ಇಂದು ದೆಹಲಿಗೆ ಸಿಎಂ ಬೊಮ್ಮಾಯಿ: ಖಾಲಿ ಇರುವ ಸಚಿವ ಸ್ಥಾನ ಭರ್ತಿಗೆ ಮುಹೂರ್ತ?

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳ ಭರ್ತಿ ಮಾಡುವ ಕುರಿತು ಬಿಜೆಪಿ ವರಿಷ್ಠರ ಜೊತೆ ಸಮಾಲೋಚನೆ ನಡೆಸುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

Written by - Puttaraj K Alur | Last Updated : Sep 7, 2021, 12:11 PM IST
  • 2 ದಿನಗಳ ದೆಹಲಿ ಪ್ರಸಾದ ಕೈಗೊಂಡ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
  • ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳ ಭರ್ತಿ ಕುರಿತು ವರಿಷ್ಠರ ಜೊತೆ ಸಮಾಲೋಚನೆ ನಿರೀಕ್ಷೆ
  • ‘ಕಮಲ ಪಾಳಯ’ದಲ್ಲಿ ಹಲ್ ಚಲ್ ಎಬ್ಬಿಸಿದ ಸಿಎಂ ಡೆಲ್ಲಿ ಭೇಟಿ, ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಹೊಸ ಕನಸು
ಇಂದು ದೆಹಲಿಗೆ ಸಿಎಂ ಬೊಮ್ಮಾಯಿ: ಖಾಲಿ ಇರುವ ಸಚಿವ ಸ್ಥಾನ ಭರ್ತಿಗೆ ಮುಹೂರ್ತ?  title=
ಇಂದು ದೆಹಲಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಲಿದ್ದಾರೆ (Photo Courtesy: @Zee News)

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ಇಂದು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುತ್ತಿದ್ದು, ಸಚಿವ ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳ ಭರ್ತಿ ಮಾಡುವ ಕುರಿತು ಬಿಜೆಪಿ ವರಿಷ್ಠರ ಜೊತೆ ಸಮಾಲೋಚನೆ ನಡೆಸುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ. ಸಿಎಂ ದೆಹಲಿ ಪ್ರವಾಸದ ಬೆನ್ನಲ್ಲೇ ಕರ್ನಾಟಕ ಸಚಿವ ಸಂಪುಟ(Karnataka Cabinet Expansion)ಕ್ಕೆ ಕೂಡಿ ಬಂತಾ ಮುಹೂರ್ತ..? ಖಾಲಿ ಇರುವ ಸಚಿವ ಸ್ಥಾನಗಳನ್ನು ಫೈನಲ್ ಮಾಡಿಕೊಂಡೇ ಬರ್ತಾರಾ ಸಿಎಂ ಎನ್ನುವ ಪ್ರಶ್ನೆ ಮೂಡಿದೆ.

ಸಿಎಂ ಡೆಲ್ಲಿ ಭೇಟಿಯು ‘ಕಮಲ ಪಾಳಯ’ದಲ್ಲಿ ಹಲ್ ಚಲ್ ಎಬ್ಬಿಸಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಕನಸು ಚಿಗುರಿಕೊಂಡಿದೆ. ಮಂಗಳವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಸಲಿರುವ ಸಿಎಂ ಬೊಮ್ಮಾಯಿ ಮಧ್ಯಾಹ್ನ 2.30ಕ್ಕೆ ದೆಹಲಿ ತಲುಪಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಸೇರಿದಂತೆ ಇತರೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ(Cabinet Expansion) ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಸಾವು ಖಚಿತ, ಶವಸಂಸ್ಕಾರ ಉಚಿತ!: ಕಾಂಗ್ರೆಸ್ ವ್ಯಂಗ್ಯ

ಇಂದು ಮತ್ತು ನಾಳೆ(ಆಗಸ್ಟ್ 8) ದೆಹಲಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಬೊಮ್ಮಾಯಿ ಮುಖ್ಯವಾಗಿ‌ ಸಚಿವ ಸಂಪುಟ ವಿಸ್ತರಣೆ, ಪಾಲಿಕೆ ಚುನಾವಣೆ ಗೆಲವು, ಪಕ್ಷದೊಳಗಿನ ಬೆಳವಣಿಗೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa) ನಿರ್ಗಮನದ ನಂತರದ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ವರಿಷ್ಠರ ಜೊತೆ ಚರ್ಚೆ ನಡೆಸಲಿದ್ದಾರೆಂದು ತಿಳಿದುಬಂದಿದೆ.   

ತಮ್ಮ ದೆಹಲಿ ಭೇಟಿ ವೇಳೆ ಕೆಲವು ಸಚಿವರನ್ನು ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ(Basavaraj Bommai), ರಾಜ್ಯದ ವಿವಿಧ ಯೋಜನೆಗಳಿಗೆ ಅನುಮತಿ ನೀಡುವ ಬಗ್ಗೆ ಮನವಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಖ್ಯವಾಗಿ ಮೇಕೆದಾಟು, ಮಹದಾಯಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರಲ್ಲಿ ಪ್ರಸ್ತಾಪಿಸಿ ತ್ವರಿತಗತಿಯಲ್ಲಿ ಯೋಜನೆ ಅನುಷ್ಠಾನದ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.  

ಇದನ್ನೂ ಓದಿ: ಜಾತಿ ಗಣತಿ ವರದಿ ಒಪ್ಪಿಕೊಳ್ಳದ ಬಿಜೆಪಿ ನಾಯಕರಿಂದ ಕುಂಟುನೆಪ: ಸಿದ್ದರಾಮಯ್ಯ

ಬುಧವಾರ ದೆಹಲಿಯಲ್ಲಿ ಆಯೋಜಿಸಿರುವ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ(Pralhad Joshi) ಪುತ್ರಿಯ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ  ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ನಡೆದಿದ್ದ ಮದುವೆ ಸಮಾರಂಭಗಳಲ್ಲಿಯೂ ಅವರು ಭಾಗಿಯಾಗಿದ್ದರು. ಒಟ್ಟಾರೆ ತಮ್ಮ ದೆಹಲಿ ಭೇಟಿ ವೇಳೆ ಖಾಲಿ ಇರುವ 4 ಸಚಿವ ಸ್ಥಾನಗಳನ್ನು ಭರ್ತಿ ಮಾಡಿಕೊಂಡೇ ರಾಜ್ಯಕ್ಕೆ ಬೊಮ್ಮಾಯಿ ವಾಪಸ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಹೀಗಾಗಿ ಯಾರಿಗೆ ಸಚಿವ ಸ್ಥಾನದ ಭಾಗ್ಯ ಒಲಿದು ಬರಲಿದೆ ಎಂಬ ಕುತೂಹಲ ಮೂಡಿದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News