ಕೇಂದ್ರ ಸರ್ಕಾರದಿಂದ ಫೋನ್ ಕದ್ದಾಲಿಕೆ: ಸಿದ್ದರಾಮಯ್ಯ

ಯಡಿಯೂರಪ್ಪ ಹೇಳುವುದೆಲ್ಲಾ ಬರಿ ಸುಳ್ಳು, ಸುಳ್ಳು ಹೇಳಿಕೊಂಡು ತಿರುಗುವುದು ಅವರ ಅಭ್ಯಾಸ-ಸಿಎಂ.

Last Updated : Sep 19, 2017, 02:38 PM IST
ಕೇಂದ್ರ ಸರ್ಕಾರದಿಂದ ಫೋನ್ ಕದ್ದಾಲಿಕೆ: ಸಿದ್ದರಾಮಯ್ಯ title=

ಬೆಂಗಳೂರು: ಫೋನ್ ಕದ್ದಾಲಿಕೆ ಮಾಡುತ್ತಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ ಬಿಜೆಪಿ ಮುಖಂಡ ಆರ್.ಅಶೋಕ್ ಅವರ ಹೇಳಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ, ಪ್ರತಿಪಕ್ಷ ನಾಯಕರ ಫೋನ್ ಕದ್ದಾಲಿಸುವ ಕೆಲಸವನ್ನು ರಾಜ್ಯ ಸರ್ಕಾರ ಯಾವತ್ತೂ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ನಮ್ಮೆಲ್ಲರ ಫೋನ್ ಗಳ ಕರೆಯನ್ನು ಕದ್ದಾಲಿಸುತ್ತಿದೆ. ಇದು ಬಿಜೆಪಿಯವರಿಗೆ ಗೊತ್ತಿಲ್ಲ. ಸಣ್ಣ ವಿಚಾರ ಎಂಬ ಕಾರಣಕ್ಕೆ ನಾವೂ ಹೇಳುವುದಿಲ್ಲ ಎಂದರು.

ಮುಖ್ಯಮಂತ್ರಿ, ಮಂತ್ರಿಗಳ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಯಡಿಯೂರಪ್ಪ ಹೇಳುತ್ತಲೇ ಇದ್ದಾರೆ. ಅವರ ಬಳಿ ಯಾವ ದಾಖಲೆಯೂ ಇಲ್ಲ, ಯಾವ ಭ್ರಷ್ಟಾಚಾರವೂ ನಡೆದಿಲ್ಲ ಎಂದು ಸಿಎಂ ಹೇಳಿದರು.

ಯಡಿಯೂರಪ್ಪ ಅವರು ಹೇಳುವುದೆಲ್ಲ ಸುಳ್ಳು. ಸುಳ್ಳು ಹೇಳಿಕೊಂಡು ತಿರುಗುವುದು ಅವರ ಅಭ್ಯಾಸ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರದಲ್ಲಿ ಬೇಕಾದರೂ ನಾನು ಸ್ಪರ್ಧಿಸಬಹುದು. ಎಲ್ಲೇ ಸ್ಪರ್ಧೆ ಮಾಡಿದರೂ ಗೆಲ್ಲುತ್ತೇನೆ. 

ಹೈಕಮಾಂಡ್ ಸೂಚಿಸುವ ಕ್ಷೇತ್ರದಿಂದ ಕಣಕ್ಕಿಳಿಯುತ್ತೇನೆ ಎಂದು ಮುಖ್ಯಮಂತ್ರಿಗಳು ಹೇಳಿದರು.

Trending News