PSI Recruitment Scam: ಸಿಎಂ ಬೊಮ್ಮಾಯಿ, ಗೃಹಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಈ ಹಿಂದಿನ ಎಫ್‌ಡಿಎ, ತೋಟಗಾರಿಕೆ, ಪಶು ಸಂಗೋಪನೆ, ಲೋಕೋಪಯೋಗಿ ಹಾಗೂ ಅಸಿಸ್ಟಂಟ್‌ ಪ್ರೊಫೆಸರ್‌ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯೂ ನ್ಯಾಯಬದ್ಧವಾಗಿ, ಕ್ರಮಬದ್ಧವಾಗಿ ನಡೆದಿಲ್ಲವೆಂಬ ಆರೋಪವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : Jul 5, 2022, 07:07 PM IST
  • ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಸಚಿವರು, ಆಡಳಿತ ಪಕ್ಷದ ನಾಯಕರು ಭಾಗಿಯಾಗಿದ್ದಾರೆ
  • ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು
  • ಹಗರಣದ ಸತ್ಯಾಂಶ ಹೊರಬರಬೇಕಾದರೆ ನ್ಯಾಯಾಂಗ ತನಿಖೆ ನಡೆಯಲೇಬೇಕೆಂದ ಸಿದ್ದರಾಮಯ್ಯ
PSI Recruitment Scam: ಸಿಎಂ ಬೊಮ್ಮಾಯಿ, ಗೃಹಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ title=
ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಚಿವರು, ಆಡಳಿತ ಪಕ್ಷದ ನಾಯಕರೇ ಭಾಗಿಯಾಗಿರುವುದರಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಇಡೀ ಹಗರಣದ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.

‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮಗ ವಿಜಯೇಂದ್ರ ಹಾಗೂ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪಗಳು ಕೇಳಿಬಂದಿದೆ. ಅಶ್ವತ್ಥ್ ನಾರಾಯಣ್‌ ಸಂಬಂಧಿಕರು ಮಾರ್ಕ್ಸ್‌ ತಿದ್ದಿ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಿದ್ದಾಗ ಸಿಐಡಿ ತನಿಖೆಯಿಂದ ಯಾವ ನ್ಯಾಯ ಸಿಗಲು ಸಾಧ್ಯ?’ ಎಂದು ಪ್ರಶ್ನಿಸಿದ್ದಾರೆ.

‘ಪಿಎಸ್ಐ ನೇಮಕಾತಿ ಉಸ್ತುವಾರಿ ವಹಿಸಿರುವ ಎಡಿಜಿಪಿ ಅಮೃತ್ ಪಾಲ್ ಅವರನ್ನೇ ಈಗ ಬಂಧಿಸಲಾಗಿದೆ. ಈ ಹಗರಣವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದಾಗ ಯಾವ ಭ್ರಷ್ಟಾಚಾರವೂ ನಡೆದಿಲ್ಲವೆಂದು ವಾದಿಸಿದ್ದ ಸಿಎಂ ಬೊಮ್ಮಾಯಿ, ಗೃಹಸಚಿವರು ಈಗೇನು ಹೇಳುತ್ತಾರೆ? ಪಿಎಸ್ಐ ನೇಮಕಾತಿ ಹಗರಣದ ತನಿಖೆಗೆ ಕಳೆದ ಮಾರ್ಚ್ ತಿಂಗಳಿನಿಂದ ನಾವು ಒತ್ತಾಯಿಸುತ್ತಾ ಬಂದಿದ್ದೇವೆ. ಈ ಹಗರಣವನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆ ಸಿಎಂಗೆ 2022ರ ಮೇ 26ರಂದು ಪತ್ರ ಬರೆದಿದ್ದೆ. ಈಗಲೂ ನಮ್ಮದು ಇದೇ ಒತ್ತಾಯ’ವೆಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: PSI Recruitment Scam: ಅಮೃತ್ ಪೌಲ್ ಆಫೀಸ್‌ನಲ್ಲೇ OMR ಶೀಟ್ ತಿದ್ದುಪಡಿ..?

