ವಿರಾಜಪೇಟೆ: ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಇಂದು ವಿರಾಜಪೇಟೆಯಲ್ಲಿ ನಡೆದ ವಿಕಾಸ ಪರ್ವ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಜೆಡಿಎಸ್ ಕಿಂಗ್ ಆಗುತ್ತದೆ. ಕಿಂಗ್ ಮೇಕರ್ ಅಲ್ಲ. ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. 


ಈಗಾಗಲೇ ಚುನಾವಣೆಗೆ ಸಂಬಂಧಿಸಿದಂತೆ ಸಾಕಷ್ಟು ಸಮೀಕ್ಷೆಗಳು ಹೊರಬಿದ್ದಿದ್ದು, ಎಲ್ಲಾ ಸಮೀಕ್ಷೆಗಳಲ್ಲೂ 40 ರಿಂದ 45 ಸ್ಥಾನ ಜೆಡಿಎಸ್ ಗೆಲ್ಲಲಿದೆ ಎಂದು ಹೇಳಲಾಗಿದೆ. ಆದರೆ, ಈ ಸಮೀಕ್ಷೆಗಳ ಬಗ್ಗೆ ಪಕ್ಷ ತಲೆಕೆಡಿಸಿಕೊಳ್ಳುವುದಿಲ್ಲ. ಅಲ್ಲದೆ, ಈ ಸಮೀಕ್ಷೆ ವರದಿಗಳೇನೂ ಅಂತಿಮವಲ್ಲ ಎಂದು ಕುಮಾರಸ್ವಾಮಿ ಹೇಳಿದರು. 


ಮುಂದುವರೆದು ಮಾತನಾಡಿದ ಅವರು, ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ನಾಳೆ(ಏ.18) ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.