದ ಪಾರಾಗಬೇಕಾದರೆ ರಾಜ್ಯ ಸರ್ಕಾರ ಬದ್ಧತಾ ವೆಚ್ಚಕ್ಕೆ ಕಡಿವಾಣ ಹಾಕಬೇಕಾಗಿದೆ. ದುಂದು ವೆಚ್ಚಗಳನ್ನು ನಿಲ್ಲಿಸಬೇಕು ಅನಗತ್ಯ ಹುದ್ದೆಗಳನ್ನು ರದ್ದುಮಾಡಬೇಕು, ತೆರಿಗೆಯೇತರ ಆಧಾಯವನ್ನು ಹೆಚ್ಚಿಸಬೇಕು. ಆರ್ಥಿಕ ಶಿಸ್ತನ್ನು ಪಾಲಿಸಬೇಕು. ರಾಜ್ಯ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿ ಸಾಲ ಮಾಡಲು ಹೊರಟರೂ ಪ್ರವಾಹದಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಜನರಿಗೆ ಪರಿಹಾರ ಕೊಡಲು ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ, ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡಲು ಸಾಧ್ಯವಾಗಿಲ್ಲ. ಜನರ ತೆರಿಗೆಯ ದುಡ್ಡಿನ ಜೊತೆ ಸಾಲದ ದುಡ್ಡು ಕೂಡಾ ಯಾರ ಜೇಬಿಗೆ ಹೋಗಿದೆ ಎನ್ನುವುದನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.


ಬಿಜೆಪಿ ಆಡಳಿತದ ಹಿಂದಿನ ಅವಧಿಯಲ್ಲಿ ದೇಶದ ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕದ್ದು ಎಂದು ಮಾಧ್ಯಮಗಳು ತುಚ್ಚೀಕರಿಸುತ್ತಿತ್ತು. ನಮ್ಮ ಆಡಳಿತದ ಕಾಲದಲ್ಲಿ ಅತ್ಯಂತ ಸಮರ್ಥವಾಗಿ ಹಣಕಾಸನ್ನು ನಿರ್ವಹಿಸಿದ ರಾಜ್ಯ ಕರ್ನಾಟಕವೆಂದು ದೇಶ ಕೊಂಡಾಡುತ್ತಿತ್ತು. ಇಂತಹ ಕರ್ನಾಟಕವನ್ನು ಭಾರತೀಯ ಜನತಾ ಪಕ್ಷದ ಸರ್ಕಾರ ಮತ್ತೆ ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ ಎಂದು ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.