ಬೆಂಗಳೂರು: ಖಾಸಗಿ ಕ್ಲಿನಿಕ್ ನಡೆಸುತ್ತಿರುವ ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಆರೋಗ್ಯ ಸಚಿವ ಶ್ರೀರಾಮುಲು ಖಡಕ್ ವಾರ್ನಿಂಗ್ ಒಂದನ್ನು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ನಗರದ ಸಿಎಂ ನಿವಾಸ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಲವು ವೈದ್ಯರು ಖಾಸಗಿ ಕ್ಲಿನಿಕ್ ಗಳನ್ನೂ ನಡೆಸುವ ವಿಚಾರ ನನ್ನ ಗಮನಕ್ಕೆ ಬಂದಿದೆ. ಅಂತಹವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.


ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ ಗಳನ್ನೂ ನಡೆಸುತ್ತಿರುವುದರಿಂದ ಅಲ್ಲಿ ಹೆಚ್ಚಿನ ಸಮಯ ಕಳೆಯುತ್ತಾರೆ. ಇದರಿಂದಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಅವರ ಲಭ್ಯತೆ ಕಡಿಮೆಯಾಗುತ್ತಿದ್ದು, ಬಡವರಿಗೆ ತೊಂದರೆಯಾಗುತ್ತಿದೆ. ಕರ್ತವ್ಯದ ವೇಳೆ ಸರ್ಕಾರಿ ಆಸ್ಪತ್ರೆಗಳಿಗೆ ಗೈರಾಗಿ ಅವರು ತಮ್ಮ ಕ್ಲಿನಿಕ್ ಗಳಲ್ಲಿ ನಿರತರಾಗಿರುತ್ತಾರೆ ಎಂಬ ಬಗ್ಗೆ ಸಾರ್ವಜನಿಕರಿಂದ ಹಲವು ದೂರುಗಳು ಬಂದಿವೆ. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅಂತಹ ಸರ್ಕಾರಿ ವೈದ್ಯಾಧೀಕಾರಿಗಳನ್ನು ಡಿಸ್​ಮಿಸ್ ಮಾಡಲಾಗುವುದು ಎಂದು ಅವರು ತಿಳಿಸಿದರು.


ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ:
ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡುವುದಾಗಿ ತಿಳಿಸಿದ ಸಚಿವ ಶ್ರೀರಾಮುಲು, ಅದಕ್ಕಾಗಿ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳನ್ನು ಪಟ್ಟಿ ಮಾಡಿಕೊಂಡಿದ್ದೇನೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡುವ ಸಂದರ್ಭದಲ್ಲಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಚಿಕಿತ್ಸಾ ಗುಣಮಟ್ಟ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.