ಬೆಂಗಳೂರು: ಕರ್ನಾಟಕದ ದಕ್ಷಿಣ ಭಾಗದಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆ ನಿಲ್ಲುವಂತೆ ಪಕ್ಷದ ನಾಯಕರು ಒತ್ತಡ ಹೇರುತ್ತಿರುವ ಬೆನ್ನಲ್ಲೇ, ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿಗೆ ಸೋಲಿನ ಅಭಯ ಕಾಡುತ್ತಿದೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.
"ದಕ್ಷಿಣ ಭಾಗದ ಯಾವುದೇ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸಿದ್ದೇ ಆದರೆ, ಅದು ಕಾಂಗ್ರೆಸ್ ಪಕ್ಷದ ಪತನದ ಸಂಕೇತ. ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದಲೇ ರಾಹುಲ್ ಗಾಂಧಿ ದಕ್ಷಿಣ ಭಾರತದ ರಾಜ್ಯಗಳಿಂದ ಸ್ಪರ್ಧಿಸುವ ಆಲೋಚನೆಯಲ್ಲಿದ್ದಾರೆ" ಎಂದು ಬಿಜೆಪಿ ವಕ್ತಾರ ಜಿ.ಮಧುಸೂಧನ್ ಐಎಎನ್ಎಸ್ ಗೆ ಹೇಳಿದ್ದಾರೆ.
"ಒಂದು ವೇಳೆ ರಾಹುಲ್ ಗಾಂಧಿ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆ ನಡೆಸಿದ್ದು, ಅದರಲ್ಲೂ ದಕ್ಷಿಣ ಭಾಗದಲ್ಲಿ ಸ್ಪರ್ಧಿಸುವ ಯೋಚನೆಯಲ್ಲಿದ್ದಾರೆ ಎನ್ನುವುದಾದರೆ ಅದು ಪಕ್ಷದ ಬಲಹೀನತೆಯನ್ನು ಬಿಂಬಿಸುತ್ತದೆ" ಎಂದು ಮಧುಸೂದನ್ ಹೇಳಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಅಮೇಥಿ ಕ್ಷೇತ್ರದೊಂದಿಗೆ ಕರ್ನಾಟಕದಿಂದಲೂ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಒತ್ತಾಯಿಸಿದ್ದರು.
ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರು 1978 ರ ಉಪಚುನಾವಣೆಯಲ್ಲಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಬಳಿಕ 1999 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸೋನಿಯಾ ಗಾಂಧಿ ಅವರು ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ಸೋಲಿಸಿ, ಜಯಶಾಲಿಯಾಗಿದ್ದರು.