ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದ ಸಿದ್ದರಾಮಯ್ಯ

ನಮ್ಮ ಸರ್ಕಾರದ ಕಾಲದಲ್ಲಿ ಯಾರೋ ಪೊಲೀಸ್ ಅಧಿಕಾರಿಯೊಬ್ಬರು ಆರೋಪ ಹೊರಿಸಿದಾಗ ಸಚಿವರಾಗಿದ್ದ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Written by - Zee Kannada News Desk | Last Updated : Apr 12, 2022, 03:51 PM IST
  • ಕಮಿಷನ್ ಕಿರುಕುಳದ ಬಗ್ಗೆ ಮೃತ ಸಂತೋಷ್ ಪಾಟೀಲ್ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದರು
  • ಹಣ ಬಿಡುಗಡೆಗೆ ಈಶ್ವರಪ್ಪನವರ ಅಸೋಸಿಯೇಟ್ ಗಳು ಕಮಿಷನ್ ಕೇಳುತ್ತಿದ್ದಾರೆಂದು ಮೃತ ಸಂತೋಷ್ ಆರೋಪಿಸಿದ್ದರು
  • ಕೆ.ಎಸ್.ಈಶ್ವರಪ್ಪರನ್ನು ತಕ್ಷಣವೇ ಸಂಪುಟದಿಂದ ಕಿತ್ತುಹಾಕಿ ಅವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಬೇಕು
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದ ಸಿದ್ದರಾಮಯ್ಯ  title=
'ಇದು ಆತ್ಮಹತ್ಯೆ ಅಲ್ಲ, ಕೊಲೆ'

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇ.40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೇ ವಿಚಾರವಾಗಿ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ‘ಇದು ಆತ್ಮಹತ್ಯೆ ಅಲ್ಲ, ಕೊಲೆ’ ಎಂದು ಹೇಳಿದ್ದಾರೆ.

#MurderByBJP ಹ್ಯಾಶ್ ಟ್ಯಾಗ್ ಬಳಸಿರುವ ಸಿದ್ದರಾಮಯ್ಯ, ‘ಗುತ್ತಿಗೆದಾರನ ಆತ್ಮಹತ್ಯೆಯ ಆರೋಪಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತಕ್ಷಣ ಸಂಪುಟದಿಂದ ಕಿತ್ತುಹಾಕಿ ಅವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಬೇಕು. ರಾಜ್ಯ ಬಿಜೆಪಿ ಸರ್ಕಾರ ಈ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ

‘ನಮ್ಮ ಸರ್ಕಾರದ ಕಾಲದಲ್ಲಿ ಯಾರೋ ಪೊಲೀಸ್ ಅಧಿಕಾರಿಯೊಬ್ಬರು ಆರೋಪ ಹೊರಿಸಿದಾಗ ಸಚಿವರಾಗಿದ್ದ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿಲ್ಲವೇ? ಆಗ ಸಚಿವ ಜಾರ್ಜ್ ರಾಜೀನಾಮೆ ನೀಡಬೇಕೆಂದು ಇದೇ ಬಿಜೆಪಿ ನಾಯಕರು ಆಕಾಶ-ಭೂಮಿ ಒಂದು ಮಾಡಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

‘ಆತ್ಮಹತ್ಯೆಗೆ ಮೊದಲು ಮೃತ ಸಂತೋಷ್ ಪಾಟೀಲ್ ಬರೆದಿಟ್ಟ ಪತ್ರದಲ್ಲಿ ತನ್ನ ಸಾವಿಗೆ ಸಚಿವ ಈಶ್ವರಪ್ಪನವರೇ ಕಾರಣ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಹಣ ಬಿಡುಗಡೆ ಮಾಡದೆ ಇದ್ದರೆ ಆತ್ಮಹತ್ಯೆಯೊಂದೇ ಆಯ್ಕೆಯಾಗುತ್ತದೆ ಎಂದೂ ಹೇಳಿದ್ದರು. ಸಚಿವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಲು ಇನ್ನು ಯಾವ ಸಾಕ್ಷಿ ಬೇಕು?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ ಮಾಡುವುದು ನಿಮ್ಮ ಜನ್ಮಸಿದ್ದ ಹಕ್ಕೇ?: ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

‘ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಸಚಿವ ಈಶ್ವರಪ್ಪನವರು ಹೇಳಿದ್ದರು. ಬಡ್ಡಿಗೆ ಸಾಲ ತಂದು 4 ಕೋಟಿ ರೂ. ಅಂದಾಜಿನ 108 ಕಾಮಗಾರಿಗಳನ್ನು  ಪೂರ್ಣಗೊಳಿಸಿದ್ದೆವು. ಆದರೆ, ಹಣ ಬಿಡುಗಡೆ ಮಾಡಲು ಈಶ್ವರಪ್ಪನವರ ಅಸೋಸಿಯೇಟ್ ಗಳು ಕಮಿಷನ್ ಕೇಳುತ್ತಿದ್ದಾರೆ ಎಂದು ಮೃತ ಸಂತೋಷ್ ಪಾಟೀಲ್ ಪತ್ರ ಬರೆದಿದ್ದರು’ ಎಂದು ಟ್ವೀಟ್ ಮಾಡಿದ್ದಾರೆ.

‘ಇದು ಆತ್ಮಹತ್ಯೆ ಅಲ್ಲ, ಕೊಲೆ. ಕಮಿಷನ್ ಕಿರುಕುಳದ ಬಗ್ಗೆ ಮೃತ ಸಂತೋಷ್ ಪಾಟೀಲ್ ಪ್ರಧಾನಿ ಮೋದಿ ಅವರಿಂದ ಹಿಡಿದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರೆಗೆ ಎಲ್ಲರಿಗೂ ಪತ್ರ ಬರೆದಿದ್ದರು. ಹೀಗಿದ್ದರೂ ಅವರಿಗೆ ನ್ಯಾಯ ಸಿಗಲಿಲ್ಲ. ಆದ್ದರಿಂದ ಇವರೆಲ್ಲರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News