‘ಜಿಲ್ಲಾಧಿಕಾರಿ ಮಂಜುನಾಥ್ ಬಂಧನದ ಪ್ರಕರಣದಲ್ಲಿ ತಮ್ಮನ್ನು ಯಾರೋ ಬೆದರಿಸಿದ್ದಾರೆಂದು ನ್ಯಾಯಮೂರ್ತಿಗಳೇ ಖುದ್ದಾಗಿ ವಿಚಾರಣೆ ಕಾಲದಲ್ಲಿ ಹೇಳಿದ್ದಾರೆ. ನ್ಯಾಯಮೂರ್ತಿಗಳನ್ನೇ ಬೆದರಿಸುವಷ್ಟು ಶಕ್ತಿಶಾಲಿ ವ್ಯಕ್ತಿ ಯಾರು? ಆ ವ್ಯಕ್ತಿಗೂ, ಸರ್ಕಾರಕ್ಕೂ ನೇರವಾದ ಸಂಬಂಧ ಇದೆಯೇ? ಎಂಬ ಬಗ್ಗೆ ತನಿಖೆಯಾಗಬೇಕು. ರಾಜ್ಯದ ಎಸಿಬಿಯನ್ನು ಕಲೆಕ್ಷನ್‌ ಬ್ಯೂರೋ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಎಸಿಬಿಯನ್ನು ನಾವೇ ಹುಟ್ಟುಹಾಕಿದ್ದು ನಿಜ, ಆದರೆ ಅದನ್ನು ದುರ್ಬಳಕೆ ಮಾಡಿಕೊಂಡು ನಮ್ಮ ರಾಜಕೀಯ ವಿರೋಧಿಗಳನ್ನು ಮಣಿಸಲು ರಾಜಕೀಯ ಅಸ್ತ್ರವನ್ನಾಗಿ ಮಾಡಿರಲಿಲ್ಲ’ವೆಂದು ಟೀಕಿಸಿದ್ದಾರೆ.

‘ಎಸಿಬಿ ಕರ್ನಾಟಕದಲ್ಲಿ ಮಾತ್ರವಲ್ಲ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಇದೆ. ರಾಜಸ್ಥಾನ, ಗುಜರಾತ್‍ನಲ್ಲಿ ಇಲ್ಲವಾ? ಅದನ್ನು ದುರ್ಬಳಕೆ ಮಾಡಿಕೊಂಡರೆ ಸರ್ಕಾರದ ತಪ್ಪಾಗುತ್ತದೆ. ಅದಕ್ಕೆ ಹಿಂದಿನ ಸರ್ಕಾರಗಳು  ಹೊಣೆಯಾಗುವುದಿಲ್ಲ. ಆರಗ ಜ್ಞಾನೇಂದ್ರ ತಮ್ಮ ಮಾತು ಮತ್ತು ನಡವಳಿಕೆಗಳಿಂದ ತಾವೊಬ್ಬ ಬೇಜವಾಬ್ದಾರಿ ಸಚಿವ ಎಂದು ಸಾಬೀತು ಪಡಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದಿದ್ದ ಕೋಮುಘರ್ಷಣೆ, ಮೈಸೂರಿನಲ್ಲಿ ನಡೆದ ಅತ್ಯಾಚಾರದ ಪ್ರಕರಣಗಳಲ್ಲಿ ಗೃಹಸಚಿವರ ಸುಳ್ಳು ಹೇಳಿಕೆಗಳೇ ಇದಕ್ಕೆ ಸಾಕ್ಷಿ. ಇಂಥವರು ಗೃಹ ಸಚಿವರಾಗಲು ಲಾಯಕಿಲ್ಲ ಎಂದು ಜನರೇ ಆಡಿಕೊಳ್ಳುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

‘ಸಚಿವ ಅಶ್ವತ್ಥ್ ನಾರಾಯಣ್ ಕಡೆಯ 5 ಜನ ಅಕ್ರಮವಾಗಿ ಆಯ್ಕೆಯಾಗಿದ್ದಾರೆ. ಅವರ ಸಂಬಂಧಿಕರು ಕೂಡ ಬಂಧನಕ್ಕೆ ಒಳಗಾಗಿದ್ದಾರೆ. ಸಿಐಡಿಯಿಂದ ಈ ಹಗರಣಗಳ ನಿಷ್ಪಕ್ಷಪಾತ ತನಿಖೆ ಸಾಧ್ಯವೇ? ನ್ಯಾಯಾಂಗ ತನಿಖೆಯಿಂದ ಮಾತ್ರ ಸತ್ಯ ಹೊರಗೆ ಬರಬಹುದು. ನೇಮಕಾತಿಯಲ್ಲಿ 300 ಜನರ ಓಎಮ್‌ಆರ್‌ ಶೀಟ್‍ಗಳನ್ನು ತಿದ್ದಲಾಗಿದೆ. ಒಬ್ಬೊಬ್ಬ ಅಭ್ಯರ್ಥಿಯಿಂದ 30 ಲಕ್ಷದಿಂದ 1 ಕೋಟಿ ರೂ.ವರೆಗೂ ವಸೂಲಿ ಮಾಡಲಾಗಿದೆ. ಈ ಹಣ ಬಿಜೆಪಿ  ಪಕ್ಷದ ಯಾವ ಮಂತ್ರಿಗೆ ಹೋಗಿದೆ? ಸಿಎಂಗೆ ಹೋಗಿದೆಯಾ ಇಲ್ಲವಾ? ಇವೆಲ್ಲ ಗೊತ್ತಾಗಬೇಕಾದರೆ ನ್ಯಾಯಾಂಗ ತನಿಖೆ ನಡೆಯಲೇಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಾಸ್ತು ಜೋತಿಷ್ಯದಿಂದ ನೊಂದವರಿಂದಲೇ ಚಂದ್ರಶೇಖರ್ ಗುರೂಜಿ ಹತ್ಯೆ?

‘ಈ ಹಿಂದಿನ ಎಫ್‌ಡಿಎ, ತೋಟಗಾರಿಕೆ, ಪಶು ಸಂಗೋಪನೆ, ಲೋಕೋಪಯೋಗಿ ಹಾಗೂ ಅಸಿಸ್ಟಂಟ್‌ ಪ್ರೊಫೆಸರ್‌ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯೂ ನ್ಯಾಯಬದ್ಧವಾಗಿ, ಕ್ರಮಬದ್ಧವಾಗಿ ನಡೆದಿಲ್ಲವೆಂಬ ಆರೋಪವಿದೆ. ಇವುಗಳನ್ನು ಸೇರಿಸಿಕೊಂಡು ತನಿಖೆಯಾಗಬೇಕು. ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಹಿಂದಿನ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುವುದು ಸಣ್ಣತನ ಮಾತ್ರವಲ್ಲ ನೀಚತನವೂ ಹೌದು. ನಮ್ಮ ಸರ್ಕಾರದ ಅವಧಿಯಲ್ಲಿ ಹಗರಣ ನಡೆದಿದ್ದರೆ ಆಗ ತನಿಖೆಗೆ ಒತ್ತಾಯ ಮಾಡಬೇಕಿತ್ತು, ಆಗ ಸುಮ್ಮನಿದ್ದು ಈಗ ಎಲ್ಲಾ ಕಾಲದಲ್ಲೂ ಹಗರಣ ನಡೆದಿದೆ ಎಂದು ಹೇಳಿ ತಪ್ಪಿಸಿಕೊಳ್ಳೋಕೆ ಆಗಲ್ಲ’ವೆಂದು ಸಿದ್ದರಾಮಯ್ಯ ಕುಟುಕಿದ್ದಾರೆ.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News